ಕಾವೇರಿ ಪ್ರಾಧಿಕಾರದ ಆದೇಶ ವಿರುದ್ಧ ಭುಗಿಲೆದ್ದ ಆಕ್ರೋಶ; ಶನಿವಾರ ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿ ಸಭೆ

ಪ್ರಾಧಿಕಾರದ ಆದೇಶದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಪ್ರಾಧಿಕಾರದ ರದ್ಧತಿಗೆ ಕಾನೂನು ಹೋರಾಟ ಮಾಡಬೇಕು ಎಂದು ಹೇಳಿರುವ ಸಮಿತಿ, ಯಾವುದೇ ಕಾರಣಕ್ಕೂ ನೀರು ಬಿಡೋದಿಲ್ಲ ಅನ್ನೋ ದೃಢ ನಿರ್ಧಾರ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದೆ.

ಕಾವೇರಿ ಪ್ರಾಧಿಕಾರದ ಆದೇಶ ವಿರುದ್ಧ ಭುಗಿಲೆದ್ದ ಆಕ್ರೋಶ; ಶನಿವಾರ ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿ ಸಭೆ
ಮಂಡ್ಯದಲ್ಲಿ ರಾಜಕಾರಣಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು
Edited By:

Updated on: Sep 29, 2023 | 9:19 PM

ಮಂಡ್ಯ, ಸೆಪ್ಟೆಂಬರ್ 29: ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರದ (CWMA) ಆದೇಶ ಹಿನ್ನೆಲೆಯಲ್ಲಿ ಶನಿವಾರ ಮಂಡ್ಯ (Mandya) ಜಿಲ್ಲಾ ಹಿತರಕ್ಷಣಾ ಸಮಿತಿ ಸಭೆ ಕರೆಯಲಾಗಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸಭೆ ನಡೆಯಲಿದ್ದು ಹಾಲಿ, ಮಾಜಿ ಶಾಸಕರು, ಜನಪ್ರತಿನಿಧಿಗಳು, ಮುಖಂಡರಿಗೆ ಆಹ್ವಾನ ನೀಡಲಾಗಿದೆ. ನಾಳೆಯ ಸಭೆಯಲ್ಲಿ ಮುಂದಿನ ಹೋರಾಟದ ರೂಪು ರೇಷೆ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಸಮಿತಿ ತಿಳಿಸಿದೆ.

ಪ್ರಾಧಿಕಾರದ ಆದೇಶದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಪ್ರಾಧಿಕಾರದ ರದ್ಧತಿಗೆ ಕಾನೂನು ಹೋರಾಟ ಮಾಡಬೇಕು ಎಂದು ಹೇಳಿರುವ ಸಮಿತಿ, ಯಾವುದೇ ಕಾರಣಕ್ಕೂ ನೀರು ಬಿಡೋದಿಲ್ಲ ಅನ್ನೋ ದೃಢ ನಿರ್ಧಾರ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದೆ. ಜತೆಗೆ, ಈ ಎಲ್ಲಾ ವಿಚಾರಗಳ ಬಗ್ಗೆ ನಾಳೆಯ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಿದೆ.

ಪ್ರತಿಭಟನೆಗೆ ಆಗಮಿಸಿದ ಶ್ವಾನ!

ಇನ್ನು ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಮಂಡ್ಯ ಜಿಲ್ಲಾ ‌ರೈತ ಹಿತರಕ್ಷಣಾ ಸಮಿತಿ ಶುಕ್ರವಾರ ನಡೆಸಿದ ಧರಣಿ ವೇಳೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಭಾವಚಿತ್ರ ಬಾಯಲ್ಲಿ ಕಚ್ಚಿಕೊಂಡು ಬಂದ ಶ್ವಾನ ಅಚ್ಚರಿಮೂಡಿಸಿತು. ರ‍್ಯಾಂಬೋ ಹೆಸರಿನ ಶ್ವಾನ ಧರಣಿ ಸ್ಥಳದಲ್ಲಿ ಕುಳಿತು ನೋಡುಗರಲ್ಲಿ ಬೆರಗು ಹುಟ್ಟಿಸಿತು.

ಹಸಿಮೆಣಸಿನಕಾಯಿ ತಿಂದು ಆಕ್ರೋಶ

ತಮಿಳುನಾಡಿಗೆ ನೀರು ಹರಿಸುವಂತೆ ಪ್ರಾಧಿಕಾರದ ಆದೇಶ ಖಂಡಿಸಿ ಹಸಿಮೆಣಸಿನಕಾಯಿ ತಿಂದು ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರಾಧಿಕಾರ ರೈತರ ಬಾಯಿಗೆ ಮೆಣಸಿನಕಾಯಿ ಹಾಕಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಶಿವಕುಮಾರ್ ಆರಾಧ್ಯ ಎಂಬಾತ ಮೆಣಸಿನಕಾಯಿ ತಿಂದು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನು ಕೆಲವರು ರಸ್ತೆಯಲ್ಲಿ ಉರುಳುಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ವಿರುದ್ಧ ಘೋಷಣೆ ಕೂಗಿದರು.

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು: ತಜ್ಞರು ಕೊಟ್ಟ ಸಲಹೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ, ಇಲ್ಲಿದೆ ವಿವರ

ರೈತ ನಾಯಕಿ ಸುನಂದಾ ಜಯರಾಂ ಆಕ್ರೋಶ

ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ಬಾಯಿ ಬಿಟ್ಟು ಮಾತನಾಡಬೇಕು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸುತ್ತೇವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚೇಂದ್ರೀಯಗಳೆಲ್ಲವೂ ಸತ್ತು ಹೋಗಿದೆ ಎಂದು ಮಂಡ್ಯ ನಗರದಲ್ಲಿ ರೈತ ನಾಯಕಿ ಸುನಂದಾ ಜಯರಾಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us