ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಶುಭ ಸುದ್ದಿ; ಬರಲಿವೆ ಹೆಚ್ಚುವರಿ ಬಸ್

|

Updated on: Jun 26, 2024 | 2:38 PM

ಶಾಲೆ, ಕಾಲೇಜು ಸಮಯಕ್ಕೆ ಸರಿಯಾಗಿ ಬಸ್ ಬಾರದೇ ಇರುವುದು, ಬಂದರೂ ಚಾಲಕರು ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೇ ಹೋಗುವುದು ಇತ್ಯಾದಿ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೆಎಸ್​ಆರ್​​ಟಿಸಿ ಇದೀಗ ಕ್ರಮಕ್ಕೆ ಮುಂದಾಗಿದೆ. ಬೇಡಿಕೆ ಹೆಚ್ಚಿರುವ ಕೆಲವು ಮಾರ್ಗಗಳಲ್ಲಿ ಪೀಕ್ ಅವರ್​ನಲ್ಲಿ ಈಗಾಗಲೇ ಹೆಚ್ಚುವರಿ ಬಸ್​ಗಳನ್ನು ಬಿಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಸ್​​ಗಳನ್ನು ಕಾರ್ಯಾಚರಣೆಗೆ ಇಳಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಶುಭ ಸುದ್ದಿ; ಬರಲಿವೆ ಹೆಚ್ಚುವರಿ ಬಸ್
ಕೆಎಸ್​ಆರ್​ಟಿಸಿ ಬಸ್
Follow us on

ಬೆಂಗಳೂರು, ಜೂನ್ 26: ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ ಸಮಸ್ಯೆಯಿಂದ ಪರದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅವಶ್ಯಕತೆ ಇರುವ ಮಾರ್ಗಗಳಲ್ಲಿ ಪೀಕ್ ಅವರ್​​ಗಳಲ್ಲಿ ಹೆಚ್ಚುವರಿ ಬಸ್ ಓಡಿಸಲು ಮುಂದಾಗಿದೆ. ಹಲವೆಡೆ ಈಗಾಗಲೇ ಹೆಚ್ಚುವರಿ ಬಸ್ ಆರಂಭಿಸಲಾಗಿದೆ. ಹೆಚ್ಚಿನ ವಿದ್ಯಾರ್ಥಿಗಳ ಬೇಡಿಕೆ ಇರುವ ಮಾರ್ಗಗಳಲ್ಲಿ ಹೆಚ್ಚಿನ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ವಿದ್ಯಾರ್ಥಿಗಳು ಪ್ರಾಣವನ್ನು ಪಣಕ್ಕಿಟ್ಟು ಕಿಕ್ಕಿರಿದು ತುಂಬಿದ ಬಸ್‌ಗಳ ಹಿಂದೆ ಓಡುವ ಹಾಗೂ ಫುಟ್‌ಬೋರ್ಡ್​​ನಲ್ಲಿ ನಿಂತು ಪ್ರಯಾಣಿಸುವ ಕೆಲವು ವೀಡಿಯೊಗಳು ವೈರಲ್ ಆದ ನಂತರ ಕೆಎಸ್‌ಆರ್‌ಟಿಸಿ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ರಾಮನಗರ, ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್‌ ಪಾಸ್‌ಗಳನ್ನು ನೀಡಲಾಗುತ್ತಿರುವುದು, ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಪ್ರಾರಂಭವಾದ ನಂತರ ಕೆಎಸ್‌ಆರ್‌ಟಿಸಿ ಬಸ್​​ಗಳಲ್ಲಿ ಸಹಜವಾಗಿಯೇ ದಟ್ಟಣೆ ಹೆಚ್ಚಾಗಿದೆ. ಈ ಮಧ್ಯೆ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳನ್ನು ಹತ್ತುವ ಸ್ಥಳಗಳಲ್ಲಿ ಚಾಲಕರು ಬಸ್ ನಿಲ್ಲಿಸದೆ ಹೋಗುತ್ತಿರುವ ಬಗ್ಗೆಯೂ ಆರೋಪಗಳು ಕೇಳಿ ಬಂದಿದ್ದವು. ಇಂತಹ ಸಮಸ್ಯೆಗಳ ವಿರುದ್ಧ ರಾಮನಗರ ಮತ್ತು ಮಂಡ್ಯದಲ್ಲಿ ಕೆಲ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆಯನ್ನೂ ನಡೆಸಿದ್ದರು.

ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಂಡಿದ್ದೇವೆ: ಕೆಎಸ್​ಆರ್​​ಟಿಸಿ

ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಗಮವು ಕ್ರಮ ಕೈಗೊಂಡಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ತಿಳಿಸಿದ್ದಾರೆ. ಕಳೆದ ವರ್ಷ ವಿಶೇಷವಾಗಿ ತುಮಕೂರು, ರಾಮನಗರ ಮತ್ತು ಚಿಕ್ಕಬಳ್ಳಾಪುರದಂತಹ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಬಸ್‌ ಸಮಸ್ಯೆಗಳನ್ನು ಎದುರಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬರಲಿದೆ ಹೊಸ ಮಾದರಿಯ ಕೆಎಸ್ಆರ್‌ಟಿಸಿ ಬಸ್: ಏನಿದರ ವಿಶೇಷ? ಇಲ್ಲಿದೆ ಮಾಹಿತಿ  

ಹೆಚ್ಚು ದೂರುಗಳಿರುವ ಮಾರ್ಗಗಳನ್ನು ಗುರುತಿಸಲಾಗಿದೆ. ನಾವು ತಕ್ಷಣವೇ ಆ ಮಾರ್ಗಗಳ ಸಮಸ್ಯೆಗಳನ್ನು ಒಂದೊಂದಾಗಿ ಪರಿಹರಿಸಲು ಪ್ರಾರಂಭಿಸಿದ್ದೇವೆ. ಅಂತಹ ಮಾರ್ಗಗಳಲ್ಲಿ, ವಿಶೇಷವಾಗಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಪೀಕ್ ಅವರ್‌ನಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಮಸ್ಯೆ ಇರುವ ಮಾರ್ಗಗಳಲ್ಲಿ ಮುಂಬರುವ ತಿಂಗಳುಗಳಲ್ಲಿ, 500 ಕ್ಕೂ ಹೆಚ್ಚು ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುವುದು. 2,000 ಹೆಚ್ಚಿನ ಸಿಬ್ಬಂದಿಯನ್ನು ಸೇರಿಸುತ್ತೇವೆ. ಈ ವರ್ಷದಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:22 pm, Wed, 26 June 24