ನಮ್ಮ ಜನರಿಗೆ ನೀರು ಕೊಡುವುದೇ ಕಷ್ಟವಾಗಿದೆ, ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ -ಡಿಕೆ ಶಿವಕುಮಾರ್

|

Updated on: Mar 11, 2024 | 7:38 AM

ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜನ ಹನಿ ನೀರಿಗಾಗಿಯೂ ಪರದಾಡುವಂತಹ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬೀಡುವುದು ಸರಿ ಇಲ್ಲ ಎಂದು ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಇದಕ್ಕೆ ಉತ್ತರಿಸಿದ ಡಿಕೆ ಶಿವಕುಮಾರ್ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ನಮ್ಮ ಜನರಿಗೆ ನೀರು ಕೊಡುವುದೇ ಕಷ್ಟವಾಗಿದೆ, ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ -ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us on

ಮಂಡ್ಯ, ಮಾರ್ಚ್.12: ರಾಜ್ಯದಲ್ಲಿ ಬರ ಆವರಿಸಿದೆ. ಹನಿ ನೀರುಗಾಗಿ ಹಾಹಾಕಾರ ಶುರುವಾಗಿದೆ (Drinking Water Crisis). ಆದರೆ ಇತ್ತ ಕೃಷ್ಣರಾಜಸಾಗರ (KRS Dam) ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಆರೋಪಿಸಿ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಭಾನುವಾರ ಮಂಡ್ಯದಲ್ಲಿ ಕಪ್ಪುಪಟ್ಟಿ ಹಿಡಿದು ಪ್ರತಿಭಟನೆ ನಡೆಸಿದರು. ಈ ಸಂಬಂಧ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಹಳೆಮೈಸೂರು ಭಾಗದಲ್ಲಿ ಕಾಂಗ್ರೆಸ್ ಗೆಲ್ಲಿಸಲು ರಣತಂತ್ರ ಹೆಣೆಯಲಾಗುತ್ತಿದ್ದು ಚುನಾವಣಾ ಪ್ರಚಾರದ ಕಹಳೆ ಊದಲು ಭಾನುವಾರ (ಮಾ.10) ಮಂಡ್ಯದ ವಿವಿ ಆವರಣದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶವನ್ನ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಶಾಸಕರಾದ ರವಿಕುಮಾರ್ ಗಣಿಗ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಹೀಗಾಗಿ ಮುಖ್ಯಮಂತ್ರಿಗಳು ನಗರಕ್ಕೆ ಭೇಟಿ ನೀಡಿದ ಹಿನ್ನೆಲೆ ರೈತ ಹಿತರಕ್ಷಣಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿ ತಮಿಳುನಾಡಿಗೆ ನೀರು ಬಿಡದಂತೆ ಮನವಿ ಮಾಡಿದರು. ಆದರೆ ಸಿಎಂ ಮಂಡ್ಯಕ್ಕೆ ಬಂದು ತಿಳಿಯುವಾಗ ಸಮಸ್ಯೆ ಆಗಬಾರದೆಂದು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಇದನ್ನೂ ಓದಿ: ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ? ಇಂದು ಮಹತ್ವದ ಘೋಷಣೆ

ಇನ್ನು ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಬರಗಾಲದಿಂದ ನಮ್ಮ ಜನರಿಗೆ ನೀರು ಕೊಡುವುದು ಕಷ್ಟವಾಗಿದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮನಸೋತಿದ್ದಾರೆ ಮತ್ತು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದರು.

ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗಿದೆ. ಮೇಕೆದಾಟು ಯೋಜನೆಗೆ ಬಿಜೆಪಿ ನಾಯಕರು ಮತ್ತು ಹೆಚ್.ಡಿ. ದೇವೇಗೌಡರು ಅನುಮತಿ ಪಡೆದು ಕಾವೇರಿ ವಿಚಾರವಾಗಿ ಮಾತನಾಡಲಿ ಎಂದರು. ಬೆಂಗಳೂರಿನ ಕೊರತೆ ನೀಗಿಸಲು ಕೆಆರ್​ಎಸ್ ಅಣೆಕಟ್ಟೆಯಿಂದ ನೀರು ಬಿಡಲಾಗುತ್ತಿದೆ. ತಮಿಳುನಾಡು ಸರ್ಕಾರದ ಒತ್ತಡಕ್ಕೆ ನಾವು ಎಂದಿಗೂ ಮಣಿಯಲಿಲ್ಲ. ರೈತರ ಹಿತದೃಷ್ಟಿಯಿಂದ ಕಾನೂನು ಹೋರಾಟ ಮುಂದುವರಿಸುತ್ತೇವೆ. ಮೇಕೆದಾಟು ಬಳಿ 66 ಟಿಎಂಸಿ ಅಡಿ ಬ್ಯಾಲೆನ್ಸಿಂಗ್ ಜಲಾಶಯ ನಿರ್ಮಿಸಲು ಬಿಜೆಪಿ ಅನುಮತಿ ನೀಡಿದರೆ, ತಮಿಳುನಾಡಿಗೆ ಬೇಡಿಕೆ ಬಂದಾಗಲೆಲ್ಲಾ ನೀರು ಬಿಡಲು ಸಾಧ್ಯವಾಗುತ್ತದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:36 am, Mon, 11 March 24