ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ಚಟುವಟಿಕೆ ನಿಷೇಧ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದ ಪತ್ರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿದೆ. ಈ ಬೆನ್ನಲ್ಲೇ ನಿಷೇಧ ಕುರಿತಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.

ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ, ಆರ್​​ಎಸ್​​ಎಸ್​
Edited By:

Updated on: Oct 15, 2025 | 9:57 PM

ಮೈಸೂರು, ಅಕ್ಟೋಬರ್​ 15: ಕರ್ನಾಟಕದಲ್ಲಿ ಸರ್ಕಾರಿ ಜಾಗಗಳಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ (RSS) ಚಟುವಟಿಕೆಗಳನ್ನು ನಿಷೇಧಿಸಬೇಕೆಂಬ ಆಗ್ರಹಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪರೋಕ್ಷವಾಗಿ ಸುಳಿವು ನೀಡಿದ್ದು, ಆ ಮೂಲಕ ಸರ್ಕಾರಿ ಜಾಗದಲ್ಲಿ ಆರ್​​ಎಸ್​​ಎಸ್​​ ಚಟುವಟಿಕೆ ನಿಷೇಧ ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮೈಸೂರಿನಲ್ಲಿ ನಡೆದ ಬೌದ್ಧ ಮಹಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿನಲ್ಲಿ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಸ್ವಯಂಸೇವಾ ಸಂಘದ ಚಟುವಟಿಕೆ ನಿಷೇಧ ಮಾಡಲಾಗಿದೆ. ತಮಿಳುನಾಡಿನಂತೆ ಕರ್ನಾಟಕದಲ್ಲಿ ಜಾರಿ ಮಾಡಿ ಎಂದು ಹೇಳಿದ್ದಾರೆ. ತಮಿಳುನಾಡಿನಿಂದ ಆ ಆದೇಶದ ವರದಿಯನ್ನು ತರಿಸಿಕೊಳ್ಳುತ್ತಿದ್ದೇವೆ. ಈ ಬಗ್ಗೆ ಗಮನಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇನೆ ಎಂದರು.

ತಮಿಳುನಾಡಿನ ವರದಿ ಪರಿಶೀಲಿಸಿದ ಬಳಿಕ ಕ್ರಮವೆಂದ ಸಿಎಂ

ಸಚಿವ ಪ್ರಿಯಾಂಕ್​ ಖರ್ಗೆಗೆ ಬೆದರಿಕೆ ವಿಚಾರವಾಗಿ ಮಾತನಾಡಿದ ಅವರು, ದುಷ್ಟ ಶಕ್ತಿಗಳು ಸಚಿವ ಪ್ರಿಯಾಂಕ್​ ಖರ್ಗೆಗೆ ಬೆದರಿಕೆ ಹಾಕುತ್ತಿವೆ. ಆ ಬೆದರಿಕೆಗೆ ಪ್ರಿಯಾಂಕ್​ ಖರ್ಗೆ ಜಗ್ಗಲ್ಲ, ನಾವು ಸಹ ಜಗ್ಗಲ್ಲ. ಪ್ರಿಯಾಂಕ್​ ಖರ್ಗೆ ಪತ್ರ ಬರೆದಿರುವುದರಲ್ಲಿ ತಪ್ಪೇನಿದೆ ಹೇಳಿ ಎಂದು ಪ್ರಶ್ನಿಸಿದರು. ಪ್ರಿಯಾಂಕ್ ಖರ್ಗೆ ಪತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ‌. ತಮಿಳುನಾಡಿನ ಆ ಆದೇಶದ ವರದಿಯನ್ನು ಸಿಎಸ್​ ಪರಿಶೀಲಿಸಿದ ಬಳಿಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಬೆದರಿಕೆ ಕರೆಗಳು ಬರುತ್ತಲೇ ಇವೆ, ಆದರೂ ದೇಶವನ್ನು viRuSS ಗಳಿಂದ ಶುದ್ದೀಕರಿಸುವ ಸಮಯವಿದು: ಪ್ರಿಯಾಂಕ್ ಖರ್ಗೆ

ಇನ್ನು ಈ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಯಾವಾಗಲೂ ಧಮ್ ಇದ್ದರೆ ಬ್ಯಾನ್ ಮಾಡಿ ಎಂದು ಹೇಳುತ್ತಾರೆ. ಕಳೆದ ಚುನಾವಣೆಯಲ್ಲಿ ಆ ರೀತಿ ಹೇಳಿದ್ದರು, ನಂತರ ಏನಾಯ್ತು ಗೊತ್ತಲ್ವಾ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

ಸಾಕ್ಷಿ ಪುರಾವೆ ಇಲ್ಲದೆ ಯಾವತ್ತೂ ನಾನು ಮಾತನಾಡುವುದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಅಧಿಕೃತವಾಗಿ ದೂರು ನೀಡುವ ಬಗ್ಗೆ ಗೃಹ ಸಚಿವರ ಜೊತೆಗೆ ಚರ್ಚೆ ಮಾಡುತ್ತೇನೆ. ಬೆದರಿಕೆ ಕರೆಗಳ ಬಗ್ಗೆ ದೂರು ನೀಡುವುದು ಅತ್ಯಂತ ಸುಲಭದ ಕೆಲಸ. ಹಲವು ನಂಬರ್​​ ಟ್ರೇಸ್​ ಆಗುವುದಿಲ್ಲ ಕೆಲ ನಂಬರ್ ಟ್ರೇಸ್ ಆಗುತ್ತೆ. ನಾನು ಮಾತಾಡುವಾಗ ದಾಖಲೆ ಇಲ್ಲದೆ ಮಾತನಾಡುವುದಿಲ್ಲ. ಸಾಕ್ಷಿ ಪುರಾವೆ ಇಲ್ಲದೆ ಯಾವತ್ತೂ ನಾನು ಮಾತನಾಡುವುದಿಲ್ಲ. ಇದು ಬಿಜೆಪಿಯ ಸಂಸ್ಕೃತಿನಾ ಅಂತ ನೀವೇ ಅವರಿಗೆ ಪ್ರಶ್ನೆ ಕೇಳಿ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us