ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ

ಚಾಮರಾಜ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ವಾಸು ಅವರು ಮೇಯರ್ ವಾಸು ಎಂದೇ ಪ್ರಖ್ಯಾತರಾಗಿದ್ದರು.

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ
ಮಾಜಿ ಶಾಸಕ ವಾಸು
Edited By: ವಿವೇಕ ಬಿರಾದಾರ

Updated on: Mar 09, 2024 | 11:57 AM

ಮೈಸೂರು, ಮಾರ್ಚ 09: ಕಾಂಗ್ರೆಸ್​ನ (Congress) ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೈಸೂರಿನ (Mysore) ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಇಂದು (ಮಾ.09) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರಿಗೆ ಮಕ್ಕಳಾದ ಕವೀಶ್​, ಅವೀಶ್​ ಹಾಗೂ ರಿತೇಷ್​ ಇದ್ದಾರೆ. ಗಾಯತ್ರಿಪುರಂ ವಾರ್ಡ್​​ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಗೊಂಡು ನಂತರ ಮೇಯರ್​​ ಆಗಿ ಆಯ್ಕೆಗೊಂಡಿದ್ದರು. ಇದರಿಂದ ವಾಸು ಅವರು ಮೇಯರ್ ವಾಸು ಎಂದೇ ಪ್ರಖ್ಯಾತರಾಗಿದ್ದರು.

ಚಾಮರಾಜ ಕ್ಷೇತ್ರದಲ್ಲಿ ನಾಲ್ಕು ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂರು ಬಾರಿ ಸೋಲು ಕಂಡು, 2013ರ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದರು. ಬಿಜೆಪಿಯ ಶಂಕರಲಿಂಗೇಗೌಡ ವಿರುದ್ಧ ಎರಡು ಬಾರಿ, ಬಿಜೆಪಿಯ ಎಲ್​. ನಾಗೇಂದ್ರ ವಿರುದ್ಧ ಒಂದು ಬಾರಿ ಸೋಲು ಕಂಡಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಕಾಂಗ್ರೆಸ್​ ಟಿಕೆಟ್​ ಬಯಸಿದ್ದರು. ಆದರೆ ಅವರಿಗೆ ಟಿಕೆಟ್ ಕೊಟ್ಟಿರಲಿಲ್ಲ. ಇದರಿಂದ ಆಕ್ರೋಶಗೊಂಡ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.​

ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಾಸು ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ವಾಸು ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ. ನನ್ನ ಆತ್ಮೀಯರಾಗಿದ್ದ ವಾಸು ಜೊತೆ ರಾಜಕೀಯ ಪಯಣದಲ್ಲಿ ಉತ್ತಮ ಒಡನಾಟ ಹೊಂದಿದ್ದೆ. ಮೈಸೂರು ಮೇಯರ್ ಆಗಿ, ನಂತರ ಶಾಸಕರಾಗಿ ವಾಸು ಅವರು ಮೈಸೂರು, ಚಾಮರಾಜನಗರ ಭಾಗದಲ್ಲಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲಿಕೆ ಪಕ್ಷಕ್ಕೆ ಬಹಳ ನಷ್ಟ ತಂದಿದೆ. ವಾಸು ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು.

ಅಂತಿಮ ದರ್ಶನ ಪಡೆದ ಜಿಟಿ ದೇವೇಗೌಡ

ಶಾಸಕ ಜಿ.ಟಿ.ದೇವೆಗೌಡ ವಾಸುರವರ ಅಂತಿಮ ದರ್ಶನ ಪಡೆದರು. ನಾವು ಅವರು ಬೇರೆ ಬೇರೆ ಪಕ್ಷದಲ್ಲಿದ್ದರೂ ಕೂಡ ನಮ್ಮ ಅವರ ಸಂಬಂಧ ಉತ್ತಮವಾಗಿತ್ತು. ವಾಸು ಶಿಕ್ಷಣ ಪ್ರೇಮಿ, ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ. ವಾಸು ನಿಧನ ನಮಗೆ ತುಂಬಾ ನೋವುಂಟು ಮಾಡಿದೆ. ವಾಸುರವರ ಸಾವಿನ ದುಃಖ ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us