ಮತ್ತೆ ವಿಚಾರಣೆಗೆ ಕರೆದಿಲ್ಲ, ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿದ್ದಾರೆ. ವಿಚಾರಣೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಲವು ಸಂಗತಿ ತಿಳಿಸಿದ್ದಾರೆ.

ಮೈಸೂರು, ನವೆಂಬರ್​ 06: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ನಡೆದಿದೆ ಎನ್ನಲಾಗಿರುವ ಹಗಣರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ1 ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ನ.06) ವಿಚಾರಣೆಗೆ ಹಾಜರಾದರು. ಲೋಕಾಯುಕ್ತ (Lokayukta) ಅಧಿಕಾರಿಗಳು ಬರೊಬ್ಬರಿ ಎರಡು ಗಂಟೆಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ ಎಂದು ತಿಳಿಸಿದರು.

ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್​ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿವೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ. ಇನ್ನು, ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬಿಜೆಪಿಯವರು ಆಗ್ರಹಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಯಾವುದಾದರೂ ಕೇಸ್​ ಸಿಬಿಐಗೆ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: 2 ಗಂಟೆ ವಿಚಾರಣೆ ಎದುರಿಸಿದ ಸಿದ್ದರಾಮಯ್ಯ, ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿ ಹಾಲಿ ಸಿಎಂ ವಿಚಾರಣೆ

ಲೋಕಾಯುಕ್ತ ಸ್ವತಂತ್ರವಾಗಿ ತನಿಖೆ ಮಾಡುತ್ತಿರುವ ಸಂಸ್ಥೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗೆ ಉತ್ತರಿಸಿದ್ದೇನೆ. ಎಲ್ಲವೂ ಕೂಡ ಕಾನೂನು ಪ್ರಕಾರವೇ ನಡೆದಿದೆ. ಬಿಜೆಪಿ, ಜೆಡಿಎಸ್​ನವರು ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್​ನಲ್ಲಿ ಉತ್ತರ ನೀಡುತ್ತೇನೆ ಎಂದು ಹೇಳಿದರು.

ಬಿಜೆಪಿಯಿಂದ ಗೋ ಬ್ಯಾಕ್ ಚಳುವಳಿ ವಿಚಾರವಾಗಿ ಮಾತನಾಡಿದ ಅವರು, ಸ್ನೇಹಿತಮಹಿ ಕೃಷ್ಣ ಅವರು  ನೀಡಿದ ದೂರಿನ ಆಧಾರದ ಮೇಲೆ ನನ್ನ ವಿಚಾರಣೆಗೆ ಕರೆದಿದ್ದಾರೆ. ಅದಕ್ಕಾಗಿ, ವಿಚಾರಣೆಗೆ ಹಾಜರಾಗಿದ್ದೇನೆ. ಬಿಜೆಪಿಯವರು ಗೋ ಬ್ಯಾಕ್ ಅಂದರೆ ಏನು ಅರ್ಥ? ಹಾಗಿದ್ದರೆ ತನಿಖೆಯ ಬಿಜೆಪಿಯವರು ತನಿಖೆಯ ವಿರುದ್ಧವಾಗಿದ್ದಾರಾ? ಹಾಗಿದ್ದರೆ ಇವರು ಸುಳ್ಳು ಆರೋಪ ಮಾಡಿದ್ದಾರೆ ಎಂದರ್ಥ ಎಂದು ವಾಗ್ದಾಳಿ ಮಾಡಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:56 pm, Wed, 6 November 24

Web contact

TV9 Kannada

Read More
Follow Us