AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ ವಿರುದ್ಧ ಆಸ್ತಿ ಗಳಿಕೆ ಕೇಸ್​: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಿಬಿಐ ಅರ್ಜಿ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ‌ ಮೀರಿದ ಆಸ್ತಿ ಗಳಿಕೆ ಕೇಸ್​​ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಡಿಕೆ ಶಿವಕುಮಾರ್​​ನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಇಂದು ಸಿಬಿಐ ಹೈಕೋರ್ಟ್​ಗೆ ಮನವಿ ಸಲ್ಲಿಸಲಾಗಿದೆ.

ಡಿಕೆ ಶಿವಕುಮಾರ್​ ವಿರುದ್ಧ ಆಸ್ತಿ ಗಳಿಕೆ ಕೇಸ್​: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಿಬಿಐ ಅರ್ಜಿ
ಡಿಸಿಎಂ ಡಿ.ಕೆ.ಶಿವಕುಮಾರ್
Ramesha M
| Edited By: |

Updated on:Jan 05, 2024 | 3:35 PM

Share

ಬೆಂಗಳೂರು, ಜನವರಿ 05: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಆದಾಯ‌ ಮೀರಿದ ಆಸ್ತಿ ಗಳಿಕೆ ಕೇಸ್​​ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಡಿಕೆ ಶಿವಕುಮಾರ್​​ನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಇಂದು ಸಿಬಿಐ ಹೈಕೋರ್ಟ್​ಗೆ ಮನವಿ ಸಲ್ಲಿಸಲಾಗಿದೆ. ಇದೇ ವೇಳೆ ಡಿಕೆ ಶಿವಕುಮಾರ್​ ವಿರುದ್ಧ CBI ತನಿಖೆಗೆ ಸಮ್ಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಯತ್ನಾಳ್​ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೂಡ ನಡೆಯಲಿದೆ.

ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ ಸಮ್ಮತಿ ನೀಡಿತ್ತು. ಸಮ್ಮತಿ ಆಧರಿಸಿ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಈಗ ಸಮ್ಮತಿ ಹಿಂಪಡೆದು ಪ್ರಕರಣ ಲೋಕಾಯುಕ್ತ ಪೊಲೀಸರ ತನಿಖೆಗೆ ನೀಡಲಾಗಿದ್ದು, ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐನಿಂದ ಅರ್ಜಿ ಸಲ್ಲಿಸಲಾಗಿದೆ. ಸಿಬಿಐ ಕೂಡ ತನ್ನ ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡುವ ಸಾಧ್ಯತೆ ಇದೆ.

ಅರ್ಜಿ ಸಲ್ಲಿಸುವುದಕ್ಕೆ ಸಿಬಿಐನವರಿಗೆ ಹಕ್ಕಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಹೈಕೋರ್ಟ್​​ಗೆ ಸಿಬಿಐ ಅರ್ಜಿ ಸಲ್ಲಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅರ್ಜಿ ಸಲ್ಲಿಸುವುದಕ್ಕೆ ಸಿಬಿಐನವರಿಗೆ ಹಕ್ಕಿದೆ. ನಾವು ವಾದ ಮಾಡುತ್ತೇವೆ. ನ್ಯಾಯಲಯದ ಮೇಲೆ ಗೌರವ ಇದೆ. ನ್ಯಾಯಾಲಯ​ ತೀರ್ಮಾನ ಮಾಡುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ವಿರುದ್ಧ ಯತ್ನಾಳ್ ರಿಟ್ ಅರ್ಜಿ: ಜ. 5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಡಿಸಿಎಂ ಡಿಕೆ ಶಿವಕುಮಾರ್​ಗೆ ಇತ್ತೀಚೆಗೆ ಮತ್ತೊಂದು ಸಂಕಷ್ಟ ಎದುರಾಗಿತ್ತು. ಆಕ್ರಮ ಆಸ್ತಿ ಸಂಪಾದನೆ ಸಂಬಂಧ ಖಾಸಗಿ ಚಾನೆಲ್‌ನಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ಕೋರಿ ಕೇರಳ ಮೂಲದ ಜೈಹಿಂದ್ ಚಾನೆಲ್‌ಗೆ ಸಿಬಿಐ ನೋಟಿಸ್ ಜಾರಿ ಮಾಡಿತ್ತು. ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಬೆಂಗಳೂರು ಘಟಕವು ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿತ್ತು. ಇದೇ ತಿಂಗಳ 11 ರಂದು ತನಿಖಾಧಿಕಾರಿ ಕೋರಿದ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚಿಸಿತ್ತು.

ಇತ್ತೀಚೆಗೆ ಡಿಕೆ.ಶಿವಕುಮಾರ್ ಮೇಲಿನ ಸಿಬಿಐ ತನಿಖೆಯನ್ನು ಕರ್ನಾಟಕ ಸರ್ಕಾರ ಕಾನೂನು ಬದ್ಧವಾಗಿ ಹಿಂದಿನ ಸರ್ಕಾರ ನೀಡಿಲ್ಲ ಎಂಬ ಕಾರಣಕ್ಕಾಗಿ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದುಕೊಂಡಿತ್ತು. ಇದರ ಬೆನ್ನಲ್ಲೇ, ಇದೀಗ ಸಿಬಿಐ ನೋಟೀಸ್ ನೀಡಿರುವುದು ಮಹತ್ವ ಪಡೆದುಕೊಂಡಿತ್ತು.

ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ಹೂಡಿಕೆ ವಿವರ ಕೇಳಿ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್

ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿದೆ. 2013 ಮತ್ತು 2018 ರ ನಡುವೆ 74 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಅದು ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಲಾಗಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಈ ಹಿಂದೆ ಸಲ್ಲಿಸಿದ್ದ ಅನುಮತಿಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ನವೆಂಬರ್ 23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಹಿಂದಿನ ಸರ್ಕಾರ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಿದ್ದರು. ಹಾಗಾಗಿ, ಅದು ಕಾನೂನು ರೀತಿಯಾಗಿ ಸರಿಯಾಗಿಲ್ಲ. ಈ ಹಿನ್ನೆಲೆ ಅನುಮತಿಯನ್ನು ಹಿಂಪಡೆಯಲು ನಿರ್ಧರಿಸಲಾಗಿತ್ತು. ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಅಂದರೆ ಜನವರಿ 5ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ವಿಚಾರಣೆಯನ್ನು ಮುಂದೂಡಿದೆ. ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28, 2023 ರಂದು ಹಿಂತೆಗೆದುಕೊಳ್ಳಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:21 pm, Fri, 5 January 24

Follow Us