ಕಡಿಮೆ ಹಣಕ್ಕೆ ಸ್ಫೋಟಕಗಳ ಮಾರಾಟ: ಅಕ್ರಮವಾಗಿ ಸಾಗಿಸುತ್ತಿದ್ದ 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜಾಜೂರು ಬಳಿ ದಾಬಸ್ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಕಲ್ಲುಗಣಿಗಾರಿಕೆಗೆ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಶಿವಶಂಕರ್ ಅಲಿಯಾಸ್ ಆಟೋ ಶಂಕರ್ನನ್ನು ಬಂಧಿಸಿದ್ದಾರೆ. ಆತನಿಂದ 600 ಜಿಲೆಟಿನ್ ಕಡ್ಡಿಗಳು ಹಾಗೂ 100 ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಬಂಧಪಟ್ಟ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ.
ನೆಲಮಂಗಲ, ಸೆಪ್ಟೆಂಬರ್ 04: ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಆಘಾತಕಾರಿ ಕೃತ್ಯವನ್ನು ದಾಬಸ್ಪೇಟೆ ಪೊಲೀಸರು ಭೇದಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜಾಜೂರು ಬಳಿ ಘಟನೆ ನಡೆದಿದೆ. ಡಿಎಸ್ಪಿ ಉಮಾರಾಣಿ ಮಾರ್ಗದರ್ಶನದಲ್ಲಿ ದಾಬಸ್ಪೇಟೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಕಾರಿನಲ್ಲಿ ಅಕ್ರಮವಾಗಿ ಸ್ಫೋಟಕ ಸಾಗಿಸುತ್ತಿದ್ದ ಶಿವಶಂಕರ್ ಅಲಿಯಾಸ್ ಆಟೋ ಶಂಕರ್ (38) ಎಂಬಾತನನ್ನು ಬಂಧಿಸಿದ್ದಾರೆ. ದಾಬಸ್ಪೇಟೆ ಸುತ್ತಮುತ್ತಲಿನ ಕಲ್ಲು ಗಣಿಗಾರಿಕೆಗೆ ಪರವಾನಗಿ ಇಲ್ಲದೆ, ಕಡಿಮೆ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಬರೋಬ್ಬರಿ 600 ಜಿಲೆಟಿನ್ ಕಡ್ಡಿಗಳು ಹಾಗೂ 100 ಡಿಟೋನೇಟರ್ ಸೇರಿ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸ್ಫೋಟಕ ಸಾಗಿಸುತ್ತಿದ್ದ ಆರೋಪಿಯ ವಿರುದ್ಧ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆ 1908 ಹಾಗೂ ಬಿಎನ್ಎಸ್ (BNS) ಸೆಕ್ಷನ್ 288ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

