ಮಂಡ್ಯ: ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ ಯಶಸ್ವಿ; ಅರಣ್ಯ ಸಿಬ್ಬಂದಿಯಿಂದ ರೋಚಕ ಕಾರ್ಯಾಚರಣೆ

ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಮೂರು ದಿನಗಳ ಸುದೀರ್ಘ ಕಾರ್ಯಾಚರಣೆಯ ನಂತರ ಯಶಸ್ವಿಯಾಗಿ ರಕ್ಷಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶುವೈದ್ಯರ ತಂಡವು ಎರಡು ಅರಿವಳಿಕೆ ಚುಚ್ಚುಮದ್ದು ನೀಡಿ, ಕ್ರೇನ್ ಮೂಲಕ ಪ್ರಜ್ಞೆತಪ್ಪಿದ ಆನೆಯನ್ನು ಮೇಲೆತ್ತಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ.

ಮಂಡ್ಯ: ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ ಯಶಸ್ವಿ; ಅರಣ್ಯ ಸಿಬ್ಬಂದಿಯಿಂದ ರೋಚಕ ಕಾರ್ಯಾಚರಣೆ
ಕಾಡಾನೆ ರಕ್ಷಣೆ
Edited By:

Updated on: Nov 18, 2025 | 3:49 PM

ಮಂಡ್ಯ, ನವೆಂಬರ್​​ 18: ಜಿಲ್ಲೆಯ ಶಿವನಸಮುದ್ರದ ಬಳಿಯ ನಾಲೆಯಲ್ಲಿ (Canal) ಮೂರು ದಿನ ಸಿಲುಕಿ ಪರದಾಡಿದ್ದ ಕಾಡಾನೆಯನ್ನು (Wild Elephant) ಸತತ ಕಾರ್ಯಾಚರಣೆ ಬಳಿಕ ಇದೀಗ ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕ್ರೇನ್ ಮೂಲಕ ನಾಲೆಯಿಂದ ಕಾಡಾನೆಯನ್ನು ಮೇಲೆತ್ತಿದ್ದಾರೆ. ಸದ್ಯ ಚಿಕಿತ್ಸೆ ನೀಡಿ ಹಲಗೂರು ಅರಣ್ಯ ಪ್ರದೇಶದಲ್ಲಿ ಬಿಡಲಾಗಿದೆ.

ಆಹಾರ ಅರಸಿ ಬಂದು ನಾಲೆಗೆ ಬಿದ್ದ ಕಾಡಾನೆ

10 ರಿಂದ 15 ವರ್ಷ ಪ್ರಾಯದ ಕಾಡಾನೆ ಆಹಾರ ಅರಸಿ ಬಂದು ಜಿಲ್ಲೆಯ ಮಳವಳ್ಳಿ ತಾಲೂಕಿನ‌ ಶಿವವಸಮುದ್ರ ಬಳಿಯ ನಾಲೆಗೆ ಬಿದ್ದಿದೆ. ಖಾಸಗಿ ಪವರ್ ಸ್ಟೇಷನ್​ಗೆ ನೀರು ಸರಬರಾಜು ಮಾಡುವ ನಾಲೆಯಲ್ಲೇ 3 ದಿನದಿಂದ ಸಿಲುಕಿತ್ತು. ಸ್ಥಳದಲ್ಲೇ ಬೀಡುಬಿಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಕಾಡಾನೆಗೆ ಆಹಾರ ನೀಡಿದ್ದರು.

ಇದನ್ನೂ ಓದಿ: ಚಾಮರಾಜನಗರ ತಮಿಳುನಾಡು ಗಡಿ ದಿಂಬಂ ಘಾಟ್​ನಲ್ಲಿ ಕಾಡಾನೆ ಉಪಟಳ: ವಿಡಿಯೋ ವೈರಲ್

ನಾಲೆಯಿಂದ ಆನೆಯನ್ನ ಮೇಲೆತ್ತಲು ಅರಣ್ಯ ಇಲಾಖೆ ಸಿಬ್ಬಂದಿ ನಿನ್ನೆ ಪ್ರಯತ್ನ ಪಟ್ಟಿದ್ದರು. ಆದರೆ ನಾಲೆಯಲ್ಲಿ ನೀರು ಹೆಚ್ಚಾಗಿದ್ದ ಕಾರಣ ಕಾರ್ಯಚರಣೆಗೆ ತೊಡಕಾಗಿತ್ತು. ಇಂದು ನಾಲೆಯ ನೀರನ್ನು ತಗ್ಗಿಸಿ ಕಾರ್ಯಚರಣೆ ಮಾಡಲಾಗಿದೆ.

ಮೊದಲಿಗೆ ಪಟಾಕಿ ಸಿಡಿಸಿ ತಾನಾಗಿಯೇ ಕಾಡಾನೆ ಮೇಲಕ್ಕೆ ಬರುವಂತೆ ಮಾಡಲಾಗಿದೆ. ಆದರೆ ಅದು ಸಾಧ್ಯವಾಗಿಲ್ಲ. ಇನ್ನು ಅರಣ್ಯ ಇಲಾಖೆ ಇಟ್ಟಿರುವ ಕಂಟೇನರ್​​ನ್ನು ಕಾಡಾನೆ ದೂಡಿದೆ. ಬಳಿಕ ಅರಿವಳಿಕೆ ಚುಚ್ಚುಮದ್ದು ನೀಡಲಾಗಿದೆ. ಚುಚ್ಚುಮದ್ದು ನೀಡುತ್ತಿದ್ದಂತೆ ಕಾಡಾನೆ ಕೂಗಾಡಿ ಆರ್ಭಟಿಸಿದೆ.

ಕ್ರೇನ್ ಮೂಲಕ ಕಾಡಾನೆ ರಕ್ಷಣೆ

2 ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಕಾಡಾನೆ ಪ್ರಜ್ಞೆತಪ್ಪಿ ನಾಲೆಯಲ್ಲೇ ಕುಸಿದುಬಿದ್ದಿದೆ. ಬಳಿಕ ಸಿಬ್ಬಂದಿ ನಾಲೆಗೆ ಇಳಿದು ಕಾಡಾನೆಯ ಕಾಲುಗಳಿಗೆ ಬೆಲ್ಟ್ ಕಟ್ಟಿ ಕಬ್ಬಿಣದ ಮ್ಯಾಟ್ ಮೇಲೆ ಮಲಗಿಸಿ ಕ್ರೇನ್ ಮೂಲಕ ನಾಲೆಯಿಂದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ.

ಇದನ್ನೂ ಓದಿ: ವಿರಾಜಪೇಟೆ: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ಸೊಂಡಿಲಿನಿಂದ ಎತ್ತಿ ರಕ್ಷಿಸಿದ ಕಾಡಾನೆ ಹಿಂಡು

ಸುರಕ್ಷಿತವಾಗಿ ಮೇಲೆತ್ತಿ ಲಾರಿ ಮೂಲಕ ಸ್ಥಳಾಂತರಿಸಿದ್ದಾರೆ. ಸದ್ಯ ಕಾಡಾನೆಗೆ ಚಿಕಿತ್ಸೆ ನೀಡಿ ಹಲಗೂರು ಅರಣ್ಯ ಪ್ರದೇಶಕ್ಕೆ ಅರಣ್ಯ ಸಿಬ್ಬಂದಿ ಬಿಟ್ಟಿದ್ದಾರೆ. ಆ ಮೂಲಕ ಕಾಡಾನೆ ರಕ್ಷಣಾ ಕಾರ್ಯಾಚರಣೆ ಯಶಸ್ವಿ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.