AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರೈತರಿಗೆ ಗುಡ್​​ ನ್ಯೂಸ್: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರ ಅಸ್ತು

ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ತೊಗರಿ ಬೇಳೆ ಖರೀದಿಗೆ ನಿಗದಿ ಮಾಡಲಾಗಿರುವ ಅವಧಿ ಬದಲಾಯಿಸಿ, ಶೀಘ್ರ ಖರೀದಿ ಪ್ರಕ್ರಿಯೆ ಆರಂಭಿಸಲು ಸಂಬಂಧಪಟ್ಟ ಸಂಸ್ಥೆಗಳಿಗೆ ಸೂಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಹಾಗೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹ ಕೃಷಿ ಸಚಿವರಿಗೆ ಪತ್ರ ಬರೆದಿದ್ದರು. ಇದೀಗ ಈ ಪತ್ರಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿ ತೊಗರಿ ಖರೀದಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಕರ್ನಾಟಕ ರೈತರಿಗೆ ಗುಡ್​​ ನ್ಯೂಸ್: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರ ಅಸ್ತು
Toor Dal
ಸಂಜಯ್ಯಾ ಚಿಕ್ಕಮಠ
| Updated By: ರಮೇಶ್ ಬಿ. ಜವಳಗೇರಾ|

Updated on: Dec 10, 2025 | 10:59 PM

Share

ಬೆಂಗಳೂರು, (ಡಿಸೆಂಬರ್ 10):  ಒಂದೆಡೆ ಮಳೆ ಹೊಡೆತ ಮತ್ತೊಂದೆಡೆ ಸೂಕ್ತ ಬೆಲೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದ ತೊಗರಿ ಬೇಳೆ ಬೆಳೆದಿದ್ದ ಕರ್ನಾಟಕದ (Karnataka) ರೈತರ ನೇರವಿಗೆ ಕೇಂದ್ರ ಸರ್ಕಾರ ಧಾವಿಸಿದ್ದು, ಕರ್ನಾಟಕದಲ್ಲಿ 9.67 ಲಕ್ಷ ಟನ್ ತೊಗರಿ ಬೇಳೆ (Toor Dal) ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ(MSP) ಯಲ್ಲಿ ನಫೆಡ್ (NAFED) ಮತ್ತು ಎನ್‌ಸಿಸಿಎಫ್ (NCCF) ಮೂಲಕ ಆದ್ಯತೆ ಮೇಲೆ ತೊಗರಿ ಖರೀದಿಗೆ ತ್ವರಿತ ಅನುಮೋದನೆ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (pralhad joshi) ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರೈತರ ಹಿತರಕ್ಷಣೆಗೆ ಸದಾ ಬದ್ಧವಾಗಿರುವ ಕೇಂದ್ರ ಸರ್ಕಾರ, ತಮ್ಮ ವಿಶೇಷ ಮನವಿಗೆ ತಕ್ಷಣ ಸ್ಪಂದಿಸಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಕೂಡಲೇ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಗೆ ಮುಂದಾಗುವಂತೆ ಕೋರಿ ಮೊನ್ನೆ ಮೊನ್ನೆಯಷ್ಟೇ (ಡಿಸೆಂಬರ್ 4) ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದರು. ಇದಕ್ಕೆ ತ್ವರಿತ ಸ್ಪಂದನೆ ನೀಡಿರುವ ಕೃಷಿ ಸಚಿವರು ಐದಾರು ದಿನದಲ್ಲೇ ತೊಗರಿ ಖರೀದಿಗೆ ಅನುಮೋದನೆ ನೀಡಿದ್ದಾರೆ.

ಇದನ್ನೂ ಓದಿ: ಹೋಗಿ ಮೋದಿ, ಅಮಿತ್ ಶಾನ ಕೇಳು: ತೊಗರಿ ಬೆಳೆ ಹಾಳಾಯ್ತು ಎಂದಿದ್ದಕ್ಕೆ ರೈತ ಯುವಕನ ಮೇಲೆ ಮಲ್ಲಿಕಾರ್ಜುನ ಖರ್ಗೆ ಗರಂ

2025-26ರ ಖಾರಿಫ್ ಋತುವಿನಲ್ಲಿ ತೊಗರಿ ಖರೀದಿಗಾಗಿ ಬೆಲೆ ಬೆಂಬಲ ಯೋಜನೆ (PSS) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಡಿ.10ರಂದು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದಾರೆ. ಖರೀದಿ ಪ್ರಾರಂಭದ ದಿನಾಂಕದಿಂದ 90 ದಿನಗಳವರೆಗೆ ರಾಜ್ಯದಲ್ಲಿ PSS ಅಡಿಯಲ್ಲಿ ಒಟ್ಟು 9,67,000 MT ತೊಗರಿ ಖರೀದಿಗೆ ಅನುಮೋದನೆ ನೀಡಿದೆ ಎಂದು ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

2025-26ಕ್ಕೆ ಅಂದಾಜು 12.60 LMT ಉತ್ಪಾದನೆಯೊಂದಿಗೆ ಕರ್ನಾಟಕ ಪ್ರಮುಖ ತೊಗರಿ ಬೆಳೆ ಉತ್ಪಾದಕ ರಾಜ್ಯವಾಗಿದೆ. ಮಾರುಕಟ್ಟೆಯಲ್ಲಿ ಮಾದರಿ ಬೆಲೆ ಕ್ವಿಂಟಾಲ್‌ಗೆ ₹ 5,830 ರಿಂದ 6, 700ರ ನಡುವಿದೆ. 2025-26ಕ್ಕೆ ತೊಗರಿ ಬೆಳೆಗೆ ಘೋಷಿಸಲಾದ MSP ಕ್ವಿಂಟಾಲ್‌ಗೆ ₹. 8,000 ಆಗಿದೆ. ಆದರೆ ಮಾರುಕಟ್ಟೆ ಬೆಲೆ MSP ದರಕ್ಕಿಂತ ಕಡಿಮೆಯಿದೆ. ಹಾಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈ ಕೂಡಲೇ ಬೆಂಬಲ ಬೆಲೆಯಲ್ಲಿ ಖರೀದಿಗೆ ಮುಂದಾಗಿ ರೈತರ ನೆರವಿಗೆ ಬರುವಂತೆ ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು.

ಪ್ರಸಕ್ತ ಖಾರಿಫ್ ಋತುವಿನಲ್ಲಿ (2025-26) ಆದ್ಯತೆ ಆಧಾರದ ಮೇಲೆ NAFED ಮತ್ತು NCCF ಮೂಲಕ ತೊಗರಿ ಖರೀದಿಗೆ ಅನುಮೋದಿಸುವ ಅವಶ್ಯಕತೆಯಿದೆ. ಇದರಿಂದ ತೊಗರಿ ಮಾರಾಟ ತೊಂದರೆ ತಡೆಗಟ್ಟಿ, ರೈತರಿಗೆ ನ್ಯಾಯಯುತ ಬೆಲೆ ಕಲ್ಪಿಸಲು ಸಾಧ್ಯವಾಗುತ್ತದೆ ಎಂದು ಜೋಶಿ ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಚವ್ಹಾಣ ಅವರು ಕರ್ನಾಟಕದ ತೊಗರಿ ಬೆಳೆಗಾರರ ಸಂಕಷ್ಟ ಅರಿತು ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮೋದನೆ ನೀಡುವ ಮೂಲಕ ರೈತರ ಬೆನ್ನಿಗೆ ನಿಂತಿದ್ದಾರೆ. ಇದಕ್ಕಾಗಿ ಈರ್ವರೂ ರೈತಪರ ನಾಯಕರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ