ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು
ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB G RAM G) ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ. ಇದಕ್ಕೆ ಬಿಜೆಪಿ ನಾಯಕರು ಸಹ ವಿಬಿಜಿ ರಾಮ್ ಜಿ ಎಂದು ಹೆಸರು ಬದಲಾವಣೆ ಮಾಡಿದ್ದಕ್ಕೆ ಸರ್ಮಥಿಸಿಕೊಳ್ಳುತ್ತಿದ್ದು, ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್ ಮಧ್ಯವರ್ತಿಗಳಿಗೆ ತೊಡಕು ಆಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.

ಬೆಂಗಳೂರು, (ಜನವರಿ 08): ಕಾಂಗ್ರೆಸ್ (Congress) ಅವಧಿಯಲ್ಲಿ ʼಮನರೇಗಾದಲ್ಲಿ (mgnrega) 11 ಲಕ್ಷ ಕೋಟಿ ರೂಪಾಯಿ ಮೊತ್ತದ ಭ್ರಷ್ಟಾಚಾರ ಆಗಿದೆ. ಇಂಥ ಅಕ್ರಮ, ವ್ಯಾಪಕ ಭ್ರಷ್ಟಾಚಾರ ತಡೆಯಲೆಂದೇ ಕೇಂದ್ರ ಸರ್ಕಾರ ʼವಿಬಿಜಿ ರಾಮ್ ಜಿ ಕಾಯ್ದೆʼ ಜಾರಿ ತಂದಿದೆ. ಆದರೆ, ಕಾಂಗ್ರೆಸ್ಗೆ ಇದೇ ದೊಡ್ಡ ಸಮಸ್ಯೆಯಾಗಿದೆʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (pralhad joshi) ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಗುರುವಾರ ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, ʼವಿಬಿಜಿ ರಾಮ್ ಜಿ ಕಾಯ್ದೆʼಯಲ್ಲಿ ಎಐ ತಂತ್ರಜ್ಞಾನ, ಜಿಪಿಎಸ್ ಟ್ರ್ಯಾಕಿಂಗ್ ಅಳವಡಿಸಿದ್ದು, ಕೆಲಸದ ಗುಣಮಟ್ಟವನ್ನೂ ಪರೀಕ್ಷಿಸಲಾಗುತ್ತಿದೆ. ಮನರೇಗದಲ್ಲಿ ಹಣ ಹೊಡೆಯುತ್ತಿದ್ದ ಕಾಂಗ್ರೆಸ್ನ ಮಧ್ಯವರ್ತಿಗಳಿಗೆ ಇದುವೇ ತಲೆನೋವಾಗಿ ಪರಿಣಮಿಸಿದೆ. ಹಾಗಾಗಿ ವಿರೋಧಿಸುತ್ತಿದ್ದಾರೆ ಎಂದು ಚಾಟಿ ಬೀಸಿದರು.
ಮನರೇಗಾದಲ್ಲಿ ಕಾಂಗ್ರೆಸ್ ಅವಧಿಯಲ್ಲಿ 11 ಲಕ್ಷ ಕೋಟಿ ರೂಪಾಯಿ ಮೊತ್ತದ ಭ್ರಷ್ಟಾಚಾರ ಆರೋಪವನ್ನು ಕಾಂಗ್ರೆಸ್ ವಿರೋಧಿಸಿಲ್ಲ. 2013ರಲ್ಲಿ ಸಿಎಜಿ ಪ್ರಕಾರ ದೇಶದಲ್ಲಿ 4.33 ಲಕ್ಷ ನಕಲಿ ಜಾಬ್ ಕಾರ್ಡ್ ಗಳಿದ್ದವು. ಮೊದಲು ಜೆಸಿಬಿಯಿಂದ ಕೆಲಸ ಮಾಡಿಸುತ್ತಿದ್ದರು. ಈಗ ಈ ಎಲ್ಲಾ ಅಕ್ರಮ, ಲೋಪಗಳಿಗೂ ತೆರೆ ಎಳೆಯಲೆಂದೇ ʼವಿಬಿಜಿ ರಾಮ್ ಜಿ ಕಾಯ್ದೆʼ ತಂದಿದ್ದೇವೆ ಎಂದು ಜೋಶಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ
ʼವಿಬಿಜಿ ರಾಮ್ ಜಿ ಕಾಯ್ದೆʼಯಲ್ಲಿ ಕೂಲಿಕಾರರಿಗೆ 60 ದಿನಗಳ ಕಾಲ ಬಿಡುವು ಕೊಟ್ಟಿದ್ದಕ್ಕೆ ಕಾಂಗ್ರೆಸ್ಸಿಗರು ಕೃಷಿ ಮೇಲೆ ದುಷ್ಪರಿಣಾಮ ಎನ್ನುತ್ತಿದ್ದಾರೆ, ಹಾಗಾದರೆ ಇವರ ಕಾಲದಲ್ಲೇನು 365 ದಿನ ಕೆಲಸ ಕೊಡುತ್ತಿದ್ದರಾ? ಎಂದು ಪ್ರಶ್ನಿಸಿದ ಜೋಶಿ, ಕಾಂಗ್ರೆಸ್ ಕಾಲದಲ್ಲಿ ಮನರೇಗಾದಲ್ಲಿ ಡಿಜಿಟಲ್ ಪೇಮೆಂಟ್ ಅನ್ನೇ ಮಾಡುತ್ತಿರಲಿಲ್ಲ. ಇದೀಗ ತನ್ನ ಮಧ್ಯವರ್ತಿಗಳಿಗೆ ಅನುಕೂಲವಾಗಬೇಕೆಂಬ ನಿಲುವಿನಲ್ಲಿ ʼವಿಬಿಜಿ ರಾಮ್ ಜಿ ಕಾಯ್ದೆʼ ವಿರೋಧಿಸಿ ಹೋರಾಟ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಹೆಚ್ಚು ಭ್ರಷ್ಟಾಚಾರ
ಮನರೇಗಾದಲ್ಲಿ ರಾಜ್ಯಕ್ಕೆ ಹತ್ತು ವರ್ಷದಲ್ಲಿ 8 ಲಕ್ಷ 53 ಸಾವಿರ ಕೋಟಿ ಕೊಟ್ಟಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲದಲ್ಲೇ ರಾಜ್ಯದಲ್ಲಿ ಮನರೇಗಾದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಆಗಿದೆ. 80 ವರ್ಷದ ವ್ಯಕ್ತಿಯನ್ನೂ ಕೂಲಿಯನ್ನಾಗಿ ಮಾಡಿ ಹಣ ಪಡೆಯಲಾಗಿದೆ. ಇದೀಗ ರಾಹುಲ್ ಗಾಂಧಿಯಂತಹ ಅಪ್ರಬುದ್ಧ ರಾಜಕಾರಣಿಯನ್ನು ಖುಷಿಪಡಿಸಲು ಹೋರಾಟ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಗರಿ ಗರಿ ಅಂಗಿ ಹಾಕಿದವರಿಗೆ ದುಡ್ಡು ಸಿಗದು
ʼವಿಬಿಜಿ ರಾಮ್ ಜಿʼಯಲ್ಲಿ ಕೇಂದ್ರ ಸರ್ಕಾರ ತಾಂತ್ರಿಕತೆ ಅನುಷ್ಠಾನ ಮಾಡುತ್ತಿರುವುದರಿಂದ ಕಾಂಗ್ರೆಸ್ ಮಧ್ಯವರ್ತಿಗಳಿಗೆ ಸಮಸ್ಯೆಯಾಗುತ್ತಿದೆ. ಗರಿ ಗರಿ ಅಂಗಿ ಹಾಕಿಕೊಂಡು ಓಡಾಡುತ್ತಿದ್ದ ಕಾಂಗ್ರೆಸ್ ಮಧ್ಯವರ್ತಿಗಳಿಗೆ ಇನ್ನು ಮುಂದೆ ದುಡ್ಡು ಸಿಗುವುದಿಲ್ಲ ಎಂದು ಟಾಂಗ್ ಕೊಟ್ಟರು.
ʼವಿಬಿಜಿ ರಾಮ್ ಜಿʼ ಕಾಯ್ದೆಯಲ್ಲಿ ಇನ್ನು 14 ದಿನದಲ್ಲೇ ಕೂಲಿ ಹಣ ಪಾವತಿಸಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ. ಮಾನಿಟರಿಂಗ್ ಜವಾಬ್ದಾರಿಯನ್ನು ಪಂಚಾಯತ್ಗೂ ಕೊಡಲಾಗಿದೆ. ಪ್ರತಿ ವಾರ ಕೆಲಸದ ವಿವರ ಬಹಿರಂಗಪಡಿಸಬೇಕು. ಯಾರೇ ತಪ್ಪು ಮಾಡಿದರೂ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಇದರಲ್ಲಿ ಅಷ್ಟೊಂದು ವ್ಯವಸ್ಥಿತವಾಗಿ ಪಾರದರ್ಶಕತೆ ತರಲಾಗಿದೆ ಎಂದು ಜೋಶಿ ಸಮರ್ಥಿಸಿಕೊಂಡರು.
ಯುಪಿಎ ಅವಧಿಯಲ್ಲಿ ನರೇಗಾದಲ್ಲಿ ಜೆಸಿಬಿಯಿಂದ ಕೆಲಸ ಮಾಡಿಸಲಿಲ್ಲವೆಂದು ಕಾಂಗ್ರೆಸ್ ನ ಒಬ್ಬರಾದರೂ ಹೇಳಲಿ ನೋಡೋಣ ಎಂದು ಸವಾಲು ಹಾಕಿದ ಸಚಿವರು, ಇವರ ಅವಧಿಯಲ್ಲಿ ನರೇಗಾ ಸಿಬ್ಬಂದಿಗೆ ವೇತನವೇ ಸಿಗುತ್ತಿರಲಿಲ್ಲ. ಇನ್ನು ಯುಪಿಎ ಕಾಲದಲ್ಲಿ ರಕ್ಷಣಾ ವ್ಯವಸ್ಥೆಗೂ ಏನೂ ಮಾಡಲಿಲ್ಲ. ಆಗಿನ ರಕ್ಷಣಾ ಸಚಿವ ಆ್ಯಂಟನಿ ಅವರು ಹೈಕಮಾಂಡ್ಗೆ ಹೆದರಿ ಯಾವುದಕ್ಕೂ ಸಹಿ ಮಾಡುತ್ತಲೇ ಇರಲಿಲ್ಲ ಎಂದು ಕುಟುಕಿದರು.
ರಾಹುಲ್ ಗಾಂಧಿ ಗಂಭೀರ ರಾಜಕಾರಣಿಯೇ?
ಅಧಿವೇಶನ ವೇಳೆ ವಿದೇಶಕ್ಕೆ ಹೋಗಿದ್ದ ರಾಹುಲ್ ಗಾಂಧಿ ಅವರೊಬ್ಬ ಗಂಭೀರ ರಾಜಕಾರಣಿಯೇ? ʼವಿಬಿಜಿ ರಾಮ್ ಜಿ ಕಾಯ್ದೆʼ ಯೋಜನೆ ಚರ್ಚೆ ವೇಳೆ ಸದನದಲ್ಲಿ ಇರಲೇ ಇಲ್ಲ. ಹೊಸ ಬದಲಾವಣೆ ಅನ್ವಯ ತಪ್ಪು ಕಂಡಲ್ಲಿ ನ್ಯಾಯಾಲಯಕ್ಕೆ ಹೋಗಬಹುದು. ಅಧಿಕಾರಿಗಳಿಗೆ ಶಿಕ್ಷೆ ಕೂಡ ಆಗತ್ತದೆ. ಇದರಲ್ಲಿ ತಪ್ಪೇನು? ಎಂದು ಪ್ರಶ್ನಿಸಿದ ಜೋಶಿ, ಮೊದಲೆಲ್ಲಾ ಸರ್ಕಾರ 100 ಹಾಕಿದರೆ 15 ಮಾತ್ರ ಜನರಿಗೆ ತಲುಪುತ್ತಿತ್ತು ಎಂಬುದನ್ನು ರಾಜೀವ್ ಗಾಂಧಿಯೇ ಹೇಳುತ್ತಿದ್ದರು. ಹಾಗಾದರೆ ಕಾಂಗ್ರೆಸ್ಗೆ ವ್ಯವಸ್ಥೆ ಹಾಗೇ ಇರಬೇಕಿತ್ತಾ? ಎಂದು ಹರಿಹಾಯ್ದರು.
ಮಹಿಳೆ ವಿವಸ್ತ್ರ ಪ್ರಕರಣದಲ್ಲಿ ಎಸ್ಐಆರ್ ಭಯ:
ಹುಬ್ಬಳ್ಳಿಯ ಮಹಿಳೆ ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಆರೋಪದ ಪ್ರಕರಣದಲ್ಲಿ ಕಾಂಗ್ರೆಸ್ಗೆ ಎಸ್ಐಆರ್ ಭಯವಿದೆ. ಹಾಗಾಗಿಯೇ ಎಸ್ಐಆರ್ ಮಾಡಿ ಎಂದರೆ ಎಫ್ಐಆರ್ ಮಾಡುತ್ತಾರೆ. ಸಿಎಂ ಮತ್ತು ಗೃಹ ಸಚಿವರು ಪೊಲೀಸರ ಪರ ಮಾತಾಡಿದ್ದಾರೆ. ತನಿಖೆ ಮಾಡುತ್ತೇವೆ ಎನ್ನಬಹುದಿತ್ತಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
ನಿಮ್ಮ ದಾದಾಗಿರಿ ನಡೆಯಲ್ಲ
ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರ ಈ ತರಹದ ದಾದಾಗಿರಿ ಇಲ್ಲಿ ನಡೆಯಲ್ಲ ಎಂದ ಜೋಶಿ, ಕಾರ್ಪೊರೇಟರ್ ದೂರನ್ನು ತೆಗೆದುಕೊಂಡ ಪೊಲೀಸರು ಸುಜಾತಾ ಅವರ ದೂರನ್ನೇಕೆ ತೆಗೆದುಕೊಳ್ಳಲಿಲ್ಲ? ಎಂದು ಪ್ರಶ್ನಿಸಿದರು.
ಬಿಎಲ್ಒ ಮ್ಯಾಪಿಂಗ್ ಮಾಡಲು ಬಿಎಲ್ಎಗಳನ್ನು ಕರೆದುಕೊಂಡು ಹೋಗಲು ಅವಕಾಶವಿದೆ. ಆ ದಿನ ಕಾಂಗ್ರೆಸ್ನ ಬಿಎಲ್ಎ 2 ಇರಲಿಲ್ಲ. ಕಾಂಗ್ರೆಸ್ಸಿನವರು ಹೋಗಿ ಸುಜಾತಾ ಮೇಲೆ ಹಲ್ಲೆ ಮಾಡುತ್ತಾರೆ. ನಂತರ ಕಾರ್ಪೊರೇಟರ್ ಕಡೆಯವರ ದೂರಿನ ಮೇರೆಗೆ ಪೊಲೀಸರು ಸುಜಾತಾ ಅವರನ್ನು ಬಂಧಿಸುತ್ತಾರೆ. ಆಕೆ ತಾವೇ ಬಟ್ಟೆ ಬಿಚ್ಚಿಕೊಂಡರು ಎಂದಿದ್ದಾರೆ ಪೊಲೀಸರು. ಹಾಗಾದರೆ ಪೊಲೀಸರೇಕೆ ಸುಮ್ಮನಿದ್ದರು? ಆಕೆ ಉರುಳು ಹಾಕಿಕೊಳ್ಳಲು ಹೋಗಿದ್ರೂ ನೋಡಿಕೊಂಡು ಸುಮ್ಮನಿರುತ್ತಿದ್ದರಾ? ಎಂದು ಸಚಿವ ಪ್ರಲ್ಹಾದ ಜೋಶಿ ತರಾಟೆಗೆ ತೆಗೆದುಕೊಂಡರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:44 pm, Thu, 8 January 26
