ಶಾಂತಿಯುತ ಅಲ್ಲ, ಇನ್ಮೇಲೆ ಕ್ರಾಂತಿಯುತ ಹೋರಾಟ: ಜಯಮೃತ್ಯುಂಜಯ ಶ್ರೀ ಎಚ್ಚರಿಕೆ

ಪಂಚಮಸಾಲಿ 2ಎ ಮೀಸಲಾತಿಗಾಗಿ ಸೋಮವಾರ ಬೆಳಗಾವಿಯ ಸುವರ್ಣಸೌಧದ ಹೊರಗೆ ನಡೆದ ಪ್ರತಿಭಟನೆ ಹಿಂಸಾರೂಪ ತಾಳಿದ್ದಲ್ಲದೆ, ಲಾಠಿ ಚಾರ್ಜ್​ ಕೂಡ ನಡೆದಿತ್ತು. ಘಟನೆ ವಿರುದ್ಧ ಇದೀಗ ಮತ್ತೊಂದು ಸುತ್ತಿನ ಪ್ರತಿಭಟನೆಗೆ ಪಂಚಮಸಾಲಿ 2A ಮೀಸಲಾತಿ ಹೋರಾಟಗಾರರು ಮುಂದಾಗಿದ್ದಾರೆ.ಇಂದು ರಾಜ್ಯಾದ್ಯಂತ ರಸ್ತೆ ತಡೆದು ಧರಣಿ ನಡೆಸಲು ಜಯಮೃತ್ಯುಂಜಯ ಶ್ರೀ ಕರೆ ನೀಡಿದ್ದಾರೆ.

ಶಾಂತಿಯುತ ಅಲ್ಲ, ಇನ್ಮೇಲೆ ಕ್ರಾಂತಿಯುತ ಹೋರಾಟ: ಜಯಮೃತ್ಯುಂಜಯ ಶ್ರೀ ಎಚ್ಚರಿಕೆ
ಜಯಮೃತ್ಯುಂಜಯ ಶ್ರೀ

Updated on: Dec 12, 2024 | 7:13 AM

ಬೆಂಗಳೂರು, ಡಿಸೆಂಬರ್ 12: ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಸೋಮವಾರ ನಡೆದ ಪಂಚಮಸಾಲಿ 2ಎ ಮೀಸಲಾತಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್​ ನಡೆಸಿದ್ದಕ್ಕೆ ಮತ್ತಷ್ಟು ಕೆರಳಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ನಮ್ಮ ಜನ ಇನ್ನಷ್ಟು ಪುಟಿದೇಳುತ್ತಾರೆ ಎಂದಿದ್ದಾರೆ. ಅಲ್ಲದೆ, ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್​ ಆಗಿದ್ದು ಹೇಗೆ? ಹಾಗೆ ಆಗಿದ್ದೇ ನಿಜವಾದರೆ ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಜಯಮೃತ್ಯುಂಜಯ ಶ್ರೀ ಆಗ್ರಹಿಸಿದ್ದಾರೆ. ಜತೆಗೆ, ನಿಮ್ಮ ಊರಲ್ಲಿ ರಸ್ತೆ ತಡದು ಹೋರಾಟ ಮಾಡಿ ಎಂದು ಎಲ್ಲಾ ಲಿಂಗಾಯತ ಸಮುದಾಯದವರಿಗೆ ಕರೆ ನೀಡಿದ್ದಾರೆ.

ಇತ್ತ ಲಾಠಿ ಚಾರ್ಜ್‌ ಸಮರ್ಥಿಸಿಕೊಂಡಂತೆ ಮಾತನಾಡಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಗಲಾಟೆ ಮಾಡುವ ಉದ್ದೇಶದಿಂದಲೇ ಹೋರಾಟಗಾರರು ಬಂದಿದ್ದರು ಎಂದಿದ್ದಾರೆ.

ಏತನ್ಮಧ್ಯೆ, ಪಂಚಮಸಾಲಿಗಳಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭವಿಷ್ಯ ನುಡಿದಿದ್ದಾರೆ. ಕ್ರಿಮಿನಲ್ ಸರ್ಕಾರ ಎಂದು ಬಿಜೆಪಿ ನಾಯಕ ಸಿಟಿ ರವಿ ಗುಡುಗಿದ್ದಾರೆ.

ರಾಜ್ಯದಾದ್ಯಂತ ರಸ್ತೆ ತಡೆಗೆ ಕರೆ

ಪಂಚಮಸಾಲಿ ಸಮುದಾಯದ ಮೇಲೆ ಲಾಠಿಚಾರ್ಜ್ ಖಂಡಿಸಿ ಇಂದು ರಾಜ್ಯಾದ್ಯಂತ ರಸ್ತೆ ತಡೆದು ಧರಣಿ ನಡೆಸಲು ಜಯಮೃತ್ಯುಂಜಯ ಶ್ರೀ ಕರೆ ನೀಡಿದ್ದಾರೆ. ನಿಮ್ಮ ನಿಮ್ಮ ಊರಲ್ಲಿ ರಸ್ತೆ ತಡೆದು ಹೋರಾಟ ಮಾಡಿ ಎಂದು ಅವರು ಹೇಳಿದ್ದಾರೆ. ಇಂದು ಹಿರೇಬಾಗೇವಾಡಿ ಟೋಲ್ ನಾಕಾ ಬಂದ್ ಮಾಡುತ್ತೇವೆ. ಯಾವುದೇ ಕಾರಣಕ್ಕೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಪ್ರತಿಭಟನೆಯಲ್ಲಿ ಪೊಲೀಸರಿಂದಲೇ ಕಲ್ಲು ತೂರಾಟ: ಸ್ವಾಮೀಜಿ ಗಂಭೀರ ಆರೋಪ

ಈ ಮಧ್ಯೆ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಪಂಚಮಸಾಲಿ ಮೀಸಲಾತಿ ನೀಡದಂತೆ ಮನವಿ ಸಲ್ಲಿಸಿದೆ. ಒಕ್ಕೂಟದ ಮನವಿಗೆ ಪರಿಶೀಲನೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದಿನಿಂದ ಮತ್ತೆ ಕಲಾಪ ನಡೆಯಲಿದ್ದು, ಲಾಠಿ ಜಾರ್ಜ್ ವಿಚಾರ ಸದನದ ಒಳಗೂ ಮತ್ತು ಹೊರಗೂ ಸದ್ದು ಮಾಡುವುದು ನಿಕ್ಕಿಯಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us