ಅಧಿಕಾರ ಶಾಶ್ವತ ಅಲ್ಲ, ಚಕ್ರ ತಿರುಗುತ್ತಲೇ ಇರತ್ತೆ: ರಾಮನಗರ ಹೆಸರು ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಮಾರ್ಮಿಕ ಹೇಳಿಕೆ
ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನಲ್ಲೇ, ಇದೀಗ ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕ ಹೇಳಿಕೆ ನೀಡಿದ್ದಾರೆ. ಆ ಮೂಲಕ ಪರೋಕ್ಷವಾಗಿ ಡಿಕೆ ಶಿವಕುಮಾರ್ಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು, ಮೇ 23: ಅಧಿಕಾರಕ್ಕೆ ಯಾರು ಶಾಶ್ವತರಲ್ಲ. ಚಕ್ರ ತಿರುಗುತ್ತಲೇ ಇರುತ್ತದೆ. ಸಮಯ ಸರಿಯಾಗಿಲ್ಲದಿದ್ದರೆ ಏನು ಮಾಡಲಾಗದು. ನೀರು ಇದ್ದಾಗ ಅಷ್ಟೇ ಜಿಗಿಯಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ಮಾರ್ಮಿಕವಾಗಿ ಹೇಳಿದ್ದಾರೆ. ರಾಮನಗರ (Ramanagara) ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ವಿಚಾರವಾಗಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ, ಡಿಸಿಎಂ ಡಿಕೆ ಶಿವಕುಮಾರ್ಗೆ (Dk Shivakumar) ಟಾಂಗ್ ಕೊಟ್ಟಿದ್ದಾರೆ.
ಉತ್ತರ ಪ್ರದೇಶದಲ್ಲೂ ಅನೇಕ ಊರುಗಳ ಹೆಸರು ಬದಲಾವಣೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲೂ ಹೊಸಪೇಟೆ, ವಿಜಯನಗರ ನಾಮಕರಣ ಮಾಡಲಾಗಿದೆ. ಅದೇ ರೀತಿ ಏನೋ ಉದ್ದೇಶ ಇಟ್ಟುಕೊಂಡು ಡಿಸಿಎಂ ಡಿಕೆ ಶಿವಕುಮಾರ್ ಈ ರೀತಿ ಮಾಡಿರಬಹುದು. ಆದರೆ ಅಧಿಕಾರಕ್ಕೆ ಯಾರೂ ಶಾಶ್ವತರಲ್ಲ, ಚಕ್ರ ತಿರುಗುತ್ತಲೇ ಇರುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ವಿಭಜನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಮಾತನಾಡಿದ್ದೇವೆ. ಸಮಯ ನಮ್ಮ ಪರವಾಗಿ ಇಲ್ಲದೆ ಇದ್ದಾಗ ಏನು ಮಾಡಲಾಗದು. ಜಿಗಿಯಬೇಕಾದರೆ ನೀರು ಇರಬೇಕು. ನೀರು ಇದ್ದಾಗ ಜಿಗಿಯಬಹುದು. ಅಲ್ಲಿಯವರೆಗೂ ಕಾಯುತ್ತೇವೆ ಎಂದು ಅವರು ಹೇಳಿದರು.
ಬೆಳಗಾವಿ ರಾಜಕಾರಣದ ವಿಷಯಕ್ಕೆ ಸಂಬಂಧಿಸಿದ ಸತೀಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್ ಬಣಗಳ ಮಧ್ಯೆ ಮುಸುಕಿನ ಗುದ್ದಾಟ ನಡೆದಿತ್ತು. ಹಲವು ಬಾರಿ ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡಿದ್ದರು. ಇದೀಗ ರಾಮನಗರ ಹೆಸರು ಬದಲಾವಣೆ ಸಂದರ್ಭ ಸತೀಶ್ ಮಾರ್ಮಿಕವಾಗಿ ಮಾತನಾಡಿರುವುದು ಕುತೂಹಲ ಸೃಷ್ಟಿಸಿದೆ.
ಮತ್ತೊಂದೆಡೆ, ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಬಗ್ಗೆ ಕೆಲವಾರು ತಿಂಗಳುಗಳ ಹಿಂದೆಯೇ ಡಿಕೆ ಶಿವಕುಮಾರ್ ಪ್ರಸ್ತಾಪಿಸಿದ್ದರು. ಜೆಡಿಎಸ್ ಮುಖಂಡ, ಕೇಂದ್ರ ಸಚಿವ ಕುಮಾರಸ್ವಾಮಿ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಒಂದು ವೇಳೆ ಹೆಸರು ಬದಲಿಸಿದ್ದೇ ಆದಲ್ಲಿ ಮತ್ತೆ ತಾವು ಅಧಿಕಾರಕ್ಕೆ ಬಂದಾಗ ನೋಡಿಕೊಳ್ಳುವುದಾಗಿ ಎಚ್ಚರಿಕೆಯನ್ನೂ ನೀಡಿದ್ದರು. ಈ ಎಲ್ಲದರ ಮಧ್ಯೆ, ಹೆಸರು ಬದಲಾವಣೆ ಪ್ರಸ್ತಾವನೆಗೆ ಗುರುವಾರ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ.
ಇದನ್ನೂ ಓದಿ: ಅವರ ಜಮೀನುಗಳಿಗೆ ಬೆಲೆ ಏರಬಹುದು: ರಾಮನಗರ ಹೆಸರು ಬದಲಾವಣೆಗೆ ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಧಾರದ ಬಗ್ಗೆ ಕುಮಾರಸ್ವಾಮಿ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಡಿಕೆ ಶಿವಕುಮಾರ್ ತಮ್ಮ ಜಮೀನಿನ ಮೌಲ್ಯ ಹೆಚ್ಚಿಸಿಕೊಳ್ಳಲು ಈ ಕ್ರಮ ಕೈಗೊಂಡಿರಬಹುದು ಎಂದು ಟೀಕಾ ಪ್ರಹಾರ ನಡೆಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:28 pm, Fri, 23 May 25