ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಸರ್ಕಾರ: ವಿಶೇಷ ಅಧಿವೇಶನ ಕರೆಯಲು ತೀರ್ಮಾನ
ಜಾರಿ ಮಾಡಿರುವ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಈ ಸಂಬಂಧ ಇಂದಿನ ಸಚಿವ ಸಂಪುಟದ್ಲಲೂ ಸಹ ಗಂಭೀರ ಚರ್ಚೆಗಳಾಗಿವೆ. ಮನರೇಗಾ ಕಾಯಿದೆ ರದ್ದತಿ ವಿರೋಧಿಸಿ ಐದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ವಿಬಿ ಜಿ ರಾಮ್ ಜಿ ಕಾಯಿದೆಯ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧಾರ ಮಾಡಲಾಗಿದೆ. ಅಲ್ಲದೇ ಕಾಂಗ್ರೆಸ್ ಶಾಸಕ ವಿಶೇಷ ಸಭೆಯಲ್ಲೂ ಸಹ ಹೋರಾಟದ ಬಗ್ಗೆ ಚರ್ಚೆ ನಡೆದಿದೆ. ಹಾಗಾದ್ರೆ, ಇಂದಿನ ಸಭೆಯಲ್ಲಿ ಏನೆಲ್ಲಾಆಯ್ತು ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, (ಜನವರಿ 08): ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ರದ್ದುಗೊಳಿಸಿ ಜಿ ರಾಮ್ ಜಿ ಎಂದು ಪುನರ್ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕರ್ನಾಟಕದಲ್ಲಿ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಇಂದಿನ ಸಚಿವ ಸಂಪುಟದಲ್ಲೂ ಸಹ ಚರ್ಚೆ ಮಾಡಿದ್ದು, ವಿಬಿ ಜಿ ರಾಮ್ ಜಿ ಕಾಯಿದೆಯ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧಾರ ಮಾಡಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ (Siddaramaiah_ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಕಾಂಗ್ರೆಸ್ ಶಾಸಕರು ಜತೆ ಸಭೆ ಮಾಡಿದ್ದು, ಮನ್ರೇಗಾ ಹೆಸರು ಬದಲಾವಣೆ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದೆ. ಹಾಗೇ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ.
2 ದಿನ ವಿಶೇಷ ಅಧಿವೇಶನ ಕರೆಯಲು ತೀರ್ಮಾನ
ಮನರೇಗಾ ರದ್ದುಗೊಳಿಸಿ ಜಿ ರಾಮ್ ಜಿ ಎಂದು ಪುನರ್ನಾಮಕರಣ ಮಾಡಿರುವ ಕೇಂದ್ರ ಸರ್ಕಾರದ ಹೋರಾಟ ನಡೆಸುವ ಸಂಬಂಧ ಇಂದು (ಜನವರಿ 08) ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಸಭೆ ನಡೆಸಿದ್ದು, ಕೇಂದ್ರದ ವಿರುದ್ಧ ಪ್ರಬಲವಾಗಿ ಹೋರಾಟ ಮಾಡಲು ನಿರ್ಧರಿಸಲಾಗಿದೆ.ಅಲ್ಲದೇ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಎರಡು ದಿನ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೋಟ್ಯಂತರ ಬಡಜನರಿಗೆ ಉದ್ಯೋಗದ ಖಾತರಿಯೂ ಇಲ್ಲದ, ಮಹಾತ್ಮ ಗಾಂಧಿಯವರ ಹೆಸರಿನ ನೈತಿಕ ಬಲವೂ ಇಲ್ಲದ ವಿಬಿ ಜಿ ರಾಮ್ ಜಿ ಯೋಜನೆಯನ್ನು ಜಾರಿ ಮಾಡುತ್ತಿರುವುದು ಗ್ರಾಮೀಣ ಭಾರತದ ಆರ್ಥಿಕತೆಗೆ ನೀಡುತ್ತಿರುವ ಕೊಡಲಿಯೇಟು. ಈಗ ಈ ಅನ್ಯಾಯದ ವಿರುದ್ಧ… pic.twitter.com/8bJqtUJmEs
— Siddaramaiah (@siddaramaiah) January 8, 2026
ಸಭೆಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇದು ಬಿಜೆಪಿಯವರ ಹುನ್ನಾರ. ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬಂತು. ಇದು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆ ಉದ್ದೇಶ. ವರ್ಷದಲ್ಲಿ ನೂರು ದಿನ ಉದ್ಯೋಗ ಅವಕಾಶ ಈ ಯೋಜನೆಯಲ್ಲಿ ಸಿಗುತ್ತಿತ್ತು. ಈ ಉದ್ಯೋಗವನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ. ಉದ್ಯೋಗದ ಹಕ್ಕು ಇಲ್ಲವಾಗಿಸಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ: ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು
ಗೊಂದಲ ಸೃಷ್ಟಿ ಮಾಡುವ ಹುನ್ನಾರ ಎಂದ ಸಿಎಂ
ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಕ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ. 28 ಕೋಟಿ ದಲಿತರಿಗೆ ಇದರಿಂದ ಅನ್ಯಾಯವಾಗಿದೆ. ನಮ್ಮ ಹೋರಾಟ ತೀವ್ರವಾಗಿ ಇರಬೇಕು. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ ಎಂದಿದ್ದಾರೆ.
ಶಾಸಕರಿಗೆ ಮಹತ್ವದ ಸೂಚನೆ
ಕಾಂಗ್ರೆಸ್ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ಧು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ ಬಾಹಿರ ಕೆಲಸ. ಮನರೇಗಾ ಕಾಯಿದೆ ಮತ್ತೆ ಜಾರಿ ಅಗುವ ರೀತಿ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯ ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನ ತಲುಪಬೇಕು. ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕಿದೆ ಎಂದು ಸಿದ್ದರಾಮಯ್ಯ ತಮ್ಮ ಶಾಸಕರಿಗೆ ಕರೆ ನೀಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:54 pm, Thu, 8 January 26
