ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನ ನಿಗಾ ವಹಿಸಿ: ದಿನೇಶ್ ಗುಂಡೂರಾವ್

|

Updated on: Jul 26, 2024 | 2:41 PM

ಬೆಂಗಳೂರಿನ ಯಲಹಂಕದದಲ್ಲಿ ಇಂದು (ಜು.26) ಡೆಂಗ್ಯೂ ಹಾಟ್ ಸ್ಪಾಟ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನ ನಿಗಾ ವಹಿಸಿ: ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Follow us on

ಬೆಂಗಳೂರು, ಜುಲೈ 26: ಡೆಂಗ್ಯೂಗೆ (Dengue) ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದದಲ್ಲಿ ಇಂದು (ಜು.26) ಡೆಂಗ್ಯೂ ಹಾಟ್ ಸ್ಪಾಟ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ (Bengaluru) ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ ಎಂದರು.

ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಗ್ಯೂ ಹತೋಟಿಗೆ ತರುವಂತೆ ಸೂಚಿಸಿದ್ದೇನೆ ಎಂದರು.

ಇದನ್ನೂ ಓದಿ: Dengue and Chikungunya: ಮಕ್ಕಳಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ ತಡೆಗಟ್ಟಲು ಏನು ಮಾಡಬೇಕು?

10 ಜಿಲ್ಲೆಗಳ ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನ ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್ ಸ್ಪಾಟ್​ಗಳಿಗೆ ಭೇಟಿ ನೀಡಿ ಡೆಂಗ್ಯೂ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ. ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಗ್ಯೂ ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಅಲ್ಲಿ ಫೀವರ್ ಕ್ಲಿನಿಕ್ ಗಳನ್ನ ತೆರೆದು, ಜ್ವರ ಕಾಣಿಸಿಕೊಳ್ಳುವ ಎಲ್ಲರನ್ನ ಡೆಂಗ್ಯೂ ಟೆಸ್ಟಿಂಗ್ ಗೆ ಒಳಪಡಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ

ಕೇರಳದಲ್ಲಿ ನಿಪಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ನಿಪಾ ವೈರಸ್ ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಿಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.

ರಾಜ್ಯದಲ್ಲಿ ಇತ್ತಿಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಪಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನ ಅನುಸರಿಸಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ