ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧಿಸಲ್ಲ: ಡಿಕೆಶಿ ರಾಜಕೀಯ ತಂತ್ರ ಬಿಚ್ಚಿಟ್ಟ ಜಿಟಿಡಿ

ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಈ ಬೈ ಎಲೆಕ್ಷನ್​ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಣಕ್ಕಿಳಿಯಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ಡಿಕೆಶಿ, ಕ್ಷೇತ್ರದಲ್ಲಿರುವ ಕೆಲ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸುಳಿವು ಸಹ ನೀಡಿದ್ದಾರೆ. ಆದ್ರೆ, ಡಿಕೆ ಶಿವಕುಮಾರ್ ಅವರದ್ದು ರಾಜಕೀಯ ತಂತ್ರಗಾರಿಕೆ ಅಷ್ಟೇ ಎಂದು ಜಿಟಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ.

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧಿಸಲ್ಲ: ಡಿಕೆಶಿ ರಾಜಕೀಯ ತಂತ್ರ ಬಿಚ್ಚಿಟ್ಟ ಜಿಟಿಡಿ
ಡಿಕೆ ಶಿವಕುಮಾರ್

Updated on: Jun 21, 2024 | 4:43 PM

ಮೈಸೂರು, (ಜೂನ್ 21): ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಚನ್ನಪಟ್ಟಣದ ಉಪ ಚುನಾವಣೆಯಲ್ಲಿ (Channapatna By Election) ಸ್ಪರ್ಧೆ ಮಾಡುವುದಿಲ್ಲ. ಡಿಕೆ ಸುರೇಶ್ ಅವರನ್ನು ಸ್ಪರ್ಧೆಗೆ ಇಳಿಸುವ ದೃಷ್ಟಿಯಿಂದ ನಾನು ಬಂದರೇ ಮತ ಹಾಕುತ್ತೀರಾ ಎಂದು ಜನರನ್ನು ಡಿಕೆ ಶಿವಕುಮನಾರ್ ಕೇಳುತ್ತಿದ್ದಾರೆ. ಅವರ ಮಾತಲ್ಲಿ ರಾಜಕೀಯ ತಂತ್ರಗಾರಿಕೆ ಇದೆ ಅಷ್ಟೇ. ಇದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿರುವ ಮಾತು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿಂದು (ಜೂನ್ 21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಸುರೇಶ್ ಅವರನ್ನು ಸ್ಪರ್ಧೆಗೆ ಇಳಿಸುವ ದೃಷ್ಟಿಯಿಂದ ನಾನು ಬಂದರೇ ಮತ ಹಾಕುತ್ತೀರಾ ಎಂದು ಜನರನ್ನು ಡಿಕೆ ಶಿವಕುಮಾರ್ ಕೇಳುತ್ತಿದ್ದಾರೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಚನ್ನಪಟ್ಟಣ ಉಪಚುನಾವಣೆ ಅಖಾಡ ಎಲ್ಲಾ ಕ್ಷೇತ್ರಗಿಂತ ಜೋರಾಗಿರಲಿದೆ. ಜಿದ್ದಾಜಿದ್ದಿನ ಫೈಟ್ ನಡೆಯುತ್ತದೆ. ನಿಖಿಲ್ ನಾನೇ ಸ್ಪರ್ಧೆ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಸಿ.ಪಿ. ಯೋಗೇಶ್ವರ್ ಜನರು ನನ್ನ ಪರವಾಗಿದ್ದಾರೆ ಅಂತ ಅಷ್ಟೆ ಹೇಳಿದ್ದಾರೆ. ಅಂತಿಮವಾಗಿ ಮೈತ್ರಿ ನಾಯಕರು ಕುಳಿತು ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲು ಡಿಕೆ ಶಿವಕುಮಾರ್ ಪಣ: ಚನ್ನಪಟ್ಟಣದಲ್ಲಿ ಸೋಲಿನಲ್ಲೂ ಗೆಲುವು ಹುಡುಕಿದ ಡಿಸಿಎಂ‌

ಎಲ್ಲಾ ಉಪಚುನಾವಣೆಗಳು ಸರ್ಕಾರದ ಪರವಾಗಿಯೇ ಇರುವುದಿಲ್ಲ. ಒಂದೊಂದು ಬಾರಿ ಒಂದೊಂದು ಟ್ರೆಂಡ್ ನಡೆಯುತ್ತದೆ. ನಮ್ಮ ಅಭ್ಯರ್ಥಿ ಯಾರು ಎಂಬುದನ್ನು ನಾವು ಇನ್ನೂ ತೀರ್ಮಾನ ಮಾಡಿಲ್ಲ. ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ನಾನೇ ಅದನ್ನು ಹೇಳುತ್ತೇನೆ. ಕೋರ್ ಕಮಿಟಿಯ ಅಧ್ಯಕ್ಷ ನಾನೇ ಆಗಿರುವ ಕಾರಣ ಅಭ್ಯರ್ಥಿ ವಿಚಾರದಲ್ಲಿ ವೈಯಕ್ತಿಕ ಅಭಿಪ್ರಾಯ ಹೇಳಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ವಿಚಾರ ಪ್ರತಿಕ್ರಿಯಿಸಿ, ಪೊಲೀಸರು ಉತ್ತಮ ರೀತಿ ಕೆಲಸ ಮಾಡುತ್ತಿದ್ದಾರೆ. ಅವರ ಮೇಲೆ ನಂಬಿಕೆ ಇದ್ದು, ಗೌರವ ಹೆಚ್ಚಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳೇ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಚರ್ಚೆ ಮಾಡಿದ್ದಾರೆ. ಸ್ವತಃ ನಾನೇ ವೀಡಿಯೊ ನೋಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಇದರಿಂದ ಯಾರು ದರ್ಶನ್ ಪರ ಮಾತನಾಡಬಾರದು ಎಂದು ಸೂಚನೆ ನೀಡಿದ್ದಾರೆ. ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us