
ಮಂಡ್ಯ, ಡಿಸೆಂಬರ್ 07: ಕಾರು ಅಪಘಾತದಲ್ಲಿ (Car accident) ಮೂವರು ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ನಡೆದಿದೆ. ಕಾರಿನಲ್ಲಿದ್ದ ಚನ್ನೇಗೌಡ(60), ಸರೋಜಮ್ಮ(55) ಮತ್ತು ಜಯಮ್ಮ(70) ಮೃತರು. ಇನ್ನು ಮೃತರು ಚಿಕ್ಕಮಗಳೂರು ಮೂಲದವರು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚಂದ್ರೇಗೌಡ(60), ಚಂದ್ರೇಗೌಡ ಪತ್ನಿ ಸರೋಜ(55) ಹಾಗೂ ಚಿಕ್ಕಮಗಳೂರು ನಗರಸಭೆಯ ಮಾಜಿ ಅಧ್ಯಕ್ಷ ನಿಂಗೇಗೌಡ ಪತ್ನಿ ಜಯಮ್ಮ ಅವರು ಥೈಲ್ಯಾಂಡ್ ಟೂರ್ ಮುಗಿಸಿ ನಿನ್ನೆ ಸಂಜೆ ಬೆಂಗಳೂರಿಗೆ ವಾಪಸಾಗಿದ್ದರು. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ವಾಪಸಾಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಬಳಿಕ ಕಾರು ಪಲ್ಟಿ ಹೊಡೆದಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಆದಿಚುಂಚನಗಿರಿ ಆಸ್ಪತ್ರೆಗೆ ಮೂವರ ಮೃತದೇಹ ಸ್ಥಳಾಂತರಿಸಲಾಗಿದೆ.
ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಬಸವರಾಜ್ ಕಮ್ಮಾರ(35), ಪ್ರಶಾಂತ ಬಡಿಗೇರ್(21) ಮೃತರು.
ಇದನ್ನೂ ಓದಿ: ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ, ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಮದುವೆ ಆಮಂತ್ರಣ ನೀಡಿ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗದಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗದಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮತ್ತೊಂದು ಪ್ರಕರಣದಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹತ್ತನೇ ಮೈಲುಕಲ್ಲು ಗ್ರಾಮದ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ನಾಲ್ವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ‘ಅಪ್ಪ ನಿಮ್ಮ ಪ್ರೀತಿಗೆ ನಾನು ಅರ್ಹಳಲ್ಲ’: 8 ಪುಟದ ಡೆತ್ನೋಟ್ ಬರೆದಿಟ್ಟು ಮಗಳು ಆತ್ಮಹತ್ಯೆಗೆ ಶರಣು
ಎಪಿಎಂಸಿ ಕಾರ್ಯದರ್ಶಿ ರವಿಕುಮಾರ್, ಮಂಜುನಾಥ, ತರನಹಳ್ಳಿ ಪರಮೇಶ್ವರಪ್ಪ ಸೇರಿ ನಾಲ್ವರಿಗೆ ಗಾಯಗಳಾಗಿವೆ. ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:01 pm, Sun, 7 December 25