
ಮೈಸೂರು, ಫೆಬ್ರವರಿ 10: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ವಜಾಗೊಳಿಸಿತ್ತು. ಹೈಕೋರ್ಟ್ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತುವುದಾಗಿ ಹೇಳಿದ್ದರು. ಆದರೆ, ಇದೀಗ ಸುಪ್ರಿಂಕೋರ್ಟ್ಗೆ ಮೇಲ್ಮಮನವಿ ಸಲ್ಲಿಸದಿರಲು ಸ್ನೇಹಮಯಿ ಕೃಷ್ಣ ನಿರ್ಧರಿಸಿದ್ದಾರೆ. ಮುಂದಿನ ದಿನಗಳಲ್ಲಿ ಮುಡಾ ಪ್ರಕರಣದ ವಾದ ಮಂಡನೆ ತಾವೇ ಮಾಡಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದಾರೆ.
“ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ
ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ ನನ್ನ ಕೆಲವು ಆತ್ಮೀಯ ವಕೀಲರೊಂದಿಗೆ ಹಿತೈಷಿಗಳೊಂದಿಗೆ ಚರ್ಚೆ ನಡೆಸಿ ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ.
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಮತ್ತಷ್ಟು ಕಾಲ ವಿಳಂಬ ಮಾಡುವ ಬದಲು, ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ ನನ್ನ ಬಳಿ ಇರುವ ಮತ್ತು ಲಭ್ಯವಾಗುವ ಸಾಕ್ಷ್ಯಾಧಾರಗಳನ್ನು ಆಧರಿಸಿ ಮಾನ್ಯ ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪದಿಂದ ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದ್ದರಿಂದ ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು, ಅವಶ್ಯಕತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು
ಖುದ್ದಾಗಿ ನಾನೇ (party in person) ಮಾನ್ಯ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿ
ವಾದ ಮಂಡನೆ ಮಾಡಿ, ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ. ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನಿರ್ಧರಿಸಿದ್ದೇನೆ” ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಕೆಲವೇ ದಿನಗಳಲ್ಲಿ ಅಂತಿಮ ವರದಿ
ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಅವರು, ಲೋಕಾಯುಕ್ತ ಪೂರ್ಣ ತನಿಖಾ ವರದಿ ಸಲ್ಲಿಸಿದ ನಂತರ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ. ಮೇಲ್ಮನವಿ ಸಲ್ಲಿಸುವ ಬದಲು ಶಿಕ್ಷೆ ಕೊಡಿಸುವ ಕಡೆ ಹೆಚ್ಚಿನ ಗಮನ ನೀಡುತ್ತೇನೆ. ಒಬ್ಬ ಸಾಮಾನ್ಯ ಪ್ರಜೆ ಸಿಎಂ ತಪ್ಪು ಮಾಡಿದರೆ ಶಿಕ್ಷೆ ಕೊಡಿಸಬಹುದು ಎಂಬದನ್ನು ಸಾಬೀತುಪಡಿಸಲು ಈ ನಿರ್ಧಾರ ಕೈಗೊಂಡಿದ್ದೇನೆ. ಖಂಡಿತಾ ನನ್ನ ಬಳಿ ಇರುವ ದಾಖಲೆ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ನೀಡುತ್ತೇನೆ. ಆರೋಪಿಗಳು ಇದುವರೆಗೂ ತಮ್ಮ ಆರೋಪಕ್ಕೆ ಒಂದೇ ಒಂದು ಸಾಕ್ಷ್ಯ ಕೊಟ್ಟಿಲ್ಲ ಇದು ಒಂದು ರೀತಿ ಸವಾಲಿನ ವಿಚಾರ ಎಂದು ಹೇಳಿದರು.
ಸಿಎಂ ಪರ ಘಟಾನುಘಟಿ ವಕೀಲರು ಬರುತ್ತಾರೆ ವಾದ ಮಂಡಿಸುತ್ತಾರೆ. ಅವರ ಮುಂದೆ ನಾನು ವಾದ ಮಂಡನೆ ಮಾಡಬೇಕು. ಸಿಬಿಐಗೆ ವಹಿಸಿ ಅಂತಾ ಹೋರಾಟ ಮಾಡುವ ಬದಲು ಶಿಕ್ಷೆ ಕೊಡಿಸಲು ಹೋರಾಟ ಮಾಡುತ್ತೇನೆ. ನಾನು ಯಾವುದೇ ನಿರ್ಧಾರ ಮಾಡಿದರು ಪರ-ವಿರೋಧ ಚರ್ಚೆಯಾಗುತ್ತದೆ. ನಾನು ಯಾವುದಕ್ಕೂ ತಲೆ ಕೆಡಿಕೊಳ್ಳುವುದಿಲ್ಲ ನನ್ನ ಗುರಿ ಮುಟ್ಟುತ್ತೇನೆ. ಯಾವುದೇ ಕಾರಣಕ್ಕೂ ಜನ ಅನುಮಾನ ಪಡುವುದು ಬೇಡ. ಕೆಲವೇ ತಿಂಗಳಲ್ಲಿ ಆರೋಪಿಗಳಿಗೆ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಿಸುತ್ತೇನೆ. ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ