ಮಂಡ್ಯ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಪರವಾನಗಿ ಕೊಡಿಸಲು ಲಂಚಕ್ಕೆ ಬೇಡಿಕೆ ಆರೋಪ

ಅಬಕಾರಿ ಇಲಾಖೆ ಭ್ರಷ್ಟಾಚಾರದ ಕೂಗು ತಣ್ಣಗಾಗುತ್ತಿದೆ ಎನ್ನುವಷ್ಟರಲ್ಲೇ ಮತ್ತೆ ಲಂಚದ ಆರೋಪ ಕೇಳಿಬಂದಿದೆ. ಮಂಡ್ಯದ ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್​​ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವ್ಯಕ್ತಿಯೊಬ್ಬರು ಸಾಕ್ಷ್ಯ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಮಂಡ್ಯ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಪರವಾನಗಿ ಕೊಡಿಸಲು ಲಂಚಕ್ಕೆ ಬೇಡಿಕೆ ಆರೋಪ
ಸಾಂದರ್ಭಿಕ ಚಿತ್ರ
Edited By:

Updated on: Nov 28, 2024 | 11:52 AM

ಮಂಡ್ಯ, ನವೆಂಬರ್ 28: ಮಂಡ್ಯ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪಗಳು ಇದೀಗ ಬೆಳಕಿಗೆ ಬಂದಿವೆ. ಸಿಎಲ್-7 ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪಗಳು ಕೇಳಿಬಂದಿವೆ. ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್​​ಗೆ ಅನುಮತಿ ಪಡೆಯಲು ಲಕ್ಷ್ಮಮ್ಮ ಎಂಬುವವರ ಹೆಸರಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಲಕ್ಷ್ಮಮ್ಮ ಪುತ್ರ ಪುನೀತ್ ಎಂಬವರು ಸಲ್ಲಿಸಿದ್ದರು. ಆರಂಭದಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು, ಮತ್ತು ನಂತರ ಅವರು ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿದ್ದರು.

ಬಳಿಕ, ಅಬಕಾರಿ ಇಲಾಖೆ ಅಧಿಕಾರಿಗಳು 40 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದಾರೆ ಎಂದು ಪುನೀತ್ ಆರೋಪಿಸಿದ್ದಾರೆ. ನಂತರ ಈ ಮೊತ್ತವನ್ನು 20 ಲಕ್ಷ ರೂ.ಗೆ ಇಳಿಕೆ ಮಾಡಲಾಗಿದೆ. ಮೊಬೈಲ್ ಸ್ವಿಚ್​ಆಫ್ ಮಾಡಿಸಿ, ಅಬಕಾರಿ ಡಿಸಿ ರವಿಶಂಕರ್ ಅವರು ಲಂಚಕ್ಕೆ ಬೇಡಿಕೆ ಇಡುವಂತೆ ಮಾಡಿದ್ದಾರೆ ಎಂದು ಪುನೀತ್ ಆರೋಪಿಸಿದ್ದಾರೆ.

ಲೋಕಾಯುಕ್ತಕ್ಕೆ ದೂರು

ಈ ಸಂಬಂಧ, ಪುನೀತ್ ಅವರು ಮಂಡ್ಯ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಆಡಿಯೋ ಸಾಕ್ಷ್ಯಗಳನ್ನೂ ಸಲ್ಲಿಸಿದ್ದಾರೆ. ಈ ವಿಚಾರ ಸಂಬಂಧ ಲೋಕಾಯುಕ್ತ ಮತ್ತಷ್ಟು ತನಿಖೆ ನಡೆಸುವ ನಿರೀಕ್ಷೆಯಿದೆ ಮತ್ತು ಇನ್ಸ್​ಪೆಕ್ಟರ್ ಶಿವಶಂಕರ್ ಮತ್ತು ಡಿಸಿ ರವಿಶಂಕರ್ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ದೂರು ಬಂದರೆ ತನಿಖೆ ನಡೆಸುತ್ತೇವೆ: ಗೃಹ ಸಚಿವ ಪರಮೇಶ್ವರ

ಮಂಡ್ಯ ಅಬಕಾರಿ ಇಲಾಖೆ ಲಂಚದ ವಿರುದ್ಧ ಲೋಕಾಯುಕ್ತಗೆ ದೂರು ಸಲ್ಲಿಕೆಯಾಗಿರುವ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದು, ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರಿಂದ ಲೋಕಾಯುಕ್ತದವರೇ ಆ ಬಗ್ಗೆ ಗಮನಹರಿಸುತ್ತಾರೆ. ಪೊಲೀಸ್​ ಇಲಾಖೆಗೆ ದೂರು ಬಂದರೆ ಕೂಡಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಇಲಾಖೆಗೆ ದೂರು ಬಂದಿಲ್ಲ, ದೂರು ಬಂದರೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕದಾದ್ಯಂತ ಅಬಕಾರಿ ಇಲಾಖೆ ಭ್ರಷ್ಟಾಚಾರದ ಬಗ್ಗೆ ಕೂಗು ಕೇಳಿಬಂದಿತ್ತು. ಪರವಾನಗಿ ನೀಡಲು ಲಂಚ ಕೇಳಲಾಗುತ್ತಿದೆ ಎಂದು ಅನೇಕ ಮಂದಿ ಬಾರ್ ಮಾಲೀಕರು ಆರೋಪ ಮಾಡಿದ್ದರು. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ನವೆಂಬರ್ 20ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ​​​​ರಾಜ್ಯಾದ್ಯಂತ ಎಲ್ಲಾ ವೈನ್ ಸ್ಟೋರ್‌ಗಳ ಬಂದ್‌ಗೆ ಕರೆ ನೀಡಿತ್ತು. ಆದರೆ, ನಂತರ ಸಿಎಂ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಿದ್ದರು. ಹಿಗಾಗಿ ಬಂದ್ ಹಿಂಪಡೆಯಲಾಗಿತ್ತು.

ಇದನ್ನೂ ಓದಿ: ಎಣ್ಣೆ ಪ್ರಿಯರಿಗೆ ಗುಡ್​ನ್ಯೂಸ್: ನ. 20ರ ಮದ್ಯ ಮಾರಾಟ ಬಂದ್ ವಾಪಸ್

ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ​​ಆರೋಪಿಸಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:33 am, Thu, 28 November 24

Loading...
Unable to load recommendations.
Follow Us