ಮೈಸೂರಿನಲ್ಲಿ ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು!
ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ವಿದ್ಯುತ್ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜಮೀನಿನಲ್ಲಿ ವಿದ್ಯುತ್ ತಂತಿ ತುಳಿದು ಓರ್ವ ಸಾವನ್ನಪ್ಪಿದರೆ, ಪಂಪ್ಸೆಟ್ ಸರಿಪಡಿಸುವಾಗ ಮತ್ತೊಬ್ಬ ಯುವಕ ಬಲಿಯಾಗಿದ್ದಾನೆ. ಈ ದುರ್ಘಟನೆಗಳು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಕೆ.ಆರ್.ನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು, ಏಪ್ರಿಲ್ 24: ಜಿಲ್ಲೆಯ ಕೆ.ಆರ್. ನಗರ ತಾಲೂಕಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ವಿದ್ಯುತ್ ಅವಘಡಗಳಲ್ಲಿ ಇಬ್ಬರು ಮೃತಪಟ್ಟ (Death) ಘಟನೆ ನಡೆದಿದೆ. ಜಮೀನಿನಲ್ಲಿದ್ದ ವಿದ್ಯುತ್ ತಂತಿ ತಗುಲಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಇನ್ನೊಂದು ಪ್ರಕರಣದಲ್ಲಿ 22 ವರ್ಷದ ಯುವಕ ಪಂಪ್ಸೆಟ್ ಸರಿ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ಎರದೂ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
ಪಕ್ಕದ ಜಮೀನಿನಿಂದ ಬಂದಿದ್ದ ವಿದ್ಯುತ್ ತಂತಿ
ಮೊದಲ ಘಟನೆಯಲ್ಲಿ, ಅಡಗೂರು ಮಾರಗೌಡನಹಳ್ಳಿ ಗ್ರಾಮದ ನಿವಾಸಿ ಮಹದೇವ್ (58) ಜಮೀನಿಗೆ ನೀರು ಹಾಯಿಸಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಪಕ್ಕದ ಜಮೀನಿನಿಂದ ಬಂದಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಅದನ್ನು ಅರಿಯದೆ ತುಳಿದ ಪರಿಣಾಮ ಅವರಿಗೆ ತೀವ್ರ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ಮದುವೆಯಾಗಿದ್ದವ ಸಾವು
ಮತ್ತೊಂದು ಘಟನೆಯಲ್ಲಿ, ಕೆಸ್ತೂರು ಕೊಪ್ಪಲು ಗ್ರಾಮದಲ್ಲಿ 22 ವರ್ಷದ ಯುವಕ ಪುನೀತ್ ವಿದ್ಯುತ್ ಶಾಕ್ಗೆ ಬಲಿಯಾಗಿದ್ದಾನೆ. ಪಕ್ಕದ ಜಮೀನಿನ ಪಂಪ್ಸೆಟ್ ಮೋಟಾರ್ ದುರಸ್ತಿ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ. ನೀರಿನ ತೊಟ್ಟಿಗೆ ಇಳಿದು ಮೋಟಾರ್ ಪರಿಶೀಲಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಹರಿದು ಪುನೀತ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ಮದುವೆಯಾಗಿದ್ದ ಪುನೀತ್ ಸಾವಿನಿಂದ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಈ ಎರಡು ಘಟನೆಗಳೂ ಕೆ.ಆರ್.ನಗರ ತಾಲೂಕಿನಲ್ಲಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಸಂಬಂಧಿತ ಪ್ರಕರಣಗಳು ಕೆ.ಆರ್.ನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



