ಲೋಕಾಯುಕ್ತ FIR ಕುರಿತು ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ: ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು

| Updated By: ಗಂಗಾಧರ​ ಬ. ಸಾಬೋಜಿ

Updated on: Sep 27, 2024 | 10:31 PM

ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ವಿರುದ್ಧ ಇಂದು ಎಫ್‌ಐಆರ್‌ ದಾಖಲಾಗಿದೆ. ಕೇಸ್‌ನಿಂದ ಪಾರಾಗೋದು ಹೇಗೆ ಅಂತಾ ಸಿಎಂ ಪ್ಲ್ಯಾನ್‌ ಮಾಡುತ್ತಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಎಫ್​​ಐಆರ್​ ದಾಖಲಾಗಿರುವುದರಲ್ಲಿ ಯಾವುದೇ ವಿಶೇಷ ಇಲ್ಲ ಎಂದು ಹೇಳಿದ್ದಾರೆ. ಜೊತೆಗೆ ತಮ್ಮ ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು.

ಲೋಕಾಯುಕ್ತ FIR ಕುರಿತು ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ: ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು
ಲೋಕಾಯುಕ್ತ FIR ಕುರಿತು ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ: ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು
Follow us on

ಮೈಸೂರು, ಸೆಪ್ಟೆಂಬರ್​ 27: ಒಂದೆಡೆ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ತಲೆ ಕೆಡಿಸಿಕೊಳ್ಳದ ಸಿಎಂ ಬಹಳ ದಿನಗಳ ನಂತರ ಸುದೀರ್ಘ ಎಂಟುವರೆ ಗಂಟೆಗಳ ಕಾಲ ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಮಾಡಿದ್ದಾರೆ. ನೀರಾವರಿ ಕೃಷಿ ತೋಟಗಾರಿಕೆ, ಪ್ರವಾಸೋದ್ಯಮ, ಕಂದಾಯ ಸೇರಿ 28 ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮುಡಾ ಕೇಸ್​ನಲ್ಲಿ ಎಫ್​ಐಆರ್​ ದಾಖಲಾದ ಬಗ್ಗೆ ಫಸ್ಟ್​​ ರಿಯಾಕ್ಷನ್ ನೀಡಿದ್ದಾರೆ.

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 17ಎ ಅಡಿ ತನಿಖೆ ನಡೆಸಿ ವರದಿ ನೀಡುವಂತೆ ಕೋರ್ಟ್ ಹೇಳಿದೆ. ಕೋರ್ಟ್ ಆದೇಶದನ್ವಯ FIR ದಾಖಲಿಸಿ ತನಿಖೆ ನಡೆಸುತ್ತಾರೆ. ಜನಪ್ರತಿನಿಧಿಗಳ ಆದೇಶದ ಅನ್ವಯ ಲೋಕಾಯುಕ್ತರಿಂದ ತನಿಖೆ ನಡೆಸಿ 90 ದಿನಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡುತ್ತಾರಾ: ಸಿದ್ದರಾಮಯ್ಯ ಪ್ರಶ್ನೆ

ರಾಜೀನಾಮೆ ನೀಡುವ ವಿಚಾರವಾಗಿ ಮಾತನಾಡಿದ ಅವರು, ಚುನಾವಣಾ ಬಾಂಡ್ ವಿಚಾರದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ಆಗಿದೆ. ಅವರು ರಾಜೀನಾಮೆ ನೀಡುತ್ತಾರಾ? ಚುನಾವಣಾ ಬಾಂಡ್ ಹೆಸರಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡುತ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಮುಡಾ ಕೇಸ್: ಸಿದ್ದರಾಮಯ್ಯಗೆ ಬಿಎಸ್​ವೈ, ರಾಮಕೃಷ್ಣ ಹೆಗಡೆ ಉದಾಹರಣೆ ಕೊಟ್ಟು ಟಾಂಗ್ ಕೊಟ್ಟ ಅಶೋಕ್

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ. ಹಾಗಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಮೊದಲು ಅವರು ರಾಜೀನಾಮೆ ನೀಡಲಿ, ಆನಂತರ ನನಗೆ ಕೇಳಲಿ ಎಂದು ತಿರುಗೇಟು ನೀಡಿದ್ದಾರೆ.

ವ್ಯವಸ್ಥಿತ ದಸರಾ ಮಹೋತ್ಸವ ಆಚರಣೆಗೆ ಸಿಎಂ ಸೂಚನೆ

ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಅಕ್ಟೋಬರ್ 2ರಂದು ನಾನು ಮತ್ತೆ ಮೈಸೂರಿಗೆ ಬರುತ್ತೇನೆ. ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ದಸರಾ ಉದ್ಘಾಟನೆ ಮಾಡುತ್ತಾರೆ. ಅಂದೇ ದಸರಾ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ವ್ಯವಸ್ಥಿತವಾಗಿ ದಸರಾ ಮಹೋತ್ಸವವನ್ನು ಆಚರಣೆಗೆ ಆದೇಶಿಸಲಾಗಿದ್ದು, ರಸ್ತೆ ಗುಂಡಿ ಮುಚ್ಚುವಂತೆ ಮತ್ತು ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

ಡ್ರಗ್ಸ್, ಗಾಂಜಾ ಹಾವಳಿ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯುವ ಸಮೂಹ ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ. ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಟಾರ್ಗೆಟ್ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮುಡಾ ಪ್ರಕರಣ: ಸಿಎಂ ವಿರುದ್ಧ ಎಫ್​ಐಆರ್ ದಾಖಲಾದರೂ ಸಹ ಮತ್ತೆ ಹೈಕೋರ್ಟ್​ ಮೆಟ್ಟಿಲೇರಿದ ಸ್ನೇಹಮಯಿ ಕೃಷ್ಣ

ಮೈಸೂರು ಜಿಲ್ಲೆಯಾದ್ಯಂತ ಉತ್ತಮವಾಗಿ ಮಳೆಯಾಗಿದೆ. ಉತ್ತಮ ಮಳೆಯಾಗಿದ್ದರಿಂದ ಎಲ್ಲ ಜಲಾಶಯಗಳು ತುಂಬಿವೆ. ತಮಿಳುನಾಡಿಗೆ 250 ಟಿಎಂಸಿ ನೀರು ಹರಿದುಹೋಗಿದೆ. ಸುಪ್ರೀಂಕೋರ್ಟ್ ತೀರ್ಪಿಗಿಂತ ಹೆಚ್ಚುವರಿ ನೀರು ಹೋಗಿದೆ. ಈ ವರ್ಷ ತಮಿಳುನಾಡಿನ ಜೊತೆ ಯಾವುದೇ ತಕರಾರು ಇಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.