Karnataka NIA Raid: ರಾಜ್ಯದ 3 ಜಿಲ್ಲೆಗಳಲ್ಲಿ ಎನ್ಐಎ ಶೋಧ, 3 ಜನ ವಶಕ್ಕೆ

ಬೆಂಗಳೂರು ಜೈಲಿನಲ್ಲಿರುವ ಕೈದಿಗಳಲ್ಲಿ ಉಗ್ರವಾದ ಬೆಳೆಸುವುದು, ಆತ್ಮಾಹುತಿ ದಾಳಿಗೆ ಪ್ರಚೋದನೆ ನೀಡುವುದು ಸೇರಿದಂತೆ ಹಲವು ಉಗ್ರ ಚಟುವಟಿಕೆಗಳಿಗೆ ಪಿತೂರಿ ನಡೆಸಿರುವ ಕುರಿತು ಮೂಲಗಳಿಂದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಶೋಧಕಾರ್ಯ ನಡೆಸಿದ್ದರು.

Karnataka NIA Raid: ರಾಜ್ಯದ 3 ಜಿಲ್ಲೆಗಳಲ್ಲಿ ಎನ್ಐಎ ಶೋಧ, 3 ಜನ ವಶಕ್ಕೆ
ಎನ್​ಐಎ
Edited By:

Updated on: Mar 06, 2024 | 10:40 AM

ಬೆಂಗಳೂರು ಮಾರ್ಚ್​ 06: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಮಂಗಳವಾರ (ಮಾ.05) ರಂದು ಬೆಂಗಳೂರು (Bengaluru), ದಕ್ಷಿಣ ಕನ್ನಡ (Dakshina kannada) ಮತ್ತು ಉತ್ತರ ಕನ್ನಡ (Uttara Kannada) ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಮೂಲತಃ ಕೇರಳ ಇಡುಕ್ಕಿ ನಿವಾಸಿ, ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬಿಜು ಅಬ್ರಹಾಂ ಹಾಗೂ ಅತ್ತಾವರ ಗ್ರಾಮದ ನಬೀದ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಅಧಿಕಾರಿಗಳು ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಾಸಿರ್ ಖಾನ್ ಎಂಬಾತನಿಗಾಗಿ ಹುಡುಕಾಟ ನಡೆಸಿದರು. ಆರೋಪಿಗಳ ಬಗ್ಗೆ ಪೂರಕ ದಾಖಲೆಗಳನ್ನು ಸಂಗ್ರಹಿಸಿದ್ದ ಅಧಿಕಾರಿಗಳು, ಎರಡು ತಂಡಗಳಾಗಿ ಮಂಗಳೂರು ಮತ್ತು ಅಂಕೋಲಾಕ್ಕೆ ಭೇಟಿ ನೀಡಿದ್ದರು.

ಎನ್‌ಐಎ ಅಧಿಕಾರಿಗಳು ಮಂಗಳವಾರ ಏಕಕಾಲಕ್ಕೆ ಕರ್ನಾಟಕ, ತಮಿಳುನಾಡು, ತೆಲಂಗಾಣ, ಪಂಜಾಬ್, ಗುಜರಾತ್ ಮತ್ತು ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದರು. ಈ ವೇಳೆ 25 ಮೊಬೈಲ್ ಫೋನ್‌ಗಳು, 6 ಲ್ಯಾಪ್‌ಟಾಪ್‌ಗಳು ಮತ್ತು 4 ಹಾರ್ಡ್​ ಡಿಸ್ಕ್​​ಗಳು, ವಿವಿಧ ದಾಖಲೆಗಳು ಮತ್ತು ನಗದು ವಶಪಡಿಸಿಕೊಂಡಿದ್ದಾರೆ.

ಎನ್​ಐಎ ದಾಳಿ ಏಕೆ

ಬೆಂಗಳೂರು ಜೈಲಿನಲ್ಲಿರುವ ಕೈದಿಗಳಲ್ಲಿ ಉಗ್ರವಾದ ಬೆಳೆಸುವುದು, ಆತ್ಮಾಹುತಿ ದಾಳಿಗೆ ಪ್ರಚೋದನೆ ನೀಡುವುದು ಸೇರಿದಂತೆ ಹಲವು ಉಗ್ರ ಚಟುವಟಿಕೆಗಳಿಗೆ ಪಿತೂರಿ ನಡೆಸಿರುವ ಕುರಿತು ಮೂಲಗಳಿಂದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಎನ್‌ಐಎ ದಾಳಿ ನಡೆಸಿದರು. ಎನ್​ಐಎ ಅಧಿಕಾರಿಗಳು ಮಾರ್ಚ್​.04ರ ರಾತ್ರಿ 8 ಗಂಟೆಯಿಂದ ಬೆಳಗ್ಗಿನ ಜಾವ 6 ಗಂಟೆ ವರೆಗೂ ಪರಪ್ಪನ ಅಗ್ರಹಾರದಲ್ಲಿ ಪರಿಶೀಲನೆ ನಡೆಸಿ ನಜೀರ್ ಸೇರಿದಂತೆ ಅನೇಕರ ವಿಚಾರಣೆ ನಡೆಸಿದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ತನಿಖೆ ಅಖಾಡಕ್ಕೆ ಎನ್​ಐಎ: ಕಾರ್ಯಾಚರಣೆ ಹೇಗಿರಲಿದೆ ಗೊತ್ತೇ?

ಉಗ್ರವಾದಕ್ಕೆ ಸಹ ಕೈದಿಗಳ ಬಳಕೆ

ಶಂಕಿತ ಉಗ್ರ ಜುನೈದ್​ ಮತ್ತು ಈತನ ಐವರು ಸಹಚರರು 2017ರಲ್ಲಿ ಉದ್ಯಮಿಯೊಬ್ಬರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ್ದರು. 2008ರಲ್ಲಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಸರಣಿ ಸ್ಫೋಟದ ಆರೋಪಿ ಟಿ.ನಜೀರ್, ಪರಪ್ಪನ ಅಗ್ರಹಾರದಲ್ಲಿದ್ದ ಜುನೈದ್ ಅಹಮದ್ ಸಂಪರ್ಕಕ್ಕೆ ಬಂದಿದ್ದನು. ಬಳಿಕ ಜುನೈದ್ ತನ್ನ ಐವರು ಸಹಚರರ ಬ್ರೈನ್ ವಾಶ್ ಮಾಡಿ ಉಗ್ರವಾದಕ್ಕೆ ಪ್ರಚೋದನೆ ನೀಡಿದನು.

ಜೈಲಿನಿಂದ ಹೊರಬಂದ ನಂತರ, ಜುನೈದ್ ನಜೀರ್ ಆದೇಶದಂತೆ ಭಯೋತ್ಪಾದಕ ಚಟುವಟಿಕೆಗಳನ್ನು ಆರಂಭಿಸಿದನು. ಅಲ್ಲದೆ ತನ್ನ ಸಹಚರರಿಗೆ ಕೆಲವರ ಮೂಲಕ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪೂರೈಸಿದ್ದನು. ಈ ವಿಚಾರ ತಿಳಿದು ದಾಳಿ ಮಾಡಿದ್ದ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದರು. ಇನ್ನು ಪ್ರಮುಖ ಆರೋಪಿ ಜುನೈದ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ಸಿಸಿಬಿ ಪೊಲೀಸರು ನಜೀರ್‌ನನ್ನೂ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರು ಈ ಎರಡು ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಎನ್​ಐಎ ಪ್ರಕರಣದ ತನಿಖೆ ನಡೆಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Web contact

TV9 Kannada

Read More
Follow Us