ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ

| Updated By: ರಮೇಶ್ ಬಿ. ಜವಳಗೇರಾ

Updated on: Oct 16, 2024 | 10:46 PM

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಸಂಕಷ್ಟ ಎದುರಾಗಿದೆ. ಕೋರ್ಟ್​​ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಮಾನನಷ್ಟ ದೂರು ದಾಖಲಿಸಿದ ಪರಿಣಾಮ ವಿಚಾರಣೆಗೆ ಹಾಜರಾಗದಿದ್ದಕ್ಕೆ ಯತ್ನಾಳ್ ವಾರಂಟ್ ಜಾರಿ ಮಾಡಿದೆ. ಹಾಗಾದ್ರೆ ಏನಿದು ಪ್ರಕರಣ? ಯಾರು ದಾಖಲಿಸಿದ್ದು ಎನ್ನುವ ವಿವರ ಇಲ್ಲಿದೆ.

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ
ಬಸನಗೌಡ ಪಾಟೀಲ್ ಯತ್ನಾಳ್
Follow us on

ಬೆಂಗಳೂರು, (ಅಕ್ಟೋಬರ್ 16): ಸಚಿವ ದಿನೇಶ್ ಗುಂಡೂರಾವ್​ ಪತ್ನಿ ತಬಸ್ಸುಮ್ ದಿನೇಶ್ ಗುಂಡೂರಾವ್ ಅವರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​​ಗೆ ಕೋರ್ಟ್​ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ. ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ಇಂದು (ಅಕ್ಟೋಬರ್ 16) ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಸಚಿವ ದಿನೇಶ್‌ ಗುಂಡೂರಾವ್‌ ಪತ್ನಿ ತಬಸುಮ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್‌ 29 ರಂದು ಮಾನ್ಯ ಮಾಡಿದ್ದ ನ್ಯಾಯಾಲಯ, ಅಕ್ಟೋಬರ್‌ 16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಶಾಸಕ ಯತ್ನಾಳ್​ಗೆ ಸಮನ್ಸ್‌ ಜಾರಿಗೊಳಿಸಿತ್ತು.  ಆದ್ರೆ ಯತ್ನಾಳ್ ಇಂದು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ 28 ಕ್ಕೆ ಮುಂದೂಡಿದೆ.

ಏನಿದು ಕೇಸ್?

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತನ ವಿಚಾರಣೆ ನಡೆಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಏಪ್ರಿಲ್‌ 6 ರಂದು ಸುದ್ದಿಗಾರರ ಜತೆ ಮಾತನಾಡಿದ್ದ ಶಾಸಕ ಯತ್ನಾಳ್‌, ” ಸಚಿವ ದಿನೇಶ್‌ ಗುಂಡೂರಾವ್‌ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿವಾದಾತ್ಮಕ ಹೇಳಿಕೆ ” ನೀಡಿದ್ದರು. ಈ ಕುರಿತು ತಬಸುಮ್‌ ಅವರು ಯತ್ನಾಳ್‌ ವಿರುದ್ಧ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜತೆಗೆ, ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಖಾಸಗಿ ದೂರು ದಾಖಲಿಸಿದ್ದರು.

ಈ ಹಿಂದೆ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ರದ್ದು ಮಾಡುವಂತೆ ಕೋರಿ ಶಾಸಕ ಯತ್ನಾಳ್‌ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಹೇಳಿಕೆಯನ್ನು ಕೀಳು ಅಭಿರುಚಿ ಎಂದಿದ್ದರು. ಆ ಬಳಿಕ ಹೇಳಿಕೆ ನೀಡಿದ್ದಾರೋ ಇಲ್ವೋ ಎಂದು ಪ್ರಶ್ನೆ ಮಾಡಿದರು. ಯತ್ನಾಳ್‌ ಪರ ವಕೀಲರು ಹೌದು ಹೇಳಿಕೆ ನೀಡಿದ್ದಾರೆ ಎಂದು ಒಪ್ಪಿಕೊಂಡಿದ್ದರು. ಈ ರೀತಿಯ ಪದ ಬಯಕೆ ಸಮಾಜಕ್ಕೆ ಯಾವ ರೀತಿಯ ಸಂದೇಶ ನೀಡುತ್ತದೆ. ವಯಕ್ತಿಕ ತೇಜೋವಧೆಗೆ ಏಕೆ ಇಳಿಕಯುತ್ತೀರಾ ಎಂದು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ