
ಬೆಂಗಳೂರು, ಮೇ 19: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ನಾಳೆ (ಮೇ 20) ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿರುವ ಬೆನ್ನಲ್ಲೇ, ಜನಸಾಮಾನ್ಯರಿಗೆ ಮತ್ತೊಂದು ದೊಡ್ಡ ಆಘಾತ ಕಾದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಖಾಸಗಿ ಔಷಧ ಮಳಿಗೆಗಳ (Medical Shop Bandh) ಬಂದ್ಗೆ ಕರೆ ನೀಡಲಾಗಿದ್ದು, ಕರ್ನಾಟಕದಲ್ಲೂ ಇದಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಇದರಿಂದಾಗಿ ನಾಳೆ ಬಸ್ ಸೌಲಭ್ಯ ಮಾತ್ರವಲ್ಲದೆ, ತುರ್ತು ಸಂದರ್ಭಗಳಲ್ಲಿ ಔಷಧಗಳು ಸಿಗುವುದೂ ಸಹ ದುಸ್ತರವಾಗುವ ಲಕ್ಷಣಗಳು ಕಾಣುತ್ತಿವೆ.
ಖಾಸಗಿ ಮೆಡಿಕಲ್ ಶಾಪ್ ಮಾಲೀಕರು ಹಾಗೂ ವಿತರಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರಮುಖವಾಗಿ, ಯಾವುದೇ ಸೂಕ್ತ ಲಿಖಿತ ಪ್ರಿಸ್ಕ್ರಿಪ್ಷನ್ ಇಲ್ಲದೆ ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ರಾಜಾರೋಷವಾಗಿ ನಿಯಮಬಾಹಿರವಾಗಿ ಔಷಧಗಳನ್ನು ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಹಾಗೂ ಸಣ್ಣ ವ್ಯಾಪಾರಿಗಳ ಬದುಕು ಬೀದಿಗೆ ಬರುತ್ತಿದೆ ಎಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಇದನ್ನೂ ಓದಿ: ಬುಧವಾರದಿಂದ ಸಿಗಲ್ಲ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್! ಸಾರಿಗೆ ಮುಷ್ಕರ ಬಹುತೇಕ ಫಿಕ್ಸ್
ದೊಡ್ಡ ಕಾರ್ಪೊರೇಟ್ ಕಂಪನಿಗಳು ಭಾರಿ ರಿಯಾಯಿತಿ (ಡೀಪ್ ಡಿಸ್ಕೌಂಟ್) ನೀಡಿ ಗ್ರಾಹಕರನ್ನು ಸೆಳೆಯುತ್ತಿರುವುದರಿಂದ ಸಾಂಪ್ರದಾಯಿಕ ಮೆಡಿಕಲ್ ಶಾಪ್ಗಳು ನಷ್ಟ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಇಡೀ ದಿನ ಖಾಸಗಿ ಮೆಡಿಕಲ್ ಶಾಪ್ಗಳನ್ನು ಮುಚ್ಚಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಆಸ್ಪತ್ರೆ ಆವರಣದೊಳಗಿನ ಫಾರ್ಮಸಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದರೂ, ಜನಸಾಮಾನ್ಯರು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಇಂದೇ ಅಗತ್ಯ ಔಷಧಗಳನ್ನು ಖರೀದಿಸಿಟ್ಟುಕೊಳ್ಳುವುದು ಉತ್ತಮ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ