ವಿದ್ಯುತ್ ಗುತ್ತಿಗೆದಾರರ ನಿರ್ಲಕ್ಷ್ಯ, ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಸಾವು

ಮೆಸ್ಕಾಂ ವಿದ್ಯುತ್ ಗುತ್ತಿಗೆದಾರರ ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ಬೈಕ್ ಸವಾರ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಗುತ್ತಿಗೆದಾರರ ನಿರ್ಲಕ್ಷ್ಯ, ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಸಾವು
ಘಟನೆ ನಡೆದ ಸ್ಥಳ

Updated on: May 18, 2021 | 9:17 AM

ಉಡುಪಿ: ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಹೇರೂರು ಗ್ರಾಮದಲ್ಲಿ ನಡೆದಿದೆ. ಶೇಖರ್ ಶೆಟ್ಟಿ(68) ಮೃತ ವೃದ್ಧ. ಗುತ್ತಿಗೆದಾರನ ನಿರ್ಲಕ್ಷ್ಯದಿಂದ ವೃದ್ಧ ಮೃತಪಟ್ಟ ಆರೋಪ ಕೇಳಿ ಬಂದಿದೆ.

ಬೈಂದೂರು ತಾಲೂಕು ಹೇರೂರು ಗ್ರಾಮದ ಹೇರೂರು-ಅರೆಹೊಳೆ ರಸ್ತೆಯಲ್ಲಿ ಗಾಳಿ ಮಳೆಗೆ ಬಿದ್ದಿದ್ದ ವಿದ್ಯುತ್ ತಂತಿಗಳ ದುರಸ್ತಿ ಕಾರ್ಯ ನಡೆಯುತ್ತಿತ್ತು. ಈ ವೇಳೆ ಯಾವುದೇ ಮುಂಜಾಗ್ರತಾ ಫಲಕ ಅಳವಡಿಸದ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ಗಮನಿಸದ ಆಲಗದ್ದೆ ಯರುಕೋಣಿ ನಿವಾಸಿ ಶೇಖರ್ ಶೆಟ್ಟಿ ಬೈಕ್ ಮೂಲಕ ರಸ್ತೆ ಬದಿಯಿಂದ ಹಾದು ಹೋಗಿದ್ದಾರೆ. ಈ ವೇಳೆ ನೇತಾಡುತ್ತಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಶೇಖರ್ ಶೆಟ್ಟಿ ಪ್ರಾಣ ಕಳೆದುಕೊಂಡಿದ್ದಾರೆ.

ಮೆಸ್ಕಾಂ ವಿದ್ಯುತ್ ಗುತ್ತಿಗೆದಾರರ ನಿರ್ಲಕ್ಷ್ಯ, ಬೇಜವಾಬ್ದಾರಿತನದಿಂದ ಬೈಕ್ ಸವಾರ ಮೃತಪಟ್ಟಿದ್ದಾನೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ಸರಣಿ ಅಪಘಾತ
ಇನ್ನು ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಕಾರು, ಆಟೋ, ಬೈಕ್ ಮಧ್ಯೆ ಡಿಕ್ಕಿಯಾಗಿ 8 ಜನರಿಗೆ ಗಾಯಗಳಾಗಿವೆ. ಬೆಳಗಾವಿ ಜಿಲ್ಲೆ ಗೋಕಾಕ್‌ನ ಬ್ಯಾಳಿ ಕಾಟಾ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು ಓವರ್ ಸ್ಪೀಡ್ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ 8 ಜನರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಗೋಕಾಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಆಂಧ್ರದ ಪೂರ್ವ ಗೋದಾವರಿಯಲ್ಲಿ ಕಾರು ಅಪಘಾತ; ಮಗು ಸೇರಿ ನಾಲ್ವರ ಸಾವು