ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ: ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನವಿದೆ ಎಂದು ಕಳವಳ ವ್ಯಕ್ತಪಡಿಸಿರುವ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ, ಭ್ರಷ್ಟ ಅಧಿಕಾರಿಗಳಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯದ ಮುನ್ಸೂಚನೆಯನ್ನೂ ನೀಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ನೆನಪಿಸಿದ್ದಾರೆ.

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ: ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ

Updated on: May 22, 2026 | 7:00 AM

ಮಂಡ್ಯ, ಮೇ 22: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಬದಲಾವಣೆ ಅಧಿಕಾರಿಗಳಿಂದಲೂ, ನಾಗರಿಕರಿಂದಲೂ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಾಂಶಗಳು

  • ರಾಜ್ಯದ ಪ್ರತಿ ಇಲಾಖೆಯಲ್ಲೂ ಮಿತಿ ಮೀರಿದ ಭ್ರಷ್ಟಾಚಾರ
  • ದೇಶದ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ
  • ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿಕೆ

ರಾಜ್ಯದ 16 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 1,281 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿರುವುದಾಗಿ ತಿಳಿಸಿರುವ ಅವರು, ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಬಿಡುಗಡೆ ಮಾಡಿರುವ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕವನ್ನು ಉಲ್ಲೇಖಿಸಿದ್ದಾರೆ. 180 ರಾಷ್ಟ್ರಗಳ ಪೈಕಿ ಭಾರತ 91ನೇ ಸ್ಥಾನದಲ್ಲಿದ್ದು, 100ರಲ್ಲಿ 39 ಅಂಕಗಳನ್ನು ಪಡೆದಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಭ್ರಷ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ವೀರಪ್ಪ, ಅಧಿಕಾರಿಗಳನ್ನು ಜನಸೇವೆಗೆ ನೇಮಿಸಲಾಗಿದೆ. ಅವರು ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗುಡುಗಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ನೆನಪಿಸಿದ್ದಾರೆ.

ಇದನ್ನೂ ಓದಿ: ಅಮ್ಮ-ಅಪ್ಪ ಸ್ವಾರಿ, ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ; ಪತ್ರ ಬರೆದಿಟ್ಟು ಸಹೋದರಿಯರು ನಾಪತ್ತೆ

2024ರಲ್ಲಿ ಕಾಂಗ್ರೆಸ್ ಸರ್ಕಾರದಿಂದ ಉಪಲೋಕಾಯುಕ್ತರಾಗಿ ನೇಮಕಗೊಂಡಿದ್ದ ನ್ಯಾಯಮೂರ್ತಿ ಬಿ. ವೀರಪ್ಪ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದ ವೇಳೆ ಲೋಕ ಅದಾಲತ್‌ಗಳ ಮೂಲಕ ಒಂದು ಕೋಟಿಗೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ನಿರ್ಮಿಸಿದ್ದರು. ಇದೇ ವೇಳೆ ಟ್ರಾಫಿಕ್ ದಂಡಗಳಿಗೆ ಶೇ.50 ರಿಯಾಯಿತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರ ರೂಪಿಸುವಲ್ಲೂ ಅವರು ಪ್ರಮುಖ ಪಾತ್ರವಹಿಸಿದ್ದರು ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us