ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಂಪುಟ ಅಸ್ತು: 20 ಲಕ್ಷ ವಿದೇಶಿ ಪ್ರವಾಸಿಗರು, 1,500 ಕೋಟಿ ರೂ. ಹೂಡಿಕೆ ಸೆಳೆಯುವ ಗುರಿ

Karnataka Tourism Policy 2024-29: ಕರ್ನಾಟಕ ಸಚಿವ ಸಂಪುಟವು ಹೊಸ ಪ್ರವಾಸೋದ್ಯಮ ನೀತಿಯನ್ನು ಅನುಮೋದಿಸಿದೆ. ಈ ನೀತಿಯು 1500 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸುವ ಮತ್ತು ವಾರ್ಷಿಕವಾಗಿ 20 ಲಕ್ಷ ವಿದೇಶಿ ಹಾಗೂ 48 ಕೋಟಿ ದೇಶೀಯ ಪ್ರವಾಸಿಗರನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. ವಿವಿಧ ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿಗೆ 46 ಯೋಜನೆಗಳನ್ನು ಈ ನೀತಿಯಲ್ಲಿ ಒಳಗೊಂಡಿದೆ.

ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಂಪುಟ ಅಸ್ತು: 20 ಲಕ್ಷ ವಿದೇಶಿ ಪ್ರವಾಸಿಗರು, 1,500 ಕೋಟಿ ರೂ. ಹೂಡಿಕೆ ಸೆಳೆಯುವ ಗುರಿ
ಸಾಂದರ್ಭಿಕ ಚಿತ್ರ

Updated on: Oct 29, 2024 | 7:36 AM

ಬೆಂಗಳೂರು, ಅಕ್ಟೋಬರ್ 29: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಹೆಚ್​ಕೆ ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಕ್ಷೇತ್ರದಲ್ಲಿ 1,500 ಕೋಟಿ ರೂಪಾಯಿಗಳ ಹೂಡಿಕೆ ಆಕರ್ಷಿಸಲು ಸರ್ಕಾರ ಉದ್ದೇಶಿಸಿದೆ. ಕರ್ನಾಟಕವು ವರ್ಷಕ್ಕೆ 20 ಲಕ್ಷ ವಿದೇಶಿ ಪ್ರವಾಸಿಗರನ್ನು ಸೆಳೆಯಲು ಉದ್ದೇಶಿಸಿದೆ. ಆ ಮೂಲಕ ಹೆಚ್ಚು ವಿದೇಶಿ ಪ್ರವಾಸಿಗರು ಭೇಟಿ ನೀಡುವ ಐದು ರಾಜ್ಯಗಳಲ್ಲಿ ಒಂದಾಗಿ ಗುರುತಿಸಿಕೊಳ್ಳಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ವಿಚಾರದಲ್ಲಿ ದೇಶೀಯ ಪ್ರವಾಸಿಗರನ್ನು ಸೆಳೆಯುವುದು ಕೂಡ ನಮ್ಮ ಗುರಿಯಾಗಿದೆ. 48 ಕೋಟಿ ಸ್ಥಳೀಯ ಪ್ರವಾಸಿಗರನ್ನು ಸೆಳೆಯುವ ಗುರಿಯೊಂದಿಗೆ ಅಗ್ರ ಮೂರು ರಾಜ್ಯಗಳಲ್ಲಿ ಸ್ಥಾನ ಪಡೆಯಲು ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿಸ್ತೃತ ಚರ್ಚೆಯ ನಂತರ ಸಚಿವ ಸಂಪುಟವು ‘ಕರ್ನಾಟಕ ಪ್ರವಾಸೋದ್ಯಮ ನೀತಿ 2024-29’ ಅನ್ನು ಅನುಮೋದಿಸಿದೆ. ಈ ನೀತಿಯಡಿಯಲ್ಲಿ ಸಹಾಯಧನ ಮತ್ತು ಅನುದಾನವನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ ಎಂದು ಪಾಟೀಲ್ ತಿಳಿಸಿದ್ದಾರೆ.

ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಏನೇನಿದೆ?

ಹೊಸ ಪ್ರವಾಸೋದ್ಯಮ ನೀತಿಯು ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಯಸುತ್ತದೆ. ಅಡ್ವೆಂಚರ್ ಟೂರಿಸಂ, ಕೃಷಿ, ಕಾರವಾನ್, ಕರಾವಳಿ, ಕಡಲತೀರ, ಪಾಕಪದ್ಧತಿ, ಸಾಂಸ್ಕೃತಿಕ, ಸಾಂಪ್ರದಾಯಿಕ, ಪರಿಸರ, ಶಿಕ್ಷಣ, ಚಲನಚಿತ್ರ, ಗಾಲ್ಫ್, ಕ್ರೀಡೆ, ಬುಡಕಟ್ಟು, ಮದುವೆಯ ತಾಣಗಳ ಅಭಿವೃದ್ಧಿ, ಆರೋಗ್ಯ ವಿಚಾರಗಳಿಗೆ ಉತ್ತೇಜನ ನೀಡುವ ಬಗ್ಗೆ ಹೊಸ ನೀತಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರವಾಸೋದ್ಯಮ ಉತ್ತೇಜನಕ್ಕೆ 46 ಯೋಜನೆಗಳು

ಅಪಾರ್ಟ್‌ಮೆಂಟ್, ಹೋಟೆಲ್, ಸರ್ವೀಸ್ ಅಪಾರ್ಟ್‌ಮೆಂಟ್‌ಗಳು, ಅಕ್ವೇರಿಯಂ, ಬೀಚ್ ಶಾಕ್‌ಗಳು, ಅಮ್ಯೂಸ್‌ಮೆಂಟ್ ಪಾರ್ಕ್‌ಗಳ ಸಹಿತ ಪ್ರವಾಸೋದ್ಯಮ ಉತ್ತೇಜನಕ್ಕೆ 46 ಯೋಜನೆಗಳನ್ನು ಗುರುತಿಸಲಾಗಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕೆ ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಬೀಚ್​ಗಳಲ್ಲಿಯೂ ಗೋವಾ ರೀತಿ ಮದ್ಯಪಾನ, ಮಾರಾಟಕ್ಕೆ ಅವಕಾಶ: ಪ್ರವಾಸೋದ್ಯಮ ಇಲಾಖೆ ಚಿಂತನೆ

ವಿದೇಶಿ ಮತ್ತು ಸ್ವದೇಶಿ ಪ್ರವಾಸಿಗರ ಸಂಖ್ಯೆ ಹೆಚ್ಚಿಸುವುದು ರಾಜ್ಯ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಅತಿ ಹೆಚ್ಚು ವಿದೇಶಿ ಪ್ರವಾಸಿಗರು ಭೇಟಿ ನೀಡುವ ಮೊದಲ ಐದು ರಾಜ್ಯಗಳಲ್ಲಿ ಒಂದಾಗಲು, ನಾವು ವರ್ಷಕ್ಕೆ 20 ಲಕ್ಷ ವಿದೇಶಿ ಪ್ರವಾಸಿಗರನ್ನು ಆಕರ್ಷಿಸಬೇಕು. ಇದನ್ನು ತಲುಪುವುದು ನಮ್ಮ ಗುರಿಯಾಗಿದೆ. ಈಗ ಸುಮಾರು 12-14 ಲಕ್ಷ ವಿದೇಶಿ ಪ್ರವಾಸಿಗರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಪಾಟೀಲ್ ಹೇಳಿದ್ದಾರೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us