ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯಲ್ಲಿ ಏನೇನಿದೆ? ಇಲ್ಲಿದೆ ವಿವರ

ಮುಡಾ ಹಗರಣದಲ್ಲಿ ಹೈಕೋರ್ಟ್‌ನ ಏಕಸದಸ್ಯ ಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿಚಾರದಲ್ಲಿ ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಹಲವು ಅಂಶಗಳನ್ನು ಮಂಡಿಸಲಾಗಿದೆ. ಮೇಲ್ಮನವಿಯಲ್ಲಿ ಏನೇನಿದೆ ಎಂಬ ಮಾಹಿತಿ ಇಲ್ಲಿದೆ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯಲ್ಲಿ ಏನೇನಿದೆ? ಇಲ್ಲಿದೆ ವಿವರ
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯಲ್ಲಿ ಏನೇನಿದೆ? ಇಲ್ಲಿದೆ ವಿವರ
Follow us
| Updated By: ಗಣಪತಿ ಶರ್ಮ

Updated on: Oct 26, 2024 | 10:22 AM

ಬೆಂಗಳೂರು, ಅಕ್ಟೋಬರ್ 26: ಮುಡಾ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಎತ್ತಿಹಿಡಿದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ಇದೀಗ ಆ ಮೇಲ್ಮನವಿಯಲ್ಲಿ ಸಿದ್ದರಾಮಯ್ಯ ಪರ ವಕೀಲರು ಏನೇನು ಉಲ್ಲೇಖಿಸಿದ್ದಾರೆ ಎಂಬ ಅಂಶ ತಿಳಿದುಬಂದಿದೆ.

ಸಿದ್ದರಾಮಯ್ಯ ಮೇಲ್ಮನವಿಯಲ್ಲೇನಿದೆ?

ಜುಲೈ 26 ರಂದು ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ದೂರು ನೀಡಿದ ದಿನವೇ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಿಎಂ ರಹಿತವಾದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವಾಗಿತ್ತು. ಆದರೂ ರಾಜ್ಯಪಾಲರು ಕ್ಯಾಬಿನೆಟ್ ಸಲಹೆ ಪಾಲಿಸದೇ ಲೋಪವೆಸಗಿದ್ದಾರೆ. 17 ಎ ಅಡಿಯಲ್ಲಿ ಪೊಲೀಸ್ ಅಧಿಕಾರಿ ರಾಜ್ಯಪಾಲರ ಅನುಮತಿ ಕೇಳಬೇಕು. ಆದರೆ ಖಾಸಗಿ ವ್ಯಕ್ತಿಯ ದೂರು ಪರಿಗಣಿಸಿ ಅನುಮತಿ ನೀಡಲಾಗಿದೆ. ರಾಜ್ಯಪಾಲರು ಅನುಮತಿ ನೀಡುವಾಗ ವಿವೇಚನೆ ಬಳಸಿಲ್ಲ. ಈ ಅಂಶಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ಪರಿಗಣಿಸಿಲ್ಲ. ಏಕಸದಸ್ಯ ಪೀಠ ನ್ಯಾಯಾಂಗದ ಪರಿಶೀಲನಾ ಅಧಿಕಾರವನ್ನು ಸೂಕ್ತವಾಗಿ ಬಳಸಿಲ್ಲ. ಹೀಗಾಗಿ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದುಪಡಿಸಬೇಕು ಎಂದು ಸಿದ್ದರಾಮಯ್ಯ ಪರ ವಕೀಲರು ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಎ1 ಸಿದ್ದರಾಮಯ್ಯ ವಿಚಾರಣೆ ಮಾತ್ರ ಬಾಕಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ಬಗ್ಗೆ ಕುತೂಹಲ ಹೆಚ್ಚಾಗಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿಚಾರಣೆಗೆ ಹಾಜರಾಗಿದ್ದರು. ಮುಡಾ ಪ್ರಕರಣದ ಎಫ್ಐಆರ್​ನಲ್ಲಿ ಪಾರ್ವತಿ 2ನೇ ಆರೋಪಿಯಾಗಿದ್ದಾರೆ.

ಈಗಾಗಲೇ ಎ3 ಮಲ್ಲಿಕಾರ್ಜುನಸ್ವಾಮಿ, ಎ4 ದೇವರಾಜು ಕರೆಸಿ ವಿಚಾರಣೆ ನಡೆಸಲಾಗಿದೆ. ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳ ವಿಚಾರಣೆ ಸಹ ಅಂತ್ಯಗೊಂಡಿದೆ. ಹಿಂದಿನ ಡಿಸಿ ಕುಮಾರ್ ನಾಯಕ್, ಮಾಜಿ ಸಚಿವ ಬಚ್ಚೇಗೌಡ ವಿಚಾರಣೆ ನಡೆಸಲಾಗಿದೆ. ಸದ್ಯ ಮುಡಾ ಪ್ರಕರಣದಲ್ಲಿ ಎ1 ಸಿಎಂ ಸಿದ್ದರಾಮಯ್ಯ ವಿಚಾರಣೆ ಮಾತ್ರ ಬಾಕಿ ಇದೆ. ಸಿಎಂ ವಿಚಾರಣೆ ಯಾವಾಗ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಮುಡಾ ತನಿಖೆಗೆ ಅನುಮತಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿದ್ದರಾಮಯ್ಯ

ಮತ್ತೊಂದೆಡೆ, ರಾಜ್ಯದಲ್ಲಿ ಉಪಚುನಾವಣೆ ಕಾವು ಸಹ ಜೋರಾಗಿದೆ. ಚುನಾವಣೆಯ ಭರಾಟೆ ಸಂದರ್ಭದಲ್ಲೇ ಮುಡಾ ಸಂಬಂಧ ಸಿಎಂ ಸಿದ್ದರಾಮಯ್ಯರನ್ನು ವಿಚಾರಣೆಗೆ ಲೋಕಾಯುಕ್ತ ಒಳಪಡಿಸುತ್ತಾ? ಹೈಕೋರ್ಟ್​ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ, ತೀರ್ಪಿನ ಬಗ್ಗೆ ಕುತೂಹಲ ಇದೀಗ ಹೆಚ್ಚಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ