ಅಧಿಕಾರ ಹಂಚಿಕೆ ಒಪ್ಪಂದ: ಡಿಕೆ ಶಿವಕುಮಾರ್ ಹೇಳಿಕೆ ಅಲ್ಲಗಳೆದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮತ್ರಿ ಹುದ್ದೆಯ ಅಧಿಕಾರ ಹಂಚಿಕೆ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಅಧಿಕಾರ ಹಂಚಿಕೆಯ ಒಪ್ಪಂದ ಆಗಿರುವುದು ನಿಜ, ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಟಕ್ಕರ್ ನೀಡಿದ್ದಾರೆ. ಯಾವುದೇ ಒಪ್ಪಂದ ಆಗಿಲ್ಲ ಎಂದು ಅವರು ಹೇಳಿದ್ದಾರೆ. ಡಿಕೆಶಿ ಏನು ಹೇಳಿದ್ದರು? ಸಿದ್ದರಾಮಯ್ಯ ಹೇಳಿದ್ದೇನು? ಇಲ್ಲಿದೆ ವಿವರ.

ಅಧಿಕಾರ ಹಂಚಿಕೆ ಒಪ್ಪಂದ: ಡಿಕೆ ಶಿವಕುಮಾರ್ ಹೇಳಿಕೆ ಅಲ್ಲಗಳೆದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ & ಡಿಕೆ ಶಿವಕುಮಾರ್
Edited By:

Updated on: Dec 04, 2024 | 2:11 PM

ಮಂಡ್ಯ, ಡಿಸೆಂಬರ್ 4: ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ, ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದಾರೆ. ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬಂಡಬೋಯಿನಹಳ್ಳಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ. ನಮ್ಮ ಮಧ್ಯೆ ಯಾವ ಒಪ್ಪಂದವೂ ಆಗಿಲ್ಲ ಎಂದರು.

ಏನು ಹೇಳಿದ್ದರು ಡಿಕೆ ಶಿವಕುಮಾರ್?

ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ಕರ್ನಾಟಕದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಅಧಿಕಾರ ಹಂಚಿಕೆಗೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ. ಸಮಯ ಬಂದಾಗ ಆ ಬಗ್ಗೆ ಬಹಿರಂಗಪಡಿಸುವೆ ಎಂದು ಹೇಳಿದ್ದರು. ನಾನೀಗ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಈಗ ಮಾತನಾಡುವುದಿಲ್ಲ. ರಾಜ್ಯದ ಹಿತಕ್ಕಾಗಿ ಸಿದ್ದರಾಮಯ್ಯ ಹಾಗೂ ನಾನು ಜತೆಯಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹಾಗೆಂದು, ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಿದ್ದು ನಿಜ. ಆ ಕುರಿತು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ತಿಳಿಸುವೆ ಎಂದಿದ್ದರು.

ಕಾಂಗ್ರೆಸ್ ಪಕ್ಷ, ಸ್ವಾಭಿಮಾನಿ ಒಕ್ಕೂಟದ ವತಿಯಿಂದ ಸಮಾವೇಶ: ಸಿಎಂ

ನಾಳೆ ಹಾಸನದಲ್ಲಿ ಕಾಂಗ್ರೆಸ್ ಪಕ್ಷ, ಸ್ವಾಭಿಮಾನಿ ಒಕ್ಕೂಟದ ವತಿಯಿಂದ ಸಮಾವೇಶ ನಡೆಯುತ್ತದೆ. ಸಮಾವೇಶದ ಹೆಸರಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಮಾವೇಶದ ಹೆಸರನ್ನು ‘ಜನ ಕಲ್ಯಾಣ ಸಮಾವೇಶ’ ಎಂದು ಬದಲಾಯಿಸಲಾಗಿದೆ ಎಂಬ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ.

ಸಮಾವೇಶಕ್ಕೆ ಜನರನ್ನು ಕರೆತರುವ ಕೆಲಸವನ್ನು ಸ್ವಾಭಿಮಾನಿ ಒಕ್ಕೂಟದವರು ಮಾಡುತ್ತಾರೆ. ಸ್ವಾಭಿಮಾನಿ ಒಕ್ಕೂಟ, ಕಾಂಗ್ರೆಸ್​​ ಎರಡೂ ಸೇರಿ ಸಮಾವೇಶ ನಡೆಸುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಹಾಸನ ಕಾಂಗ್ರೆಸ್ ಕಾರ್ಯಕ್ರಮದ ದಿಕ್ಕೇ ಬದಲು: ಸ್ವಾಭಿಮಾನಿ ಅಲ್ಲ ಜನಕಲ್ಯಾಣ ಸಮಾವೇಶ ಎಂದ ಡಿಕೆ ಶಿವಕುಮಾರ್

ಮತ್ತೊಂದೆಡೆ, ಸಚಿವ ಸಂಪುಟ ಪುನಾರಚನೆ ಬಗ್ಗೆಯೂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸದ್ಯಕ್ಕೆ ಸಂಪುಟ ಪುನಾರಚನೆ ಇಲ್ಲ. ಸಚಿವ ಸಂಪುಟ ಪುನಾರಚನೆ ಬಗ್ಗೆ ನಾನು ಹೇಳಿಲ್ಲ. ಆ ಬಗ್ಗೆ ಯಾರು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ಹೈಕಮಾಂಡ್ ಸೂಚನೆ ನೀಡಬೇಕು, ಬಳಿಕ ನಾನು ನಿರ್ಧರಿಸುತ್ತೇನೆ. ಈಗ ಹೈಕಮಾಂಡ್ ಹೇಳಿಲ್ಲ, ನಾನು ತೀರ್ಮಾನವನ್ನೂ ತೆಗೆದುಕೊಂಡಿಲ್ಲ ಎಂದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:00 pm, Wed, 4 December 24

Loading...
Unable to load recommendations.
Follow Us