ಕುಮಾರಸ್ವಾಮಿಯನ್ನ ಗುಣಗಾನ ಮಾಡಿ ತಮ್ಮದೇ ಸರ್ಕಾರದ ವಿರುದ್ಧ ಸಿಡಿದೆದ್ದ ಸಚಿವ ಶಿವಾನಂದ ಪಾಟೀಲ್

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಕಳೆದಿವೆ. ಆದ್ರೆ, ಈ ಎರಡು ವರ್ಷದಲ್ಲಿ ಒಂದು ಮುಗಿಯುತ್ತಿದ್ದಂತೆಯೇ ಮತ್ತೊಂದು ವಿವಾದದಲ್ಲಿ ಸರ್ಕಾರ ಸಿಲುಕಿಕೊಂಡು ಮುಜುಗರಕ್ಕೀಡಾಗುತ್ತಿದೆ. ಇಷ್ಟು ದಿನ ಸ್ವಪಕ್ಷದ ನಾಯಕರೇ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಬಳಿಕ ಕಾಂಗ್ರೆಸ್​ ನ ಶಾಸಕರು ಅನುದಾನ ಹಾಗೂ ಕೆಲಸ ಕಾರ್ಯಗಳ ಸಂಬಂಧ ತಮ್ಮದೇ ಸಚಿವರ ವಿರುದ್ಧ ಬೇಸರಗೊಂಡು ಸಿಎಂ ಸಿದ್ದರಾಮಯ್ಯಗೆ ದೂರು ನೀಡಿದ್ದು ಆಯ್ತು. ಇದೀಗ ಸಚಿವರ ಸರದಿ. ಹೌದು..ಸಚಿವ ಶಿವಾನಂದ ಪಾಟೀಲ್ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಚ್ಚರಿ ಅಂದ್ರೆ ಕುಮಾರಸ್ವಾಮಿಯವರನ್ನು ಗುಣಗಾನ ಮಾಡಿದ್ದಾರೆ.

ವಿಜಯಪುರ, (ಆಗಸ್ಟ್ 28): ರಾಜ್ಯ ಕಾಂಗ್ರೆಸ್​ ಸರ್ಕಾರ (Karnataka Congress Governmnet)  ಒಂದಲ್ಲ ಒಂದು ವಿವಾದಕ್ಕೀಡಾಗಿ ಮುಜುಗರ ಅನುಭವಿಸುತ್ತಿದೆ. ಚಾಮುಂಡಿ ಬೆಟ್ಟ, ಧರ್ಮಸ್ಥಳ ಪ್ರಕರಣ, ಗ್ಯಾರಂಟಿಗಳ ಬಗ್ಗೆ ಸ್ವಪಕ್ಷದ ಶಾಸಕ ಅಸಮಾಧಾನ, ಅನುದಾನ ವಿಚಾರವಾಗಿ ಶಾಸಕರ ಬಹಿರಂಗ ಬೇಸರ ಹೊರಹಾಕಿರುವುದರಿಂದ ಸಿದ್ದರಾಮಯ್ಯ (Siddaramaiah) ಸರ್ಕಾರ ಮುಜುಗರಕ್ಕೀಡಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಸರ್ಕಾರದ ಒಂದು ಭಾಗವಾಗಿರುವ ಸಚಿವರೇ ಸಿಡಿದೆದ್ದಿದ್ದಾರೆ. ಹೌದು…ಸಚಿವ ಶಿವಾನಂದ ಪಾಟೀಲ್ ಅವರು ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ (Shivanand Patil), ಕುಮಾರಸ್ವಾಮಿ ಅವರನ್ನು ಹಾಡಿ ಹೊಗಳಿ ಸರ್ಕಾರಿ ವೈದ್ಯಕೀಯ ಕಾಲೇಜು ವಿಚಾರವಾಗಿ ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇಂದು (ಆಗಸ್ಟ್ 28) ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಪಿಪಿಪಿ ಮಾದರಿಯ ಮೆಡಿಕಲ್ ಕಾಲೇಜು ಸ್ಥಾಪನೆ ಪ್ರಸ್ತಾವನೆ ಕೈಬಿಡಿ. ರಾಜ್ಯ ಸರ್ಕಾರ ಕೂಡಲೇ ಪಿಪಿಪಿ ಮಾದರಿಯ ಮೆಡಿಕಲ್ ಕಾಲೇಜು ಸ್ಥಾಪನೆ ಪ್ರಸ್ತಾವನೆ ಕೈಬಿಡಬೇಕು. ಯಾವ ಉದ್ದೇಶಕ್ಕಾಗಿ ಪಿಪಿಪಿ ಮಾದರಿ ಪ್ರಸ್ತಾವನೆ ತರಲಾಗಿದೆ ಗೊತ್ತಿಲ್ಲ. ಸರ್ಕಾರದ ಈ ನಿರ್ಧಾರ ನನಗೆ ನೋವು ತರಿಸಿದೆ. ಯಾರಿಗಾಗಿ ಪಿಪಿಪಿ ಮಾದರಿ ಮೆಡಿಕಲ್ ಕಾಲೇಜು ಎಂದು ನೇರವಾಗಿ ಪ್ರಶ್ನಿಸಿದರು.

ಚುನಾವಣಾ ಪ್ರಣಾಳಿಕೆಯಲ್ಲಿ ವೈದ್ಯಕೀಯ ಕಾಲೇಜು ಭರವಸೆ ನೀಡಿದ್ದೆವು. ಆದರೆ ಈಗ ಏಕೆ ಪಿಪಿಪಿ ಮೆಡಿಕಲ್ ಕಾಲೇಜು ಎಂದು ಪ್ರಶ್ನಿಸಿದ ಸಚಿವ ಶಿವಾನಂದ ಪಾಟೀಲ್, ಈ ಹಿಂದೆ ನಾನು ಆರೋಗ್ಯ ಸಚಿವನಾಗಿದ್ದಾಗ ಜಿಲ್ಲಾಸ್ಪತ್ರೆ ಅಭಿವೃದ್ಧಿ ಮಾಡಿದ್ದೆ. ಎಂಸಿಹೆಚ್ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ದೇಶದಲ್ಲಿ ಅತ್ಯುತ್ತಮ ಸರ್ಕಾರಿ ಆಸ್ಪತ್ರೆ ವಿಜಯಪುರ ಜಿಲ್ಲಾಸ್ಪತ್ರೆಯಾಗಿತ್ತು. ನಾನು ಆರಂಭಿಸಿದ ಹಲವು ಕಟ್ಟಡಗಳನ್ನು ಇನ್ನೂ ಉದ್ಘಾಟನೆ ಮಾಡಿಲ್ಲ. ನನ್ನ ಹೆಸರಿಗೆ ಅನ್ನೋ ಕಾರಣಕ್ಕೆ ಉದ್ಘಾಟನೆ ಮಾಡದೆ ಇರಬಹುದು. ಈ ಹಿಂದೆಯೂ ಜಿಲ್ಲೆಯ ಸಚಿವರು, ಶಾಸಕರು ಸಾಥ್ ನೀಡಿರಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಕುಮಾರಸ್ವಾಮಿ ನಮಗೆ ಸಹಾಯ ಮಾಡಿದ್ರು

ಇನ್ನು ಇದೇ ವೇಳೆ ಅಚ್ಚರಿ ಎಂಬಂತೆ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿಯವರನ್ನು ಹಾಡಿ ಹೊಗಳಿಸಿದ್ದಾರೆ. ಸಮಿಶ್ರ ಸರ್ಕಾರದ ವೇಳೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ವಿಜಯಪುರ ಜಿಲ್ಲಾಸ್ಪತ್ರೆಗಾಗಿ ನನಗೆ ಸಹಾಯ ಮಾಡಿದ್ದರು. ಈ ಮೂಲಕ ಪರೋಕ್ಷವಾಗಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಹಾಗೂ ತಮ್ಮ ಸರ್ಕಾರದ ವಿರುದ್ಧ ಬೇಸರ ವ್ಯಕ್ತಡಿಸಿದರು.

ಈ ಹಿಂದೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಹಾಗೂ ಶಿವಾನಂದ ಪಾಟೀಲ್ ನಡುವೆ ಮುಸುಕಿನ ಗುದ್ದಾಟ ನಡೆದಿರುವುದನ್ನು ಇಲ್ಲಿ ಸ್ಮರಿಸಬಹುದು. ಇದಿಗ ಶಿವಾನಂದ ಪಾಟೀಲ್ ಪತ್ತೆ ಹೆಸರು ಹೇಳದೇ ಜಿಲ್ಲಾಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ವಿಚಾರವಾಗಿ ಎಂಬಿ ಪಾಟೀಲ್ ವಿರುದ್ಧ ಗರಂ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Thu, 28 August 25

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us