ಮಂಡ್ಯ, ಮದ್ದೂರಿನಲ್ಲಿ ‘ಕಾವೇರಿ’ದ ಪ್ರತಿಭಟನೆ; ಹೀಗಿದೆ ಬಂದ್ ಚಿತ್ರಣ

Cauvery Protest in Mandya; ಮಂಡ್ಯದ ಸಂಜಯ್ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಮದ್ದೂರಿನಲ್ಲಿ ವಿದ್ಯಾರ್ಥಿಗಳು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ನಗರದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ, ಮದ್ದೂರಿನಲ್ಲಿ ‘ಕಾವೇರಿ’ದ ಪ್ರತಿಭಟನೆ; ಹೀಗಿದೆ ಬಂದ್ ಚಿತ್ರಣ
ಮಂಡ್ಯದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
Edited By:

Updated on: Sep 23, 2023 | 10:30 AM

ಮಂಡ್ಯ, ಸೆಪ್ಟೆಂಬರ್ 23: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಬಿಡುಗಡೆ ಮಾಡುವ ವಿಚಾರವಾಗಿ ಮಂಡ್ಯ, ಮದ್ದೂರು ಹಾಗೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆಯಿಂದಲೇ ಭಾರೀ ಪ್ರತಿಭಟನೆ ನಡೆಯುತ್ತಿದೆ. ಮಂಡ್ಯ (Mandya) ಹಾಗೂ ಮದ್ದೂರಿನಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ. ಈ ಮಧ್ಯೆ, ಕಾನೂನು ತಜ್ಞರ ಸಲಹೆ ಮೇರೆಗೆ ತಮಿಳುನಾಡಿಗೆ ನೀರು ಬಿಡಲು ತೀರ್ಮಾನ ಮಾಡಿರುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟ ಸಭೆಯ ಬಳಿಕ ಹೇಳಿಕೆ ನೀಡಿರುವುದು ಮತ್ತಷ್ಟು ಜನಾಕ್ರೋಶಕ್ಕೆ ಕಾರಣವಾಗಿದೆ.

ಮಂಡ್ಯ ನಗರ ಬಹುತೇಕ ಬಂದ್ ಆಗಿದೆ. ತೆರೆದಿದ್ದ ಅಂಗಡಿ ಮುಂಗಟ್ಟನ್ನು ಪ್ರತಿಭಟನಕಾರರು ಮುಚ್ಚಿಸಿದ್ದಾರೆ. ಮಂಡ್ಯದಲ್ಲಿ ಬಹುತೇಕ ಎಲ್ಲಾ ಅಂಗಡಿಗಳನ್ನು ವರ್ತಕರು ಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದಾರೆ. ಕೆಲವು ವರ್ತಕರು ವ್ಯಾಪಾರ ಮಾಡುತ್ತಿದ್ದರೂ ಅವರ ಅಂಗಡಿಗಳನ್ನು ರೈತರು‌ ಬಂದ್ ಮಾಡಿಸಿದ್ದಾರೆ.

ಮಂಡ್ಯದ ಸಂಜಯ್ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಮದ್ದೂರಿನಲ್ಲಿ ವಿದ್ಯಾರ್ಥಿಗಳು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ನಗರದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ವೇಳೆ ಬೈಕ್​​​​​ನಲ್ಲಿ ಹೋಗಲು‌ ಮುಂದಾದ ಬೈಕ್ ಸವಾರರೊಬ್ಬರನ್ನು ರೈತ ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡು ತಡೆದ ಘಟನೆ ವರದಿಯಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ತೀವ್ರಗೊಂಡ ಕಾವೇರಿ ಹೋರಾಟ: ನಗರದಲ್ಲಿ ಹೈಅಲರ್ಟ್, ಹೆಚ್ಚುವರಿ ಪೊಲೀಸ್ ನಿಯೋಜನೆ

ಕೆಆರ್​ಎಸ್​​ ಡ್ಯಾಮ್​ ಒಳ ಹರಿವು ಇಳಿಕೆ, ಹೊರ ಹರಿವು ಏರಿಕೆ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಎಸ್​ಆರ್​ ಡ್ಯಾಮ್​​ನಲ್ಲಿ ​ ಒಳ ಹರಿವು ಇಳಿಕೆಯಾಗಿ ಹೊರ ಹರಿವು ಏರಿಕೆಯಾಗಿದೆ. ಶುಕ್ರವಾರ ಕಾವೇರಿ ನದಿಗೆ 2,673 ಕ್ಯೂಸೆಕ್ ನೀರು ಬಿಡಲಾಗಿತ್ತು. ಶನಿವಾರ ಬೆಳಗ್ಗೆ ಕೆಆರ್​ಎಸ್ ಡ್ಯಾಮ್​ನಿಂದ 2973 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಶುಕ್ರವಾರ ಕೆಆರ್​​ಎಸ್​ಗೆ 5,845 ಕ್ಯೂಸೆಕ್ ನೀರು ಒಳ ಹರಿವು ಇತ್ತು. ಶನಿವಾರ ಅದು 5147 ಕ್ಯೂಸೆಕ್​​​ಗೆ ಇಳಿಕೆಯಾಗಿದೆ. ಸದ್ಯ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ.

ಬೆಂಗಳೂರಿನಲ್ಲಿ ಇಂದು ವಿಪಕ್ಷ ಬಿಜೆಪಿ ಪ್ರತಿಭಟನೆ

ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​​​ನಲ್ಲಿ 11 ಗಂಟೆಗೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮೂರು ಕೆಎಸ್​​​ಆರ್​​ಪಿ ತುಕಡಿ ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us