ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಎಸ್ಪಿಪಿಯಾಗಿ ಅಶೋಕ್ ಎನ್ ನಾಯಕ್ ನೇಮಿಸಿದ ಸರ್ಕಾರ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ಗೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬಿ.ಎಸ್.ಯಡಿಯೂರಪ್ಪ ಬಂಧನಕ್ಕೂ ಸಿದ್ಧತೆ ನಡೆಸಿದೆ. ಇನ್ನು ಸಂತ್ರಸ್ತೆಯ ಸಹೋದರ ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
![ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್: ಎಸ್ಪಿಪಿಯಾಗಿ ಅಶೋಕ್ ಎನ್ ನಾಯಕ್ ನೇಮಿಸಿದ ಸರ್ಕಾರ](https://images.tv9kannada.com/wp-content/uploads/2024/06/bs-yediyurappa_.jpg?w=1280)
ಬೆಂಗಳೂರು, ಜೂನ್ 12: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (BS Yediyurappa) ಬಂಧಿಸುವಂತೆ ನಿರ್ದೇಶನ ಕೋರಿ ಪೋಕ್ಸೋ ಕೇಸ್ (POCSO Case) ಸಂತ್ರಸ್ತೆಯ ಸಹೋದರನಿಂದ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಯಡಿಯೂರಪ್ಪ ಬಂಧನಕ್ಕೂ ಸರ್ಕಾರ ಸಿದ್ಧತೆ ನಡೆಸಿದೆ.
ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿರುವ ಸಂತ್ರಸ್ತೆಯ ಸಹೋದರ ಘಟನೆ ನಡೆದು ಹಲವು ತಿಂಗಳಾದರೂ ಪೊಲೀಸರಿಂದ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ಕನಿಷ್ಠ 41A ಅಡಿ ನೋಟಿಸ್ ನೀಡಿ ಅವರನ್ನು ವಿಚಾರಣೆಗೆ ಕರೆದಿಲ್ಲ.
ಇದನ್ನೂ ಓದಿ: ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ
ಈ ಮಧ್ಯೆ ದೂರು ನೀಡಿದ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಬಂಧಿಸುವಂತೆ ನಿರ್ದೇಶಿಸಲು ಮನವಿ ಮಾಡಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು.
ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ದೂರುದಾರೆ ಸಾವು
ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲೇ ಪ್ರಕರಣ ಸದ್ದುಮಾಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.