Siddaramaiah: ವರುಣಾ ಜೊತೆಗೆ ಕೋಲಾರದಿಂದಲೂ ಸ್ಪರ್ಧಿಸುತ್ತೇನೆ; ಸಿದ್ದರಾಮಯ್ಯ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದರ ಜತೆಗೆ ಕೋಲಾರದಿಂದಲೂ ಕಣಕ್ಕಿಳಿಯುತ್ತೇನೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹೆಚ್​ಡಿ ಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದರ ಜತೆಗೆ ಕೋಲಾರದಿಂದಲೂ ಕಣಕ್ಕಿಳಿಯುತ್ತೇನೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಹೆಚ್​ಡಿ ಕೋಟೆಯಲ್ಲಿ ಮಾತನಾಡಿದ ಅವರು, ಕೋಲಾರ ಕ್ಷೇತ್ರದ ಜನರಿಂದ ನನಗೆ ಸಾಕಷ್ಟು ಒತ್ತಡ ಬರುತ್ತಿದೆ. ಅಲ್ಲಿಂದಲೂ ಸ್ಪರ್ಧಿಸಬೇಕೆಂದು ಬೇಡಿಕೆ ಇಡುತ್ತಿದ್ದಾರೆ ಎಂದು ಈ ಬಾರಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಕೋಲಾರದಿಂದ ಕಣಕ್ಕಿಳಿಯುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ನಂತರ ಕೊನೇ ಕ್ಷಣದಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಕೋಲಾರ ಬಿಟ್ಟು ಬೇರೆ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಿದ್ದರಾಮಯ್ಯಗೆ ವರುಣಾದಿಂದ ಟಿಕೆಟ್ ಘೋಷಿಸಲಾಗಿತ್ತು.

‘ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅಚ್ಚರಿಯಿಲ್ಲ’

ಕಳೆದ ಬಾರಿ ಬಿಜೆಪಿ, ಜೆಡಿಎಸ್​ ಮ್ಯಾಚ್​ ಫಿಕ್ಸಿಂಗ್ ಮಾಡಿಕೊಂಡಿದ್ದವು. ಈಗಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರ ಸಿದ್ದರಾಮಯ್ಯಗೆ ಅದೃಷ್ಟದ್ದು ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವರುಣಾ ಕ್ಷೇತ್ರದಿಂದ ಗೆದ್ದಾಗಲೇ ನಾನು ಮುಖ್ಯಮಂತ್ರಿ ಆಗಿದ್ದು. ನನ್ನ ಕೊನೆಯ ಚುನಾವಣೆ ಹುಟ್ಟೂರಿನಲ್ಲಿ ಆಗಬೇಕೆಂಬ ಆಸೆ ಇದೆ. ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುತ್ತೇನೆ. ಕೋಲಾರ ಕ್ಷೇತ್ರದ ಜನರಿಂದ ನನಗೆ ಸಾಕಷ್ಟು ಒತ್ತಡ ಬರುತ್ತಿದೆ ಎಂದು ಹೇಳಿದ್ದಾರೆ.

ಪುತ್ರ ಡಾ.ಯತೀಂದ್ರ ಸ್ಪರ್ಧೆ ಮಾಡುವುದಿಲ್ಲ ಎಂದ ತಿಳಿಸಿದ್ದಾರೆ. ಅದರ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದೂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಎಸ್​ವೈ ನಿವಾಸದ ಮೇಲೆ ಕಲ್ಲುತೂರಾಟ ಬಿಜೆಪಿ ಕೈವಾಡ ಇರಬಹುದು; ಸಿದ್ದರಾಮಯ್ಯ

ಶಿಕಾರಿಪುರದಲ್ಲಿ ಬಿಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲುತೂರಾಟ ಘಟನೆ ಹಿಂದೆ ಬಿಜೆಪಿಯವರ ಕೈವಾಡ ಇರಬಹುದು ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ. ಬಂಜಾರ ಸಮುದಾಯ ಒಳಮೀಸಲಾತಿ ವಿರೋಧಿಸುತ್ತಾ ಬಂದಿದೆ. ಹೀಗಾಗಿ ನಿನ್ನೆಯೂ ಕೂಡ ಒಳಮೀಸಲಾತಿ ಜಾರಿಗೆ ವಿರೋಧಿಸಿದ್ದಾರೆ. ಯಡಿಯೂರಪ್ಪ ಅವರು ಕಾಂಗ್ರೆಸ್​ ಕಾರ್ಯಕರ್ತರಿಂದ ದಾಳಿ ನಡೆದಿದೆ ಅಂತಾ ಹೇಳಿಲ್ಲ. ತಪ್ಪು ಗ್ರಹಿಕೆಯಿಂದ ಆಗಿರಬೇಕೆಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ನಾಲ್ಕು ಕ್ಷೇತ್ರಗಳಿಂದ ಸ್ಪರ್ಧಿಸಲಿ; ಸುಧಾಕರ್ ವ್ಯಂಗ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ನೀಡಿರುವ ಹೇಳಿಕೆಗೆ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಕೋಲಾರ, ವರುಣಾ ಕ್ಷೇತ್ರ ಮಾತ್ರ ಯಾಕೆ ಕಲ್ಯಾಣ ಕರ್ನಾಟಕ ಬೇಡ್ವಾ?
ರಾಜ್ಯದ ನಾಲ್ಕೂ ದಿಕ್ಕುಗಳಲ್ಲಿ 4 ಕ್ಷೇತ್ರಗಳಲ್ಲಿ ನಿಂತುಕೊಳ್ಳಲಿ. ಕಿತ್ತೂರು ಹಾಗೂ ಕಲ್ಯಾಣ ಭಾಗದ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿ.
ನಾಲ್ಕು ಕ್ಷೇತ್ರಗಳಲ್ಲಿ ನಿಂತ್ರೆ ಯಾವುದೋ ಒಂದು ಕ್ಷೇತ್ರದಲ್ಲಿ ಗೆಲ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Tue, 28 March 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us