ಅಲೋಕ್ ಕುಮಾರ್ ಭೇಟಿ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಲ್ಲೋಲ ಕಲ್ಲೋಲ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾದ ಬೆನ್ನಲ್ಲೇ, ಜೈಲಿನಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಜೈಲಾಧಿಕಾರಿಗಳು ಹೈಪ್ರೊಫೈಲ್ ಕೈದಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಇನ್ನು ಪ್ರಜ್ವಲ್ ಮೊಬೈಲ್ ಬಿಸಿ ದರ್ಶನ್ ಹಾಗೂ ಪವಿತ್ರಾಗೌಡಗೂ ತಟ್ಟಿದೆ. ಹಾಗಾದ್ರೆ, ಜೈಲಿನಲ್ಲಿ ಏನೆಲ್ಲಾ ಬದಲಾವಣೆಯಾಗಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಬೆಂಗಳೂರು, (ಆಗಸ್ಟ್ 15): ಪ್ರಜ್ವಲ್ ರೇವಣ್ಣ (Prajwal Revanna) ಅವರ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ (parappana agrahara central jai)ಭದ್ರತೆಯನ್ನು ತೀವ್ರಗೊಳಿಸಿ ಹೈಪ್ರೊಫೈಲ್ ಕೈದಿಗಳ ಮೇಲೆ ಬಿಗಿ ಕಣ್ಗಾವಲು ಇಡಲಾಗಿದೆ. ಹೌದು….ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಭೇಟಿ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಲ್ಲೋಲ ಕಲ್ಲೋಲವಾಗಿದ್ದು, ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾಗೌಡಗೂ ಬಿಸಿ ತಟ್ಟಿದೆ. ನಟ ದರ್ಶನ್ ಅವರ ಬ್ಯಾರಕ್ ಸುತ್ತ ಸಿಸಿಟಿವಿ ಕಣ್ಗಾವಲು ಹೆಚ್ಚಿಸಲಾಗಿದ್ದು, ಸಹ-ಆರೋಪಿ ಪವಿತ್ರಾಗೌಡನನ್ನು 16 ಕೈದಿಗಳಿರುವ ಬ್ಯಾರಕ್ಗೆ ಶಿಫ್ಟ್ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಹತ್ವದ ಬದಲಾವಣೆ
ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ನಿನ್ನೆ (ಆಗಸ್ಟ್ 14) ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಭೇಟಿಯ ನಂತರ ಜೈಲಿನಲ್ಲಿ ಮತ್ತಷ್ಟು ಬಿಗಿ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಜ್ವಲ್ ರೇವಣ್ಣಗೆ ನೀಡುತ್ತಿದ್ದ ಸವಲತ್ತುಗಳನ್ನು ಸ್ಥಗಿತಗೊಳಿಸಲಾಗಿದ್ದು, ಈಗಾಗಲೇ 22 ಜನರಿದ್ದ ಬ್ಯಾರಕ್ಗೆ ಶಿಫ್ಟ್ ಮಾಡಲಾಗಿದೆ. ಇನ್ನು ಇದೀಗ ಅವರ ಮೇಲಿನ ಕಣ್ಗಾವಲನ್ನು ಅಧಿಕಾರಿಗಳು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಇದನ್ನೂ ನೋಡಿ: ಪರಪ್ಪನ ಅಗ್ರಹಾರ ಜೈಲು ಪರಿಶೀಲಿಸಿದ ಡಿಜೆಪಿ: ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್
ದರ್ಶನ್ ಹಾಗೂ ಪವಿತ್ರಾಗೌಡಗೂ ತಟ್ಟಿದ ಬಿಸಿ
ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾಗೌಡ ಅವರ ಮೇಲೆಯೂ ಜೈಲಾಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ. ಜೈಲಿನ ಭದ್ರತಾ ಹಿತದೃಷ್ಟಿಯಿಂದ ಪವಿತ್ರಾಗೌಡ ಅವರ ಬ್ಯಾರಕ್ ಅನ್ನು ಅಧಿಕಾರಿಗಳು ಬದಲಾಯಿಸಿದ್ದಾರೆ. ಇಷ್ಟು ದಿನ ಕೇವಲ ಇಬ್ಬರು ಖೈದಿಗಳಿದ್ದ ಬ್ಯಾರಕ್ನಲ್ಲಿದ್ದ ಪವಿತ್ರಾಗೌಡ ಅವರನ್ನು ಈಗ ಬೇರೆಡೆಗೆ ಸ್ಥಳಾಂತರಿಸಲಾಗಿದ್ದು, ಬರೋಬ್ಬರಿ 16 ಖೈದಿಗಳಿರುವ ಬ್ಯಾರಕ್ಗೆ ಶಿಫ್ಟ್ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಬ್ಯಾರಕ್ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದರ್ಶನ್ ಅವರ ಪ್ರತಿಯೊಂದು ಚಟುವಟಿಕೆಯ ಮೇಲೆ ಕಣ್ಣಿಡಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಿಸಿಟಿವಿ ಕಣ್ಗಾವಲಿನ ಮೂಲಕ ಅಧಿಕಾರಿಗಳು ನಿರಂತರವಾಗಿ ಜೈಲಿನ ಚಟುವಟಿಕೆಗಳನ್ನು ಗಮನಿಸುತ್ತಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಇರುವ ಬ್ಯಾರಕ್ಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಪ್ರದೂಷ್ನನ್ನು ಈಗಾಗಲೇ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.




