ಮುಡಾ ಹಗರಣ: ನವೆಂಬರ್ 6 ರಂದು ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುವುದು ಅನುಮಾನ, ಕಾರಣ ಇಲ್ಲಿದೆ

ಮುಡಾ ಹಗರಣದಲ್ಲಿ ಕೊನೆಗೂ ಪ್ರಮುಖ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಲೋಕಾಯುಕ್ತ ಮುಂದಾಗಿದೆ. ವಿಚಾರಣೆಗೆ ಹಾಜರಾಗುವಂತೆ ಸಿಎಂಗೆ ನೋಟಿಸ್ ಜಾರಿ ಮಾಡಿದೆ. ಅದರಂತೆ, ವಿಚಾರಣೆಗೆ ಹಾಜರಾಗುವುದಾಗಿ ಸಿದ್ದರಾಮಯ್ಯ ಕೂಡ ಹೇಳಿದ್ದಾರೆ. ಆದಾಗ್ಯೂ, ಅವರು ವಿಚಾರಣೆಗೆ ಹಾಜರಾಗುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಇದಕ್ಕೆ ಬಲವಾದ ಕಾರಣ ಇಲ್ಲಿದೆ.

ಮುಡಾ ಹಗರಣ: ನವೆಂಬರ್ 6 ರಂದು ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುವುದು ಅನುಮಾನ, ಕಾರಣ ಇಲ್ಲಿದೆ
ಸಿದ್ದರಾಮಯ್ಯ
Edited By:

Updated on: Nov 05, 2024 | 7:25 AM

ಮೈಸೂರು, ನವೆಂಬರ್ 5: ಮುಡಾ ಹಗರಣ ಸಂಬಂಧ ತನಿಖೆ ಚುರುಕುಗೊಳಿಸಲು ಮುಂದಾಗಿರುವ ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿ ಸಿಎಂ ಸಿದ್ದರಾಮಯ್ಯಗೆ ಸೋಮವಾರ ನೋಟಿಸ್ ನೀಡಿದ್ದಾರೆ. ಮತ್ತೊಂದೆಡೆ, ಉಪಚುನಾವಣೆ ಪ್ರಚಾರವೂ ತೀವ್ರಗೊಂಡಿದೆ. ಈ ಸಂದರ್ಭದಲ್ಲೇ ಸಿಎಂ ವಿಚಾರಣೆಗೆ ಲೋಕಾಯುಕ್ತ ಮುಂದಾಗಿದೆ. ಅದರಂತೆ, ನವೆಂಬರ್ 6ರಂದು ಲೋಕಾಯುಕ್ತ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ಅವರು ವಿಚಾರಣೆಗೆ ಹಾಜರಾಗುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುತ್ತಾರೋ ಇಲ್ಲವೋ ಎಂಬ ಅನುಮಾನ ಬಲವಾಗಲು ಕಾರಣ, ನವೆಂಬರ್ 6ರಂದು ಮುಖ್ಯಮಂತ್ರಿಗಳ ದಿನಚರಿ. ಸೋಮವಾರ ರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ವಾಟ್ಸ್​​ಆ್ಯಪ್ ಗ್ರೂಪ್​ನಲ್ಲಿ ನವೆಂಬರ್ 6ರ ಅವರ ದಿನದ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದೆ.

ನವೆಂಬರ್ 6ರಂದು ಸಿದ್ದರಾಮಯ್ಯ ಕಾರ್ಯಕ್ರಮಗಳೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ವೇಳಾಪಟ್ಟಿ ಪ್ರಕಾರ ನವೆಂಬರ್ 6ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಚನ್ನಪಟ್ಟಣ ಉಪಚುನಾವಣೆ ಪ್ರಚಾರ ಸಂಬಂಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಪರ ಪ್ರಚಾರ ನಡೆಸಲಿದ್ದಾರೆ. ವಿವಿಧ ಗ್ರಾಮಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಸಿಎಂ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ಮೊದಲ ಬಾರಿ ತನಿಖೆ ಎದುರಿಸುತ್ತಿರುವ ಸಿದ್ದರಾಮಯ್ಯ

ಸಿದ್ದರಾಮಯ್ಯ ಶಾಸಕರಾಗಿ, ಸಚಿವರಾಗಿ, ಡಿಸಿಎಂ ಆಗಿ, ಎರಡು ಬಾರಿ ಮುಖ್ಯಮಂತ್ರಿ ಆದವರು. ಸುದೀರ್ಘ 40 ವರ್ಷದ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಳಂಕ ಅಂಟಿಸಿಕೊಂಡಿರಲಿಲ್ಲ. ಯಾವುದೇ ವಿಚಾರಣೆಯನ್ನೂ ಎದುರಿಸಿರಲಿಲ್ಲ. ಇದೀಗ ಮುಡಾ ಸೈಟ್ ವಿಚಾರದಲ್ಲಿ ವಿಚಾರಣೆ ಎದುರಿಸಲಿದ್ದಾರೆ. ಮೊದಲ ಬಾರಿ ತನಿಖಾ ಸಂಸ್ಥೆ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.

ಇದನ್ನೂ ಓದಿ: ಮುಡಾ ಹಗರಣ ಪ್ರಕರಣ​: ವಿಚಾರಣೆಗೆ ಹಾಜರಾಗುವಂತೆ ಎ1 ಸಿದ್ದರಾಮಯ್ಯಗೆ ನೋಟಿಸ್

ಈ ಮಧ್ಯೆ, ಶಿಗ್ಗಾಂವಿ ಉಪಚುನಾವಣಾ ಪ್ರಚಾರ ವೇಳೆ ಸೋಮವಾರ ಹುರುಳಿಕುಪ್ಪೆಯಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಎಲ್ಲರೂ ಸೇರಿ ನನ್ನ ವಿರುದ್ಧ ಹುನ್ನಾರ ಮಾಡಿದ್ದಾರೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಹೊಟ್ಟೆ ಕಿಚ್ಚಿನಿಂದ ಸಹಿಸದೆ ಹೇಗಾದರೂ ಮಾಡಿ ನನ್ನ ಇಳಿಸಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಚಾರಣೆ ಎದುರಿಸಲಿ ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us