
ನವದೆಹಲಿ/ಕರ್ನಾಟಕ, ಸೆಪ್ಟೆಂಬರ್ 11: 2028ರ ವಿಧಾನಸಭೆ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡಲ್ಲ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಭಾರಿ ರಾಜಕೀಯ ಚರ್ಚೆಗಳಿಗೆ ಕಾರಣವಾಗಿತ್ತು. ಇದೀಗ ಈ ವಿಚಾರವಾಗಿ ಕಾಂಗ್ರೆಸ್ ವರಿಷ್ಠ ಮತ್ತು ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿದ್ದರಾಮಯ್ಯನವರಿಗೆ ಒಂದಿಷ್ಟು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ನಿಮ್ಮ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು. ಪಕ್ಷಕ್ಕೆ ನಿಮ್ಮಂತಹ ಹಿರಿಯ ನಾಯಕರ ಅವಶ್ಯಕತೆ ಬಹಳ ಇದೆ. ಹೀಗಾಗಿ ಇಂತಹ ಹೇಳಿಕೆ ನೀಡಬೇಡಿ ಎಂದು ರಾಹುಲ್ ತಿಳಿಸಿದ್ದಾರಂತೆ.
ಇನ್ನು ರಾಹುಲ್ ಗಾಂಧಿ ಅವರಿಗೆ ತಮ್ಮ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಕೂಡ ಸ್ಪಷ್ಟನೆ ನೀಡಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ಬಗ್ಗೆ ತಾನು ಹೇಳಿದ್ದೇನೆಯೇ ಹೊರತು, ರಾಜಕೀಯ ನಿವೃತ್ತಿ ಬಗ್ಗೆ ಅಲ್ಲ ಎಂದು ತಿಳಿಸಿದ್ದಾರೆ. ಅದೇನೇ ಇದ್ದರೂ ಇಂತಹ ಹೇಳಿಕೆಗಳನ್ನು ನೀಡದಂತೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಬಳಿ ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ 2028ರ ವಿಧಾನಸಭೆ ಚುನಾವಣೆಯಲ್ಲಿ ತಾನು ಸ್ಪರ್ಧೆ ಮಾಡಲ್ಲ ಎಂದು ಘೋಷಿಸಿದ್ದರು. ಅವರ ಈ ಹೇಳಿಕೆಗೆ ಅದೇ ಕ್ಷಣದಲ್ಲೆ ವಿರೋಧ ವ್ಯಕ್ತಪಡಿಸಿದ್ದ ಅಭಿಮಾನಿಗಳು ನೀವಿನ್ನೂ 10 ವರ್ಷ ರಾಜಕೀಯದಲ್ಲಿ ಇರಬೇಕೆಂದು ಒತ್ತಾಯಿಸಿರುವ ಘಟನೆಯೂ ನಡೆದಿತ್ತು. ಆ ಬಳಿಕ ತಮ್ಮ ಹೇಳಿಕೆ ಸಂಬಂಧ ಸಾಮಾಜಿಕ ಜಾಲತಾಣಗಲ್ಲಿ ಸ್ಪಷ್ಟನೆ ಹಂಚಿಕೊಂಡಿದ್ದ ಮಾಜಿ ಸಿಎಂ, ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ. ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ ಎಂದಿದ್ದರು.
ವರದಿ: ನಟರಾಜ್, ಟಿವಿ9 ದೆಹಲಿ
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:49 pm, Fri, 11 September 26