
ದೇವನಹಳ್ಳಿ/ರಾಮನಗರ: ಕರ್ನಾಟಕದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿದಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಭಾರೀ ಪ್ರಮಾಣದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಸುಮಾರು 8 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ 2.8 ಕೋಟಿ ರೂ. ಎಂದು ತಿಳಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಹಾಂಕಾಂಗ್ನಿಂದ ಬಂದಿದ್ದ ಮತ್ತೊಬ್ಬ ಪ್ರಯಾಣಿಕನ ಬಳಿಯಿಂದ 900 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 31.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇಬ್ಬರೂ ಪ್ರಯಾಣಿಕರು ಗಾಂಜಾವನ್ನು ಲಗೇಜ್ ಬ್ಯಾಗ್ನಲ್ಲಿ ಅಡಗಿಸಿಟ್ಟುಕೊಂಡು ಬಂದಿದ್ದರು ಎನ್ನಲಾಗಿದೆ.
ತಕ್ಷಣ ಕ್ರಮ ಕೈಗೊಂಡ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು NDPS ಕಾಯ್ದೆಯಡಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಏರ್ಪೋರ್ಟ್ ಭದ್ರತಾ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಿಂದ ಈ ಡ್ರಗ್ಸ್ ಸ್ಮಗ್ಲಿಂಗ್ ಯತ್ನ ವಿಫಲಗೊಂಡಿದೆ.
ರಾಮನಗರ ಜಿಲ್ಲೆಯ ಐಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಒಂದೂವರೆ ಕೋಟಿ ರೂ. ಮೌಲ್ಯದ 750 ಗ್ರಾಂ ಡ್ರಗ್ಸ್ ವಶಪಡಿಸಲಾಗಿದೆ. ದಾಳಿಯ ವೇಳೆ 450 MDMA ಮಾತ್ರೆಗಳು ಹಾಗೂ 550 ಗ್ರಾಂ ಕ್ರಿಸ್ಟಲ್ ಡ್ರಗ್ಸ್ ಸೀಜ್ ಮಾಡಲಾಗಿದೆ.
ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಗೋರಿಪಾಳ್ಯದ ಸಜ್ಜಿಲ್ ಪಾಷಾ ಅಲಿಯಾಸ್ ಸಲ್ಮಾನ್, ಸಾದಿಕ್ ಹಾಗೂ ಉಗಾಂಡ ಮೂಲದ ನಾನಾ ಜಾನ್ಸನ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೆಂಗಳೂರಿನಿಂದ ಡ್ರಗ್ಸ್ ತಂದು ರಾಮನಗರದಲ್ಲಿ ಮಾರಾಟ ಮಾಡುತ್ತಿದ್ದರೆಂಬದು ತನಿಖೆಯಲ್ಲಿ ಬಹಿರಂಗವಾಗಿದೆ.
ಈ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬೆಂಗಳೂರು ದಕ್ಷಿಣ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ನಿಗ್ರಹಿಸಲು ಕಟ್ಟುನಿಟ್ಟಿನ ಕ್ರಮ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮೈಸೂರಿನಲ್ಲಿ ಮುಂದುವರಿದ ಡ್ರಗ್ ಬೇಟೆ: ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರ ಬಂಧನ
ಮತ್ತೊಂದೆಡೆ, ಮೈಸೂರು ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ಮಾಡಿರುವ ಪೊಲೀಸರು, 10.30 ಲಕ್ಷ ರೂ. ಮೌಲ್ಯದ 103 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.