
ಮಂಡ್ಯ, ಸೆಪ್ಟೆಂಬರ್ 10: ಮಂಡ್ಯ (Mandya) ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ ಇದೀಗ ಕರ್ನಾಟಕದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿತ್ತು ಎಂಬ ಆರೋಪದ ಕಾರಣ, ಪ್ರಕರಣ ರಾಜಕೀಯವಾಗಿಯೂ ಬಹಳಷ್ಟು ಸದ್ದು ಮಾಡುತ್ತಿದೆ. ಇದೀಗ, ಮದ್ದೂರಿನ ಚನ್ನೆಗೌಡ ಬಡಾವಣೆ ಬಳಿ ಇರುವ ಆ ಮಸೀದಿಯೇ ಅಕ್ರಮ ನಿರ್ಮಾಣ ಎಂಬ ಆರೋಪ ಮತ್ತೆ ಮುನ್ನೆಲೆಗೆ ಬಂದಿದೆ. ಮಸೀದಿಯನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗಿದೆ ಎಂದು ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯಕ್ಕೂ ಪತ್ರ ಬರೆದು ದೂರು ನೀಡಿದ್ದರು ಎಂಬುದು ತಿಳಿದುಬಂದಿದೆ.
ಅಕ್ರಮವಾಗಿ ಮಸೀದಿ ನಿರ್ಮಾಣ ಮಾಡಲಾಗಿದೆ. ಮಸೀದಿ ಮುಂದೆ ದೇವರ ಉತ್ಸವ, ಮೆರವಣಿಗೆಗಳು ಹಾದುಹೋಗಬಾರದೆಂಬ ನಿರ್ಬಂಧ ಹೇರಲಾಗಿದೆ. ಸತ್ತ ಹಿಂದೂಗಳ ಶವದ ಮುಂದೆ ತಮಟೆಯನ್ನೂ ಇಲ್ಲಿ ಬಾರಿಸದಂತೆ ನಿರ್ಬಂಧ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಸೀದಿಯಲ್ಲಿ ಮದರಸಾ ನಡೆಸಲಾಗುತ್ತಿದ್ದು, ದೇಶದ್ರೋಹ ಚಟುವಟಿಕೆಗಳು ಕೂಡ ನಡೆಯುತ್ತಿವೆ. ಅಪರಿಚಿತ ವ್ಯಕ್ತಿಗಳು ರಾತ್ರಿ ಸಮಯ ಓಡಾಡುತ್ತಿದ್ದಾರೆ. ಅಕ್ರಮ ಹಣಕಾಸು ವಹಿವಾಟು ಕೂಡ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳಿಗೆ ನೀಡಿದ ದೂರಿನಲ್ಲಿ ಸ್ಥಳೀಯರು ಉಲ್ಲೇಖಿಸಿದ್ದರು ಎನ್ನಲಾಗಿದೆ.
ಈ ಮಸೀದಿ 2025 ರ ಜೂನ್ ತಿಂಗಳಲ್ಲಿ ಉದ್ಘಾಟನೆಯಾಗಿತ್ತು. ಮಸೀದಿ ನಿರ್ಮಾಣ ಸಂದರ್ಭದಲ್ಲೇ, ಅಕ್ರಮವಾಗಿ ನಿರ್ಮಾಣ ಕಾರ್ಯ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಆಡಳಿತವನ್ನು ಎಚ್ಚರಿಸುವ ಕೆಲಸ ಮಾಡಿದ್ದರು. ಆದಾಗ್ಯೂ, ಮಸೀದಿ ನಿರ್ಮಾಣವಾಗಿದ್ದು, ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.
ಇದನ್ನೂ ಓದಿ: ಮಂಡ್ಯ: ಮದ್ದೂರು ಕಲ್ಲು ತೂರಾಟದ ಕಿಂಗ್ಪಿನ್ ಯಾರು? ಕೊನೆಗೂ ಮಾಹಿತಿ ಬಹಿರಂಗ
ಮಂಡ್ಯದ ಮದ್ದೂರಿನ ಚನ್ನೆಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿತ್ತು. ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಲಾಗಿತ್ತು. ಮಸೀದಿಯಿಂದಲೇ ಕಲ್ಲು ತೂರಾಟ ನಡೆದಿದೆ ಎಂದು ಹಿಂದೂಗಳು ಆರೋಪಿಸಿದ್ದರು. ಘಟನೆ ಖಂಡಿಸಿ ಸೋಮವಾರ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಸದ್ಯ, ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಪ್ರತಿಪಕ್ಷ ಬಿಜೆಪಿ ನಿಯೋಗ ಇಂದು ಮದ್ದೂರಿಗೆ ಭೇಟಿ ನೀಡುತ್ತಿದೆ. ಮತ್ತೊಂದೆಡೆ, ಪ್ರತಿಪಕ್ಷಗಳು ಘಟನೆಯನ್ನು ಕೋಮು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ ಎಂದು ಆಡಳಿತಾರೂಢ ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ.