ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್

| Updated By: ರಮೇಶ್ ಬಿ. ಜವಳಗೇರಾ

Updated on: Dec 26, 2023 | 7:14 PM

ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆಯಲ್ಲಿ ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ ಅವರು ಮುಸ್ಲಿಮ್ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದು, ಇದೀಗ ಇದು ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯದ ವಿವಿಧೆಡೆ ಮುಸ್ಲಿಂ ಸಮುದಾಯ ಪ್ರತಿಭಟನೆಗಳಿದಿದ್ದಾರೆ. ಇನ್ನು ಈ ಸಂಬಂಧ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್
Follow us on

ಮೈಸೂರು, (ಡಿಸೆಂಬರ್ 26): ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ  ಪ್ರಭಾಕರ್ ಭಟ್ ((Kalladka Prabhakar Bhat) ) ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ  ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯ ಪೊಲೀಸರು IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹನುಮ ಜಯಂತಿ ಆಂಗವಾಗಿ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ವಿರುದ್ದ ನಜ್ಮಾ ದೂರು ನೀಡಿದ್ದು, ಪ್ರಭಾಕರ್ ಭಟ್‌ ವಿರುದ್ಧ ರೌಡಿ ಶೀಟ್ ತೆರೆಯುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೋದಿಯಿಂದಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಸಿಕ್ಕಿದ್ದು: ಪ್ರಭಾಕರ್‌ ಭಟ್

ಮಹಿಳೆಯರನ್ನ ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನ ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿ, ಸಾವು ನೋವುಗಳನ್ನ ಪ್ರಚೋದಿಸಿದ ವೃತ್ತಿಪರ ಕ್ರಿಮಿನಲ್ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಪ್ರಭಾಕರ್ ಭಟ್ ಹೇಳಿದ್ದೇನು?

ಮುಸ್ಲಿಂ ಸಮುದಾಯದಲ್ಲಿ ಮಹಿಳೆಯರಿಗೆ ತ್ರಿವಳಿ ತಲಾಕ್ (Triple Talaq) ಹೇಳುವ ಅವಕಾಶ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ( Narendra Modi) ಅವರ ಸರ್ಕಾರದಿಂದಾಗಿ ತ್ರಿವಳಿ ತಲಾಕ್ ರದ್ದಾಗಿದೆ. ಬಹು ಪತ್ನಿತ್ವ ಪಿಡುಗು ಮತ್ತು ತ್ರಿವಳಿ ತಲಾಕ್‌ ಕಾಟದಿಂದಾಗಿ ಈ ಹಿಂದೆ ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ತ್ರಿವಳಿ ತಲಾಕ್‌ ರದ್ದುಪಡಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ