
ಮೈಸೂರು, ಜುಲೈ 25: ನಾಡ ಹಬ್ಬ, ಕರುನಾಡಿನ ಗತವೈಭವವನ್ನು ಸಾರುವ ಹಬ್ಬವಾದ ವಿಶ್ವ ವಿಖ್ಯಾತ ಮೈಸೂರು ದಸರಾಗೆ (Mysuru Dasara) ಭರದ ಸಿದ್ಧತೆಗಳು ಆರಂಭವಾಗಿವೆ. ದಸರೆಯ ಪ್ರಮುಖ ಆಕರ್ಷಣೆ ಎಂದರೆ, ಅದು ಗಜ ಪಡೆ ಹಾಗೂ ಜಂಬೂ ಸವಾರಿ. ದಸರಾ (Dasara) ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಮೊದಲ ಹಂತದ ಗಜಪಡೆಯ ಆಯ್ಕೆ ಪಟ್ಟಿಯನ್ನು ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳನ್ನು ಆಯ್ಕೆ ಮಾಡಲಾಗಿದೆ.
ಎಲ್ಲರ ನಿರೀಕ್ಷೆಯಂತೆ ಈ ಬಾರಿಯೂ ಅಭಿಮನ್ಯು ಗಜಪಡೆಯ ಕ್ಯಾಪ್ಟನ್ ಆಗಿ ಚಿನ್ನದ ಅಂಬಾರಿಯನ್ನು ಹೊರಲಿದ್ದಾನೆ. ಆಗಸ್ಟ್ 4 ರಂದು ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಲಿವೆ.
ನಾಗರಹೊಳೆಯ ಮತ್ತಿಗೋಡು ಶಿಬಿರದಲ್ಲಿರುವ 59 ವರ್ಷದ ಅಭಿಮನ್ಯು 300ಕ್ಕೂ ಹೆಚ್ಚು ಆನೆ ಸೆರೆ ಕಾರ್ಯಾಚರಣೆ ಹಾಗೂ 80ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಕುಮ್ಕಿ ಆನೆ ಎಂದೇ ಖ್ಯಾತನಾಗಿದ್ದಾನೆ. ಇವನ ಜೊತೆಗೆ ಮತ್ತಿಗೋಡು ಶಿಬಿರದ ಭೀಮ, ದುಬಾರೆ ಶಿಬಿರದ ಪ್ರಶಾಂತ, ಮತ್ತಿಗೋಡು ಶಿಬಿರದ ಮಹೇಂದ್ರ, ದುಬಾರೆ ಶಿಬಿರದ ಧನಂಜಯ, ಕಂಜನ್, ಮತ್ತಿಗೋಡು ಶಿಬಿರದ ಏಕಲವ್ಯ, ದುಬಾರೆ ಶಿಬಿರದ ಕಾವೇರಿ, ಬಳ್ಳೆ ಶಿಬಿರದ ಲಕ್ಷ್ಮೀ ಆನೆಗಳು ಮೊದಲ ಹಂತದಲ್ಲಿ ಮೈಸೂರಿಗೆ ಆಗಮಿಸಲಿವೆ. 2ನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ.
ಇದನ್ನೂ ಓದಿ: ಉತ್ತಮ ಮಳೆ, ರೈತನ ಮುಖದಲ್ಲಿ ಮಂದಹಾಸ; ಈ ಬಾರಿ ವಿಜೃಂಭಣೆಯಿಂದ ದಸರಾ ಮಹೋತ್ಸವ: ಸಿದ್ದರಾಮಯ್ಯ
ಆಗಸ್ಟ್ 4 ರಂದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನ ಹೊಸಳ್ಳಿ ನಾಗರಹೊಳೆ ಹೆಬ್ಬಾಗಿಲಿನಿಂದ ಗಜ ಪಯಣ ಆರಂಭವಾಗಲಿದೆ. ಅಂದು ಈ ಒಂಬತ್ತು ಆನೆಗಳು, ಕಾಡಿನಿಂದ ನಾಡಿಗೆ ಪಯಣ ಬೆಳೆಸಲಿವೆ.