ಮಂಡ್ಯ: ನಾಗಮಂಗಲ ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಂದಾಯ ಅಧಿಕಾರಿಗಳು ನಡೆಸಿದ್ದ ಬಗರ್‌ಹುಕುಂ ಭೂ ಅಕ್ರಮ ತನಿಖೆ ಚುರುಕುಗೊಂಡಿದ್ದು, ವಂಚನೆಯ ಪ್ರಮಾಣ 1,000 ಎಕರೆಯಷ್ಟಿರುವುದು ತಿಳಿದುಬಂದಿದೆ. ನಕಲಿ ದಾಖಲೆ ಸೃಷ್ಟಿಸಿ ಹೊರ ರಾಜ್ಯದವರಿಗೂ ಭೂಮಿ ನೀಡಿದ್ದ ಅಧಿಕಾರಿಗಳ ವಿರುದ್ಧ ಉಪಲೋಕಾಯುಕ್ತ ಬಿ.ವೀರಪ್ಪ ಕಠಿಣ ಕ್ರಮದ ಮುನ್ಸೂಚನೆ ನೀಡಿದ್ದಾರೆ.

ಮಂಡ್ಯ: ನಾಗಮಂಗಲ ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ
ನಾಗಮಂಗಲ ತಾಲೂಕು ಕಚೇರಿ
Image Credit source: tv9
Edited By:

Updated on: May 25, 2026 | 11:33 AM

ಮಂಡ್ಯ, ಮೇ 25: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕು ಕಂದಾಯ ಇಲಾಖೆಯಲ್ಲಿ ನಡೆದಿರುವ ಬಗರ್‌ಹುಕುಂ ಭೂ ಮಂಜೂರಾತಿ ಹಗರಣದ ಲೋಕಾಯುಕ್ತ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಮೀಲಾಗಿ ನಡೆಸಿದ್ದ ಭೂ ಮಾಫಿಯಾದ ಜಾಲವು ಬರೋಬ್ಬರಿ 1,000 ಎಕರೆ ಸರ್ಕಾರಿ ಜಮೀನನ್ನು ನುಂಗಿ ನೀರು ಕುಡಿದಿರುವುದು ತನಿಖೆಯಲ್ಲಿ ಬಯಲಾಗಿದೆ. ಅರ್ಹತೆ ಇಲ್ಲದ ಸ್ಥಳೀಯ ಪ್ರಭಾವಿಗಳಿಗೆ, ಹಣ ಕೊಟ್ಟ ಖದೀಮರಿಗೆ ಹಾಗೂ ಹೊರ ರಾಜ್ಯದ ವ್ಯಕ್ತಿಗಳಿಗೂ ಕಾನೂನು ಬಾಹಿರವಾಗಿ ನಕಲಿ ದಾಖಲೆ ಸೃಷ್ಟಿಸಿ ಮಂಜೂರಾತಿ ಖಾತೆ ಮಾಡಿಕೊಡಲಾಗಿತ್ತು ಎಂಬುದನ್ನು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಬಹಿರಂಗಪಡಿಸಿದ್ದಾರೆ.

ಮುಖ್ಯಾಂಶಗಳು

  • ಮೂರು ತಿಂಗಳ ಹಿಂದೆ ಲೋಕಾಯುಕ್ತರು ಪ್ರಾಥಮಿಕ ದಾಳಿ ನಡೆಸಿದಾಗ ಕೇವಲ 238 ಎಕರೆ ಭೂ ಅಕ್ರಮ ಪತ್ತೆಯಾಗಿತ್ತು.
  • ಮಂಡ್ಯ ಎಎಸ್‌ಪಿ ನೇತೃತ್ವದ ವಿಶೇಷ ತಂಡ ನಡೆಸಿದ ವಿಸ್ತೃತ ತನಿಖೆಯ ವೇಳೆ, 1,000 ಎಕರೆಯಷ್ಟು ಗೋಮಾಳ ಭೂಮಿ ಲೂಟಿಯಾಗಿರುವುದು ಸಾಬೀತಾಗಿದೆ.
  • ಕಂದಾಯ ಇಲಾಖೆಯ ಅಧಿಕಾರಿಗಳು ಮಂಜೂರಾತಿ ನಿಯಮಗಳನ್ನು ಗಾಳಿಗೆ ತೂರಿ, ಕೃಷಿ ಮಾಡದ ಹೊರ ರಾಜ್ಯದ ಶ್ರೀಮಂತ ವ್ಯಕ್ತಿಗಳ ಹೆಸರಿಗೂ ನಕಲಿ ಸಾಗುವಳಿ ಚೀಟಿ ನೀಡಿ ಕೋಟ್ಯಂತರ ರೂ. ಅವ್ಯವಹಾರ ನಡೆಸಿದ್ದಾರೆ.

ಯಾರನ್ನೂ ಬಿಡಲ್ಲ ಎಂದ ನ್ಯಾ.ವೀರಪ್ಪ

ಈ ಮಹಾ ವಂಚನೆಯಲ್ಲಿ ಭಾಗಿಯಾಗಿರುವ ಇಲಾಖೆಯ ಸಣ್ಣ ನೌಕರರಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೂ ಯಾರನ್ನೂ ಬಿಡುವುದಿಲ್ಲ, ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಉಪಲೋಕಾಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ: ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ

ಈ ಹಿಂದೆ ಜನವರಿಯಲ್ಲಿ ಲೋಕಾಯುಕ್ತ ಪೊಲೀಸರು ನಾಗಮಂಗಲ ತಾಲೂಕು ಕಚೇರಿ ಸೇರಿದಂತೆ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿ ಐವರನ್ನು ಬಂಧಿಸಿದ್ದರು. ತದನಂತರ ಹಗರಣದ ತೀವ್ರತೆ ಹೆಚ್ಚಿರುವ ಅನುಮಾನ ಕಂಡುಬಂದುದರಿಂದ ವಿಸ್ತೃತ ತನಿಖೆಗೆ ಆದೇಶಿಸಲಾಗಿತ್ತು. ಅಧಿಕಾರಿಗಳು ಮೂಲ ದಾಖಲೆಗಳ ಪುಟಗಳನ್ನೇ ಹರಿದು, ತಿದ್ದುಪಡಿ ಮಾಡಿ ಈ ಗೋಲ್‌ಮಾಲ್ ಎಸಗಿದ್ದಾರೆ. ಸದ್ಯ ಎಎಸ್‌ಪಿ ನೇತೃತ್ವದ ತಂಡ ಸಂಪೂರ್ಣ ವರದಿಯನ್ನು ಸಿದ್ಧಪಡಿಸುತ್ತಿದ್ದು, ಮತ್ತಷ್ಟು ಭ್ರಷ್ಟ ಅಧಿಕಾರಿಗಳಿಗೆ ಜೈಲು ಫಿಕ್ಸ್ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:31 am, Mon, 25 May 26

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us