ಏಪ್ರಿಲ್ 20 ರಂದು ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ; ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಸಮಾವೇಶ

| Updated By: ಗಣಪತಿ ಶರ್ಮ

Updated on: Apr 17, 2024 | 11:26 AM

Narendra Modi in Karnataka: ಕಳೆದ ಭಾನುವಾರ ಮೈಸೂರು ಮತ್ತು ಮಂಗಳೂರಿಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ 20ರಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.

ಏಪ್ರಿಲ್ 20 ರಂದು ಮತ್ತೆ ಕರ್ನಾಟಕಕ್ಕೆ ಪ್ರಧಾನಿ ಮೋದಿ; ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಸಮಾವೇಶ
ನರೇಂದ್ರ ಮೋದಿ
Follow us on

ಬೆಂಗಳೂರು, ಏಪ್ರಿಲ್ 17: ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ (BJP JDA Alliance) ನಾಯಕರು ಈಗಾಗಲೇ ಹಲವು ಮೈತ್ರಿ ಸಮಾವೇಶ ನಡೆಸಿ ಒಗ್ಗಟ್ಟು ಪ್ರದರ್ಶನ ನಡೆಸಿದ್ದಾರೆ. ಕಳೆದ ಭಾನುವಾರ ಮೈಸೂರಿನಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಜತೆ ವೇದಿಕೆ ಹಂಚಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಬಳಿಕ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು. ಇದೀಗ ಮತ್ತೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಏಪ್ರಿಲ್ 20ರಂದು ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಒಂದೇ ದಿನ ರಾಜ್ಯದಲ್ಲಿ ಎರಡು ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಮತ ಯಾಚನೆ ಮಾಡಲಿದ್ದಾರೆ. ಬಳಿಕ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.

ಅರಮನೆ ಮೈದಾನದಲ್ಲಿ ಗುದ್ದಲಿ ಪೂಜೆ

ಪ್ರಧಾನಿ ಮೋದಿ ಸಾರ್ವಜನಿಕ ಚುನಾವಣಾ ಪ್ರಚಾರ ಸಮಾವೇಶ ಹಿನ್ನೆಲೆ ಅರಮನೆ ಮೈದಾನದಲ್ಲಿ ಪ್ರಚಾರ ವೇದಿಕೆ ನಿರ್ಮಾಣಕ್ಕೆ ಬಿಜೆಪಿಯಿಂದ ಗುದ್ದಲಿ ಪೂಜೆ ನೆರವೇರಿತು. ಅರಮನೆ ಮೈದಾನದಲ್ಲಿ ಪೂಜಾ ಕಾರ್ಯಕ್ರಮ ನಡೆಸಿ ಗುದ್ದಲಿ ಪೂಜೆ ಮಾಡಲಾಯಿತು. ಬೆಂಗಳೂರಿನ ಬಿಜೆಪಿ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಸಪ್ತಗಿರಿಗೌಡ, ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆ ಮಂಜುಳಾ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಭಾನುವಾರ ಮೈಸೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಜೆಡಿಎಸ್ ಬಿಜೆಪಿ ಮೈತ್ರಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಮತಯಾಚನೆ ಮಾಡಿದ್ದರು. ಅಲ್ಲದೆ, ಚಾಮರಾಜನಗರ ಸೇರಿದಂತೆ ಇತರ ಕ್ಷೇತ್ರಗಳ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್​ಶೋ: ಜನರಿಂದ ಜೈಕಾರ

ಬಳಿಕ ಮಂಗಳೂರಿಗೆ ತೆರಳಿದ್ದ ಮೋದಿ, ಪಕ್ಷದ ದಕ್ಷಿಣ ಕನ್ನಡ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಜೊತೆ ರೋಡ್ ಶೋ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:01 am, Wed, 17 April 24