ನೈಸ್ ಅಕ್ರಮ ಆರೋಪ: ದಾಖಲೆ ಸಲ್ಲಿಸಲು ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೋರಿದ ಹೆಚ್​ಡಿ ಕುಮಾರಸ್ವಾಮಿ

NICE road row; ನೈಸ್ ಸಂಸ್ಥೆಯು ಸರ್ಕಾರದ ಜೊತೆಗಿನ ಒಪ್ಪಂದದ ಚೌಕಟ್ಟನ್ನು ಉಲ್ಲಂಘಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ನೈಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ ಬೀದರ್ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದಾರೆ ಎಂಬುದು ಗಮನಾರ್ಹ.

ನೈಸ್ ಅಕ್ರಮ ಆರೋಪ: ದಾಖಲೆ ಸಲ್ಲಿಸಲು ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೋರಿದ ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ

Updated on: Aug 17, 2023 | 3:13 PM

ಬೆಂಗಳೂರು, ಆಗಸ್ಟ್ 17: ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸ್ (NICE) ಮತ್ತು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (BMIC) ಯೋಜನೆಯಲ್ಲಿನ ಅಕ್ರಮಗಳ ಕುರಿತು ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಲು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ನೈಸ್ ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಏಜೆನ್ಸಿಯಿಂದ ತನಿಖೆಗೆ ನಿರ್ದೇಶನ ನೀಡಬೇಕೆಂದು ಕುಮಾರಸ್ವಾಮಿ ಅವರು ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕುಮಾರಸ್ವಾಮಿ ಅವರಿಗೆ ಪ್ರಧಾನಿಯಿಂದ ಭೇಟಿಗೆ ಅವಕಾಶ ಸಿಕ್ಕಿದರೆ, ಯೋಜನೆಗೆ ಸಂಬಂಧಿಸಿದಂತೆ ಸಂಗ್ರಹಿಸಿದ ಎಲ್ಲಾ ಸಾಕ್ಷ್ಯಗಳನ್ನು ಒದಗಿಸಲು ಅವರು ಚಿಂತನೆ ನಡೆಸಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಯೋಜನೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಬಿಡುಗಡೆ ಮಾಡಲು ಅವರು ಚಿಂತನೆ ಮಾಡಿದ್ದಾರೆ ಎನ್ನಲಾಗಿದೆ.

ನೈಸ್ ರಸ್ತೆ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಕುಮಾರಸ್ವಾಮಿ ಆರೋಪಿಸುತ್ತಿದ್ದು, ಪ್ರಕರಣದ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಒಗ್ಗೂಡಿ ಒತ್ತಾಯ ಮಾಡಿದ್ದು, ನೈಸ್ ರಸ್ತೆಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳುವಂತೆ ಒತ್ತಾಯಿಸಿವೆ.

ಹೆಚ್ಚುವರಿ ಭೂಮಿಯನ್ನು ನೈಸ್ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ. ನ್ಯಾಯಾಲಯದ ಆದೇಶದ ಮೂಲಕ ಸರ್ಕಾರ ಅದನ್ನು ಹಿಂಪಡೆಯಬೇಕು. ಅಕ್ರಮವಾಗಿ 1,325 ಕೋಟಿ ರೂಪಾಯಿ ಟೋಲ್ ಸಂಗ್ರಹಿಸಲಾಗಿದ್ದು, ಅದನ್ನು ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಈ ಹಿಂದೆ ಆಗ್ರಹಿಸಿದ್ದರು.

ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದ ಆಪರೇಷನ್, ಬಿಜೆಪಿ ಶಾಸಕರಿಗೆ ಕಾಂಗ್ರೆಸ್​ ಗಾಳ? ಲಿಸ್ಟ್​ನಲ್ಲಿ ಯಾರ್ಯಾರು?

ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಶಾಸಕ ಟಿ.ಬಿ.ಜಯಚಂದ್ರ ನೇತೃತ್ವದ ಸದನ ಸಮಿತಿ ಹಾಗೂ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ಸಿದ್ಧಪಡಿಸಿದ ವರದಿಗಳನ್ನು ಮಂಡಿಸುವಂತೆ ಸರ್ಕಾರವನ್ನು ಈಗಾಗಲೇ ಒತ್ತಾಯಿಸಿದ್ದಾರೆ.

ನೈಸ್ ಸಂಸ್ಥೆಯು ಸರ್ಕಾರದ ಜೊತೆಗಿನ ಒಪ್ಪಂದದ ಚೌಕಟ್ಟನ್ನು ಉಲ್ಲಂಘಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ನೈಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ ಬೀದರ್ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದಾರೆ ಎಂಬುದು ಗಮನಾರ್ಹ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us