AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧದ ಮುಡಾ ಭ್ರಷ್ಟಾಚಾರ ಆರೋಪವನ್ನು ಸಂಸತ್​ನಲ್ಲಿ ಎತ್ತಿ ತೋರಿಸಿದ ಲೆಹರ್ ಸಿಂಗ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಪರಿಶಿಷ್ಟ ಪಂಗಡಗಳ ಕಲ್ಯಾಣ ನಿಧಿ ಲೂಟಿ ಮತ್ತು ಮುಡಾ ಹಗರಣದಲ್ಲಿ ಬೃಹತ್ ಭ್ರಷ್ಟಾಚಾರದ ಆರೋಪ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು  ಸಂಸತ್ತಿನಲ್ಲಿ ಬಿಜೆಪಿ ಸಂಸದ ಲಹರ್ ಸಿಂಗ್ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧದ ಮುಡಾ ಭ್ರಷ್ಟಾಚಾರ ಆರೋಪವನ್ನು ಸಂಸತ್​ನಲ್ಲಿ ಎತ್ತಿ ತೋರಿಸಿದ ಲೆಹರ್ ಸಿಂಗ್
ಲೆಹರ್ ಸಿಂಗ್, ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Jul 29, 2024 | 10:22 PM

Share

ನವದೆಹಲಿ, (ಜುಲೈ 29 ): ಸಂಸತ್ತಿನಲ್ಲಿ ನಡೆಯುತ್ತಿರುವ ಬಜೆಟ್ 2024-25ರ ಮೇಲಿನೆ ಚರ್ಚೆಯ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಮಾಡಿದ ತಮ್ಮ ತೀಕ್ಷ್ಣ ಭಾಷಣದಲ್ಲಿ, ಬಿಜೆಪಿ ಸಂಸದ ಲೆಹರ್ ಸಿಂಗ್ ಸಿರೋಯಾ, ವಾಲ್ಮೀಕಿ ನಿಗಮ ಹಗರಣ ಹಾಗೂ MUDA ಭೂಹಗರಣದ ಭ್ರಷ್ಟಾಚಾರ ಆರೋಪ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಮತ್ತು ಮುಡಾ ಹಗರಣ ಕುರಿತಂತೆ ಕರ್ನಾಟಕದ ಮುಖ್ಯಮಂತ್ರಿಗಳ ಮೇಲಿರುವ ಗಂಭೀರ ಭ್ರಷ್ಟಾಚಾರ ಆರೋಪಗಳನ್ನು ಲೆಹರ್ ಸಿಂಗ್ ಎತ್ತಿ ತೋರಿಸಿದರು.

“ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರ ಕಲ್ಯಾಣಕ್ಕಾಗಿ ಉದ್ದೇಶಿಸಲಾದ 187 ಕೋಟಿ ರೂ.ಗಳನ್ನು ಅಕ್ರಮವಾಗಿ ವರ್ಗಾಯಿಸಲಾಗಿದ್ದು, ನವದೆಹಲಿಯ ಕಾಂಗ್ರೆಸ್ ನಾಯಕತ್ವದ ಆದೇಶದ ಮೇರೆಗೆ ತೆಲಂಗಾಣ, ಆಂಧ್ರಪ್ರದೇಶಗಳ ಮೂಲಕ ಆ ಪಕ್ಷ ಬಳಸಿಕೊಂಡಿದೆ. ನಿಷ್ಪಕ್ಷಪಾತ ತನಿಖೆ ಮೂಲಕ ಈ ಅಕ್ರಮ ವರ್ಗಾವಣೆಗಳ ನಿಜವಾದ ವ್ಯಾಪ್ತಿ ಬಹಿರಂಗವಾಗಲಿದೆ” ಎಂದು ಲಹರ್ ಸಿಂಗ್ ಪ್ರತಿಪಾದಿಸಿದರು. ಒಂದು ವೇಳೆ ಸದನದಲ್ಲಿ ತಾವು ಹೇಳಿದ ವಿಷಯಗಳು ಸುಳ್ಳು ಎನ್ನುವುದು ಸಾಬೀತಾದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಲೆಹರ್ ಸಿಂಗ್ ನುಡಿದರು.

ಇದನ್ನೂ ಓದಿ: ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲ: ನಿರ್ಮಲಾ ಸೀತಾರಾಮನ್​​ರನ್ನು ಸಂಪುಟದಿಂದ ಕೈಬಿಡುವಂತೆ ಸಿಎಂ ಒತ್ತಾಯ

ದಲಿತರೊಬ್ಬರಿಗೆ ಸೇರಿದ ಭೂಮಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಬಂಧಿ ಪಡೆದುಕೊಂಡು, ನಂತರ ಅದನ್ನು ಮುಖ್ಯಮಂತ್ರಿಗಳ ಪತ್ನಿಗೆ ಉಡುಗೊರೆಯಾಗಿ ನೀಡಲಾಗಿದೆ. ನಂತರ ನಡೆದ ಬೆಳವಣಿಗೆಗಳಲ್ಲಿ, ಬದಲಿಯಾಗಿ ಮುಖ್ಯಮಂತ್ರಿಗಳ ಪತ್ನಿ ಪ್ರಶ್ನಾರ್ಹ ಸಂದರ್ಭಗಳಲ್ಲಿ ಮೈಸೂರಿನ ಐಷಾರಾಮಿ ಪ್ರದೇಶದಲ್ಲಿ 14 ದೊಡ್ಡ ನಿವೇಶನಗಳನ್ನು ಪಡೆದಿದ್ದಾರೆ. ಈಗ ಮುಖ್ಯಮಂತ್ರಿಗಳು ತಮ್ಮ ಸರ್ಕಾರದಿಂದಲೇ 62 ಕೋಟಿ ರೂ. ಆರ್ಥಿಕ ಪರಿಹಾರ ನೀಡುವಂತೆ ಕೇಳಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಂಸದರು ಹೇಳಿದರು.

ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಖರ್ಗೆ ಕೇಳಬೇಕಿತ್ತು

ದಲಿತರಿಗೆ ಆಗಿರುವ ಅನ್ಯಾಯದ ಬಗ್ಗೆ ಮೌನ ವಹಿಸಿದ್ದಕ್ಕಾಗಿ ಮತ್ತು ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸದ ಕರ್ನಾಟಕದ ಗೌರವಾನ್ವಿತ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಲಹರ್ ಸಿಂಗ್ ನಿರಾಶೆ ವ್ಯಕ್ತಪಡಿಸಿದರು. “ಕರ್ನಾಟಕದಲ್ಲಿ ದಲಿತರ ನಿಧಿಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಮತ್ತು ಅವರ ಕಲ್ಯಾಣಕ್ಕಾಗಿ ಮೀಸಲಾದ ಹಣವನ್ನು ರಾಜ್ಯ ಸರ್ಕಾರದ ಗ್ಯಾರಂಟಿಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ” ಎಂದು ಲಹರ್ ಸಿಂಗ್ ಹೇಳಿದರು. ಸೋನಿಯಾ ಗಾಂಧಿ ರಾಜಕೀಯಕ್ಕೆ ಬರುವುದಕ್ಕಿಂತ ಮುಂಚೆಯೇ ಶಾಸಕರಾಗಿ ಮತ್ತು ಸಚಿವರಾಗಿ ಸೇವೆ ಸಲ್ಲಿಸಿದ ಖರ್ಗೆ ಅವರಂತಹ ಹಿರಿಯ ನಾಯಕರು ಈಗ ಅವರಿಂದ ನಿರ್ದೇಶನ ಪಡೆಯುತ್ತಿರುವುದು ದುರದೃಷ್ಟಕರ ಎಂದು ಸಂಸದರು ಹೇಳಿದರು.

ಹಗರಣಗಳನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರನ್ನು ಕಾಂಗ್ರೆಸ್ ಸರಕಾರ ಬಂಧಿಸಿದೆ. ಪಾರದರ್ಶಕತೆಗಾಗಿ ಆರ್‌ಟಿಐ ಕಾಯ್ದೆಯನ್ನು ತರುವಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಪಾತ್ರವನ್ನು ಹೊಗಳಿದ ಲಹರ್ ಸಿಂಗ್, ಮುಡಾ ಹಗರಣವನ್ನು ಬಹಿರಂಗಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಆರ್‌ಟಿಐ ಕಾರ್ಯಕರ್ತರನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಬಂಧಿಸಿದೆ ಎನ್ನುವ ಮೂಲಕ ವಿಪರ್ಯಾಸವನ್ನು ಎತ್ತಿ ತೋರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More