ಮೈಸೂರು ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಶಿಕ್ಷಕರಿಗೆ ಜೆಡಿಎಸ್​ ಮುಖಂಡನಿಂದ ವಾಚ್​​ ಗಿಫ್ಟ್​​

| Updated By: ವಿವೇಕ ಬಿರಾದಾರ

Updated on: Feb 25, 2024 | 10:45 AM

ಜೂನ್​ನಲ್ಲಿ ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಎಸ್ ಮುಖಂಡ ವಿವೇಕಾನಂದ ಹುತ್ಸೂಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೆ ಪ್ರಚಾರ ಕಾರ್ಯ ಆರಂಭಿಸಿದ್ದು, ಶಿಕ್ಷಕರಿಗೆ ವಾಚ್ ಹಂಚುತ್ತಿದ್ದಾರೆ. ಈ ಬಾರಿ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ವಿವೇಕಾನಂದ ಈಗಾಗಲೆ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಮೈಸೂರು ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಶಿಕ್ಷಕರಿಗೆ ಜೆಡಿಎಸ್​ ಮುಖಂಡನಿಂದ ವಾಚ್​​ ಗಿಫ್ಟ್​​
ಆಕಾಂಕ್ಷಿ ವಿವೇಕಾನಂದ, ಗಿಫ್ಟ್ಸ್​​
Follow us on

ಮೈಸೂರು, ಫೆಬ್ರವರಿ 25: ಜೂನ್​ನಲ್ಲಿ ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ (Legislative Council South Teachers Constituency) ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಎಸ್ (JDS) ಮುಖಂಡ ವಿವೇಕಾನಂದ ಹುತ್ಸೂಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೆ ಪ್ರಚಾರ ಕಾರ್ಯ ಆರಂಭಿಸಿದ್ದು, ಶಿಕ್ಷಕರಿಗೆ ವಾಚ್ ಹಂಚುತ್ತಿದ್ದಾರೆ. ಮಾಜಿ ಸಚಿವ ಸಾ.ರಾ.ಮಹೇಶ್ (SR Mahesh) ಕಚೇರಿಯಲ್ಲಿ ಮತದಾರರ ಹೆಸರನ್ನು ಪರಿಶೀಲನೆ ಮಾಡಿ ಒಬ್ಬೊಬ್ಬರಿಂದಲು ಸಹಿ ಹಾಕಿಸಿಕೊಂಡು ಗಿಫ್ಟ್ ಹಂಚಲಾಗುತ್ತಿದೆ. ಶಿಕ್ಷಕರು ಒಬ್ಬೊಬ್ಬರಾಗಿ ಬಂದು ತಮ್ಮ ಹೆಸರು ಹೇಳಿ ಗಿಫ್ಟ್ ತೆಗೆದುಕೊಂಡು ಹೋಗುತ್ತಿದ್ದಾರೆ. ಜೆಡಿಎಸ್‌ನಿಂದ ಗೆದ್ದಿರುವ ಮರಿತಿಬ್ಬೇಗೌಡ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಹೀಗಾಗಿ ಜೆಡಿಎಸ್ ಟಿಕೆಟ್‌ಗಾಗಿ ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಮುಖಂಡ ವಿವೇಕಾನಂದ ನಡುವೆ ಪೈಪೋಟಿ ಏರ್ಪಟ್ಟಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರವು ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಯನ್ನು ಒಳಗೊಂಡಿದ್ದು, ಒಟ್ಟು 18,379 ಮತದಾರರು ಇದ್ದಾರೆ ಪುರುಷರು 10,355, ಮಹಿಳೆಯರು 8,022 ಹಾಗೂ ಇತರೆ 2 ಮತದಾರರು ಇದ್ದಾರೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಒಟ್ಟು 20,700 ಮತದಾರರು ಇದ್ದರು.

ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ನ ಮರಿತಿಬ್ಬೇಗೌಡ ಪ್ರತಿನಿಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಮರಿತಿಬ್ಬೇಗೌಡರ ಪ್ರಭಾವ ಹೆಚ್ಚಾಗಿದ್ದು, ಸತತ ನಾಲ್ಕು ಬಾರಿ ಗೆಲುವಿನ ನಗೆಯನ್ನು ಬೀರಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಇವರು ಗೆಲುವು ಸಾಧಿಸುತ್ತಾ ಬಂದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಮತ್ತೆ ಬೆಳಗಾವಿಯಿಂದಲೇ ಶುರುವಾದ ಗಿಫ್ಟ್​​ ಪಾಲಿಟಿಕ್ಸ್, ಬಿಜೆಪಿ ನಾಯಕನಿಂದ ಹೆಲ್ಮೆಟ್​ ವಿತರಣೆ

ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮರಿತಿಬ್ಬೇಗೌಡ ಜೆಡಿಎಸ್ ವರಿಷ್ಠರೊಂದಿಗೆ ಮುನಿಸಿಕೊಂಡಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತ. ಕಳೆದ ವರ್ಷ ನಡೆದ ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಅವರ ಗೆಲುವಿಗೆ ಮರಿತಿಬ್ಬೇಗೌಡ ಶ್ರಮಿಸಿದ್ದರು. ಆ ಸಂದರ್ಭದಲ್ಲಿಯೇ ಕಾಂಗ್ರೆಸ್ ಹೈಕಮಾಂಡ್ ಮರಿತಿಬ್ಬೇಗೌಡರಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ ಖಾತ್ರಿ ಮಾಡಿದ್ದರು.

ಕಾಂಗ್ರೆಸ್‌ನಿಂದ ಮರಿತಿಬ್ಬೇಗೌಡ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಖ ಖಚಿತವಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಈ ಬಾರಿ ಆಕಾಂಕ್ಷಿಗಳು ಕಾಣಿಸಿಕೊಂಡಿಲ್ಲ. ಜೆಡಿಎಸ್‌ನಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಸ್ಪರ್ಧಿಸುವ ಸಾಧ್ಯತೆ ಇದ್ದು, ಜೆಡಿಎಸ್ ಹೈಕಮಾಂಡ್ ಸಹ ಶ್ರೀಕಂಠೇಗೌಡರ ಸ್ಪರ್ಧೆಗೆ ಒಲವು ತೋರಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಜೆಡಿಎಸ್ ಮುಖಂಡ ವಿವೇಕಾನಂದ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದು, ಅಂತಿಮವಾಗಿ ವರಿಷ್ಠರು ಯಾರಿಗೆ ಆಶೀರ್ವಾದ ಮಾಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ