AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS)ದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಸರ್ಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವ ನಿಯಮದಿಂದ ಯಾವ ಕಾನೂನಿನ ಅಡಿ ವಿನಾಯಿತಿ ಪಡೆದಿದೆ ಎಂಬುದನ್ನು ಸಾಬೀತುಪಡಿಸುವಂತೆ ಆಗ್ರಹಿಸಿದ್ದರು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಂಘದ ನೋಂದಣಿ ವಿಚಾರವಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದು, 8 ವಿವರಗಳ ಮಾಹಿತಿ ನೀಡುವಂತೆ ಆಗ್ರಹಿಸಿದ್ದಾರೆ. ಹಾಗಾದ್ರೆ, ಪತ್ರದಲ್ಲೇನಿದೆ ಎನ್ನುವ ವಿವರ ಈ ಕೆಳಗಿನಂತಿದೆ.

RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ
Priyank Kharge
ಪ್ರಸನ್ನ ಗಾಂವ್ಕರ್​
| Edited By: |

Updated on:Jun 15, 2026 | 4:49 PM

Share

ಬೆಂಗಳೂರು, (ಜೂನ್ 15): ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆರ್​​ಎಸ್​​ಎಸ್ (Rashtriya Swayamsevak Sangh)​ ನೋಂದಣಿ ವಿಚಾರವನ್ನು ಎತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ಇದೀಗ ಪ್ರಿಯಾಂಕ್ ಖರ್ಗೆ, ಇದೇ ವಿಚಾರವಾಗಿ ಆರ್​​ಎಸ್​​ಎಎಸ್​ ಮುಖ್ಯಸ್ಥ ಮೋಹನ್ ಭಾಗವತ್ (Mohan bhagwat) ಅವರಿಗೆ ಪತ್ರ ಬರೆದಿದ್ದು, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡುವಂತೆ ಆಗ್ರಹಿಸಿದ್ದಾರೆ. ಇಷ್ಟು ದೊಡ್ಡ ಸಂಘಟನೆ ಯಾವ ಕಾನೂನಿನ ಆಧಾರದಲ್ಲಿ ನಿರ್ವಹಿಸುತ್ತಿದೆ. ಏಕೆ ನೋಂದಾಯಿತ ಕಾನೂನು ಬದ್ಧ ಸಂಸ್ಥೆಯಾಗಿ ಕಾರ್ಯ ನಿರ್ವಹಿಸ್ತಿಲ್ಲ. ಈ ಬಗ್ಗೆ ವಿವರಣೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಮುಖ್ಯಾಂಶಗಳು

  • RSS ಮುಖ್ಯಸ್ಥ ಮೋಹನ್ ಭಾಗವತ್​​ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ
  • ಸಂಘ ನೋಂದಣಿ, ಆದಾಯ, ಆಸ್ತಿಪಾಸ್ತಿ ಸೇರಿದಂತೆ 8 ಅಂಶಗಳನ್ನು ಆಗ್ರಹಿಸಿ ಪತ್ರ
  • 8 ವಿವರಗಳ ಮಾಹಿತಿ ನೀಡುವಂತೆ ಮೋಹನ್ ಭಾಗವತ್ ಗೆ ಖರ್ಗೆ ಒತ್ತಾಯ

ಕಳೆದ ವರ್ಷವೂ ಸಹ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಮೋಹನ್ ಭಾಗವತ್ ಅವರಿಗೆ ಆರ್​​​ಎಸ್​​ಎಸ್​​​ ಬಗ್ಗೆ ಕೆಲವೊಂದಿಷ್ಟು ವಿವರಣೆ ಕೇಳಿದ್ದರು. ಇದೀಗ ಪತ್ರದ ಮೂಲಕ ಮತ್ತೆ ಸಂಘದ ಕೆಲವೊಂದಿಷ್ಟು ವಿಚಾರಗಳ ಬಗ್ಗೆ ವಿವರಣೆ ನೀಡುವಂತೆ ಆಗ್ರಹಿಸಿದ್ದಾರೆ. ಸಂಘದ ಕಾರ್ಯಚಟುವಟಿಕೆಗಳು, ಸಂಘಕ್ಕೆ ಬರುವ ಆದಾಯದ ಮೂಲ, ಆಸ್ತಿಪಾಸ್ತಿ ಬಗ್ಗೆ ಬಹಿರಂಗಪಡಿಸುವಂತೆ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ: ಏಕಾಏಕಿ ಖಡಕ್​​ ಎಚ್ಚರಿಕೆ ಕೊಟ್ಟಿದ್ದೇಕೆ ಗೃಹ ಸಚಿವ?

ಪ್ರಿಯಾಂಕ್ ಖರ್ಗೆ ಪತ್ರದಲ್ಲೇನಿದೆ?

ರಾಷ್ಟ್ರೀಯತೆ, ಶಿಸ್ತು ಮತ್ತು ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಸಂಘಟನೆಯೊಂದು ಪಾರದರ್ಶಕತೆ, ಕಾನೂನಿನ ಅನುಸರಣೆ ಮತ್ತು ಭಾರತದ ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು. ಸಾಮಾನ್ಯ ಭಾರತೀಯರು ನಿಯಮಗಳನ್ನು ಪಾಲಿಸಬೇಕು. ತಾನು ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಆರ್‌ಎಸ್‌ಎಸ್‌ಗೆ ಇಲ್ಲ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್‌ಜಿಒಗಳು, ಟ್ರಸ್ಟ್‌ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಎಂದಿದ್ದಾರೆ.

ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಈ ಸಂದರ್ಭವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲ. ಸಾಂವಿಧಾನಿಕ ಆತ್ಮಾವಲೋಕನಕ್ಕಾಗಿಯೂ ಬಳಸಿಕೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ. ಭಾರತದ ಈ ನೂರನೇ ವರ್ಷದಲ್ಲಿ ದೇಶಕ್ಕೆ ಆರ್‌ಎಸ್‌ಎಸ್ ನೀಡಬಹುದಾದ ಅತ್ಯುತ್ತಮ ಗೌರವವೆಂದರೆ, ತನ್ನನ್ನು ತಾನು ನೋಂದಾಯಿಸಿಕೊಳ್ಳುವುದು , ತನ್ನ ಚಟುವಟಿಕೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಮತ್ತು ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ ಹಾಗೂ ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸುವುದು. ನಿಮ್ಮ ಅಧಿಕೃತ ಪ್ರತಿನಿಧಿಗಳನ್ನು ಕಳುಹಿಸಿ ಮೇಲಿನ ವಿಷಯಗಳ ಕುರಿತು ಚರ್ಚೆ ನಡೆಸಲು ನಾವು ಔಪಚಾರಿಕ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದ ಕೊನೆಯಲ್ಲಿ ಖರ್ಗೆ ಮನವಿ

ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು ಆರ್​​ಎಸ್​ಎಸ್​​ ನ ಕೆಲ ವಿವರಗಳನ್ನು ತಿಳಿಸುವಂತೆ ಆಗ್ರಹಿಸಿದ್ದಾರೆ. ಕೊನೆಗೆ ಕೆಲವೊಂದಿಷ್ಟು ಮನವಿಯನ್ನು ಸಹ ಮಾಡಿಕೊಂಡಿದ್ದಾರೆ. ಅವುಗಳೆಂದರೆ, ಅಧಿಕೃತವಾಗಿ ನೋಂದಾಯಿಸಿಕೊಳ್ಳಬೇಕು, ಚಟುವಟಿಕೆಗಳು ಮತ್ತು ಹಣಕಾಸಿನ ಮಾಹಿತಿಯನ್ನು ಬಹಿರಂಗಪಡಿಸಬೇಕು, ಅನ್ವಯವಾಗುವ ಎಲ್ಲಾ ತೆರಿಗೆಗಳನ್ನು ಪಾವತಿಸಬೇಕು, ಭಾರತೀಯ ಕಾನೂನುಗಳ ಚೌಕಟ್ಟಿನೊಳಗೆ ಪಾರದರ್ಶಕ ಮತ್ತು ಉತ್ತರದಾಯಿ ಸಂಸ್ಥೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಪತ್ರದಲ್ಲಿ ಉಲ್ಲೇಖಿಸಿದ 8 ಅಂಶಗಳು

  1. RSSನ ಕಾನೂನಾತ್ಮಕ ಸ್ಥಾನಮಾನ ಮತ್ತು ಸಂಘಟನೆಯ ರಚನೆ ವಿವರ
  2.  ಪದಾಧಿಕಾರಿಗಳು ಮತ್ತು ಅಧಿಕೃತ ಪ್ರತಿನಿಧಿಗಳ ವಿವರಗಳು
  3. ದೇಣಿಗೆ, ಕೊಡುಗೆ ಮತ್ತು ಆದಾಯದ ಮೂಲಗಳು
  4. ವೆಚ್ಚ ಮತ್ತು ಆಸ್ತಿಪಾಸ್ತಿಗಳ ವಿವರಗಳು
  5. ಕಾನೂನಿನ ಪ್ರಕಾರ ಅನ್ವಯವಾಗುವ ತೆರಿಗೆಗಳನ್ನು ಸಕ್ರಮವಾಗಿ ಪಾವತಿಸಲಾಗುತ್ತಿದೆಯೇ ಎಂಬ ವಿಷಯ.
  6. ಔಪಚಾರಿಕ ನೋಂದಣಿಯಿಲ್ಲದೆ ತನ್ನ ಚಟುವಟಿಕೆಗಳನ್ನು ನಡೆಸಲು ಯಾವ ಕಾನೂನಾತ್ಮಕ ಆಧಾರವನ್ನು ಅವಲಂಬಿಸಲಾಗಿದೆ ಎಂಬ ವಿಷಯ.
  7. ಯಾವುದೇ ಸಾರ್ವಜನಿಕ ಜವಾಬ್ದಾರಿಯಿಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವ ಹಕ್ಕನ್ನು ಯಾವ ಸಾಂವಿಧಾನಿಕ ಮತ್ತು ಶಾಸನಾತ್ಮಕ ಚೌಕಟ್ಟಿನ ಅಡಿಯಲ್ಲಿ ಪಡೆದುಕೊಳ್ಳಲಾಗಿದೆ ಎಂಬ ವಿಷಯ.
  8.  ರೂಟ್ ಮಾರ್ಚ್, ಸಾರ್ವಜನಿಕರ ಸೇರ್ಪಡೆ ಸಂದರ್ಭದಲ್ಲಿ ಪಡೆಯಲಾಗಿರುವ ಅನುಮತಿಗಳು.

ಹೀಗೆ ಒಟ್ಟು 8 ಅಂಶಗಳನ್ನು ಪತ್ರದಲ್ಲಿ ಉಲ್ಲೇಖಿಸಿ ಇವುಗಳಿಗೆ ವಿವರಣೆ ನೀಡುವಂತೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Mon, 15 June 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More