ಮಂಡ್ಯ: ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನಕ್ಕೂ ವಕ್ಫ್ ಕಂಟಕ, ಗ್ರಾಮಸ್ಥರಿಂದ ಹೋರಾಟದ ಎಚ್ಚರಿಕೆ

ರೈತರ ಆಸ್ತಿ ಪಹಣಿಯಲ್ಲಿ ಬರುತ್ತಿದ್ದ ವಕ್ಫ್ ಹೆಸರಿನ ಬಿಸಿ ಹಿಂದೂ ಮಠ ಮಂದಿರಗಳಿಗೂ ತಟ್ಟಿತ್ತು. ಇದೀಗ ದೇವಾಲಯಗಳಿಗೂ ಸಮಸ್ಯೆ ಎದುರಾಗತೊಡಗಿದೆ. ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನಕ್ಕೂ ವಕ್ಫ್ ಕಂಟಕ ಎದುರಾಗಿದೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ವಿವರ ಇಲ್ಲಿದೆ.

ಮಂಡ್ಯ: ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನಕ್ಕೂ ವಕ್ಫ್ ಕಂಟಕ, ಗ್ರಾಮಸ್ಥರಿಂದ ಹೋರಾಟದ ಎಚ್ಚರಿಕೆ
ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನ
Edited By:

Updated on: Nov 01, 2024 | 7:38 AM

ಮಂಡ್ಯ, ನವೆಂಬರ್ 1: ದಕ್ಷಿಣ ಕರ್ನಾಟಕದಲ್ಲಿಯೂ ವಕ್ಫ್ ಆತಂಕ ಎದುರಾಗಿರುವುದು ಮತ್ತು ಮಂಡ್ಯದ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಿರ್ದಿಷ್ಟ ಜಮೀನನ್ನು ತಮ್ಮ ಹೆಸರಿಗೆ ಪಹಣಿ ಮಾಡಿಕೊಡುವಂತೆ ಮುಸ್ಲಿಮರು ಮನವಿ ಮಾಡಿರುವ ಬಗ್ಗೆ ಗುರುವಾರ ವರದಿಯಾಗಿತ್ತು. ಇದೀಗ ಸಮಸ್ಯೆ ಮತ್ತೊಂದು ಹಂತಕ್ಕೆ ತಲುಪಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಶ್ರೀ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಪಹಣಿಯಲ್ಲಿಯೂ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ತಿಳಿದುಬಂದಿದೆ. ಇದು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ.

ರಾಜ್ಯದಾದ್ಯಂತ ವಕ್ಫ್ ವಿಚಾರದ ಬಗ್ಗೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ದೇಗುಲದ ಆಸ್ತಿ ದಾಖಲೆ ನೋಡಿದ ಗ್ರಾಮಸ್ಥರಿಗೆ ಶಾಕ್ ಆಗಿದೆ. ಇದರಿಂದಾಗಿ ಅವರು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ಕಳೆದ ಹಲವು ವರ್ಷಗಳಿಂದ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಹೆಸರು ಪಹಣಿಯಲ್ಲಿ ಬರುತ್ತಿತ್ತು. ತಲತಲಾಂತರದಿಂದ ಚಿಕ್ಕಮ್ಮ ಚಿಕ್ಕದೇವಿಗೆ ಗ್ರಾಮದ ಜನರಿಂದ ಪೂಜಾಕೈಂಕರ್ಯ ನೆರವೇರುತ್ತಿದೆ. ಹಲವು ದಶಕಗಳ ಹಿಂದೆಯೇ ಗ್ರಾಮಸ್ಥರ ಸಹಾಯದಿಂದ ದೇಗುಲ ನಿರ್ಮಾಣವಾಗಿದೆ. ಭೂ ದಾಖಲೆ ಕೂಡ ಚಿಕ್ಕಮ್ಮ ಚಿಕ್ಕದೇವಿ ಹೆಸರಲ್ಲಿಯೇ ಇತ್ತು ಎನ್ನುತ್ತಿದ್ದಾರೆ ಗ್ರಾಮಸ್ಥರು. ಆದರೆ, ಒಂದು ವರ್ಷದ ಹಿಂದೆ ದಿಢೀರಾಗಿ ‘ವಕ್ಫ್ ಆಸ್ತಿ’ ಎಂದು ನಮೂದಿಸಲಾಗಿದೆ. ಸರ್ವೆ ನಂಬರ್ 74 ರಲ್ಲಿರುವ ದೇಗುಲ ಹಾಗೂ ದೇಗುಲಕ್ಕೆ ಸೇರಿ 6 ಗುಂಟೆ ಜಾಗ ವಕ್ಫ್ ಆಸ್ತಿ ಎಂದು ನಮೂದಾಗಿದೆ.

ಗ್ರಾಮಸ್ಥರಿಂದ ಹೋರಾಟದ ಎಚ್ಚರಿಕೆ

ವಕ್ಫ್ ಒಡೆತನದಲ್ಲಿ ದೇಗುಲವಿದೆ ಎಂಬ ಆರ್‌ಟಿಸಿ ಹಾಗೂ‌ ಭೂ ದಾಖಲೆ ನೋಡಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಉಪವಿಭಾಗಧಿಕಾರಿ ಸೂಚನೆ ಮೇರೆಗೆ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ ಎಂದು ಆರೋಪಿಸಿರುವ ಅವರು, ನಮ್ಮೂರಲ್ಲಿ ಮುಸ್ಲಿಂ ಪ್ರಾಬಲ್ಯವೂ ಇಲ್ಲ. ದೇವಾಲಯದ ಹೆಸರಲ್ಲಿದ್ದ ಆಸ್ತಿಯನ್ನು ವಕ್ಫ್​​ಗೆ ಸೇರಿಸುವಂತೆ ಗ್ರಾಮಸ್ಥರು ಪತ್ರ ಬರೆದಿಲ್ಲ. ಆದರೆ ಅದ್ಹೇಗೆ ಗ್ರಾಮಸ್ಥರ ಗಮನಕ್ಕೂ ಬಾರದೇ ವಕ್ಫ್ ಆಸ್ತಿ ಎಂದು ದಾಖಲಾಗಿದೆ? ಇದರ ಹಿಂದೆ ಹಲವು ಅನುಮಾನ ಮೂಡುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲೂ ವಕ್ಫ್ ಸಮಸ್ಯೆ, ವಿಜಯಪುರದ ಮತ್ತೊಂದು ಮಠಕ್ಕೆ ಬಂತು ನೋಟಿಸ್

ದೇಗುಲವಲ್ಲದೇ ರೈತರ ಜಮೀನ ಮೇಲೂ ದಾಖಲೆ ತಿದ್ದಿರುವ ಶಂಕೆ ವ್ಯಕ್ತಪಡಿಸುತ್ತಿರುವ ಗ್ರಾಮಸ್ಥರು, ಕೂಡಲೇ ದೇಗುಲ ಹಾಗೂ ದೇಗುಲದ ಜಾಗ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿರುವುದನ್ನು ತಿದ್ದುಪಡಿ ಮಾಡಬೇಕು, ದೇಗುಲದ ಆಸ್ತಿಯೆಂದು ನಮೂದಾಗಬೇಕು ಎಂದು ಆಗ್ರಹಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು‌ ಎಂದು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಜಿಲ್ಲಾಡಳಿತದ ವಿರುದ್ಧ ಹೋರಾಟಕ್ಕಿಳಿಯುವ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us