Water Crisis: ಬೆಂಗಳೂರಿನಂತೆಯೇ ಸಂಕಷ್ಟಕ್ಕೀಡಾದ ಮಂಡ್ಯ, 38 ಹಳ್ಳಿಗಳಲ್ಲಿ ನೀರಿಗೆ ಹಾಹಾಕಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉದ್ಭವಿಸಿರುವ ನೀರಿನ ಬಿಕ್ಕಟ್ಟು ಈಗ ಹೊರ ಜಿಲ್ಲೆಗಳಿಗೂ ವ್ಯಾಪಿಸತೊಡಗಿದೆ. ಕಾವೇರಿ ಜಲಾನಯನ ಪ್ರದೇಶದ ಮಂಡ್ಯ ಜಿಲ್ಲೆಯಲ್ಲೀಗ ತೀವ್ರ ನೀರಿನ ಅಭಾವ ತಲೆದೋರಿದ್ದು, ಸುಮಾರು 38 ಹಳ್ಳಿಗಳು ಸಂಕಷ್ಟಕ್ಕೀಡಾಗಿವೆ. ಇದೀಗ ಜನರ ನೆರವಿಗೆ ಧಾವಿಸಿರುವ ಜಿಲ್ಲಾ ಆಡಳಿತ ಸಹಾಯವಾಣಿ ತೆರೆದಿದ್ದು, ನೀರು ಪೂರೈಕೆಗೆ ಕ್ರಮ ಕೈಗೊಳ್ಳುತ್ತಿದೆ.

Water Crisis: ಬೆಂಗಳೂರಿನಂತೆಯೇ ಸಂಕಷ್ಟಕ್ಕೀಡಾದ ಮಂಡ್ಯ, 38 ಹಳ್ಳಿಗಳಲ್ಲಿ ನೀರಿಗೆ ಹಾಹಾಕಾರ
ಸಾಂದರ್ಭಿಕ ಚಿತ್ರ

Updated on: Mar 28, 2024 | 7:24 AM

ಬೆಂಗಳೂರು, ಮಾರ್ಚ್​ 28: ಬೆಂಗಳೂರು ನಗರವು ತೀವ್ರ ನೀರಿನ ಬಿಕ್ಕಟ್ಟು (Bengaluru Water Crisis) ಎದುರಿಸುತ್ತಿರುವ ಸಂದರ್ಭದಲ್ಲೇ ಮಂಡ್ಯದಲ್ಲಿ (Mandya) ಕೂಡ ಇದೇ ರೀತಿಯ ಪರಿಸ್ಥಿತಿ ಕಂಡುಬಂದಿದ್ದು, 38 ಹಳ್ಳಿಗಳು ನೀರಿನ ಸಮಸ್ಯೆ ಎದುರಿಸುತ್ತಿವೆ. ಸದ್ಯ ಸ್ಥಳೀಯ ಅಧಿಕಾರಿಗಳು ಖಾಸಗಿ ಬೋರ್‌ವೆಲ್‌ಗಳನ್ನು ಸ್ವಾಧೀನಪಡಿಸಿಕೊಂಡು ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಗ್ರಾಮಗಳಿಗೆ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡಿದ್ದಾರೆ. ಕೆಲವೆಡೆ ಟ್ಯಾಂಕರ್‌ಗಳನ್ನು ಬಳಸಿಕೊಂಡು ನೀರು ಸರಬರಾಜು ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ಅಣೆಕಟ್ಟೆಗಳಲ್ಲಿ ನೀರಿನ ಮಟ್ಟ ಕುಸಿತ

ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟೆಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿರುವುದು ಗ್ರಾಮಗಳಲ್ಲಿ ನೀರಿನ ಕೊರತೆಗೆ ಕಾರಣವಾಗಿದೆ.

ಗ್ರಾಮಗಳಲ್ಲಿ ಹೊಸ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಮಂಡ್ಯದಲ್ಲಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು, ನೀರು ಸರಬರಾಜು ವಿಭಾಗದ ಸಹಾಯಕ ಎಂಜಿನಿಯರ್‌ಗಳ ಸಭೆ ನಡೆಯಿತು. ಮೂರು ತಿಂಗಳ ಕಾಲ ಪ್ರತಿ ತಿಂಗಳ ಮೊದಲ ಸೋಮವಾರ ಮತ್ತು ನಾಲ್ಕನೇ ಸೋಮವಾರ ಸಭೆ ನಡೆಸಿ ನೀರಿನ ಪರಿಸ್ಥಿತಿ ಪರಿಶೀಲಿಸಿ ಬಿಕ್ಕಟ್ಟು ಎದುರಿಸಲು ಕ್ರಮಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಮಂಡ್ಯದಲ್ಲಿ ಸಹಾಯವಾಣಿ

ನೀರಿನ ಬಿಕ್ಕಟ್ಟನ್ನು ಪರಿಹರಿಸಲು ಮಂಡ್ಯ ಜಿಲ್ಲಾಡಳಿತವು ಸಾರ್ವಜನಿಕರಿಗೆ ದೂರುಗಳನ್ನು ಸಲ್ಲಿಸಲು ಮತ್ತು ಸಾಧ್ಯವಾದಷ್ಟು ಬೇಗ ಪರಿಹಾರ ಪಡೆಯಲು ಕುಡಿಯುವ ನೀರಿನ ಸಹಾಯವಾಣಿಯನ್ನು ಪ್ರಾರಂಭಿಸಿದೆ. ಸಹಾಯವಾಣಿ (08232-229624) ಹಗಲಿರುಳು ಕಾರ್ಯನಿರ್ವಹಿಸಲಿದೆ ಎಂದು ಮಂಡ್ಯ ಜಿಲ್ಲಾಡಳಿತ ತಿಳಿಸಿದೆ.

ಕೆಆರ್‌ಎಸ್‌ ಅಣೆಕಟ್ಟೆ ಹಾಗೂ ಇತರೆ ಜಲಮೂಲಗಳಲ್ಲಿ ತಾಪಮಾನ ತೀವ್ರವಾಗಿ ಕುಸಿದಿದ್ದು, ನೀರಿನ ಮಟ್ಟ ಕುಸಿದಿದ್ದು, ಬೇಸಿಗೆ ಸವಾಲು ಎದುರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ ದಿನದ 24 ಗಂಟೆಯೂ ಕಾರ್ಯಾಚರಿಸುವಂತೆ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರಿನ ಜನ ಹೀಗೆಲ್ಲ ನೀರು ಉಳಿಸುತ್ತಿದ್ದಾರೆ ನೋಡಿ!

ಮಾರ್ಚ್ 12 ರವರೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ಮಂಡ್ಯ ಜಿಲ್ಲೆಯ ಎಂಟು ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ಒಂಬತ್ತು ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ತೆಗೆದುಕೊಳ್ಳಲಾಗಿದ್ದು, 10 ಗ್ರಾಮಗಳು ಈ ಬೋರ್‌ವೆಲ್‌ಗಳ ನೀರು ಸರಬರಾಜು ವ್ಯಾಪ್ತಿಗೆ ಒಳಪಟ್ಟಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us