AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ಮಕ್ಕಳ ಹೊಟ್ಟೆಮೇಲೆ ಹೊಡೆದ ವಾರ್ಡನ್; 3 ದಿನ ಅನ್ನ-ನೀರಿಲ್ಲದೆ ಪಕ್ಕದ ಹಾಸ್ಟೆಲ್‌ನಲ್ಲಿ ಕೈಚಾಚಿದ ವಿದ್ಯಾರ್ಥಿಗಳು!

ರಾಯಚೂರಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ಬಡ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಸಿವಿನ ನೋವು ತಾಳಲಾರದೆ ಪಕ್ಕದ ಹಾಸ್ಟೆಲ್‌ನಲ್ಲಿ ಅನ್ನ ಕೇಳಿ ಪಡೆದ ನೌಕರರು, ಕೊನೆಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬೇಜವಾಬ್ದಾರಿಯಿಂದ ವರ್ತಿಸಿದ ವಾರ್ಡನ್ ಮೆಹಬೂಬ್‌ನನ್ನು ತಕ್ಷಣವೇ ವರ್ಗಾವಣೆ ಮಾಡುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.

ಬಡ ಮಕ್ಕಳ ಹೊಟ್ಟೆಮೇಲೆ ಹೊಡೆದ ವಾರ್ಡನ್; 3 ದಿನ ಅನ್ನ-ನೀರಿಲ್ಲದೆ ಪಕ್ಕದ ಹಾಸ್ಟೆಲ್‌ನಲ್ಲಿ ಕೈಚಾಚಿದ ವಿದ್ಯಾರ್ಥಿಗಳು!
ವಿದ್ಯಾರ್ಥಿಗಳಿಂದ ಪ್ರತಿಭಟನೆ
ಭೀಮೇಶ್​​ ಪೂಜಾರ್
| Edited By: |

Updated on: Jun 06, 2026 | 10:37 AM

Share

ರಾಯಚೂರು, ಜೂನ್ 06: ಕಡು ಬಡತನದ ಹಿನ್ನೆಲೆಯಿಂದ ಬಂದು, ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಸತಿ ನಿಲಯಗಳನ್ನೇ ನಂಬಿಕೊಂಡಿರುವ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲೊಂದು ಭೀಕರ ಅನ್ಯಾಯ ನಡೆದಿದೆ. ಜಿಲ್ಲೆಯ (Raichur) ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ವಿದ್ಯಾರ್ಥಿಗಳು ತೀವ್ರ ಪರದಾಟ ನಡೆಸಿದ್ದಾರೆ. ಹಸಿವಿನ ನೋವು ತಾಳಲಾರದೇ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಎದುರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ.

ಮುಖ್ಯಾಂಶಗಳು

  • ರಾಯಚೂರಿನ ಸರ್ಕಾರಿ ಹಾಸ್ಟೆಲ್‌ನಲ್ಲಿ ಮೂರು ದಿನಗಳಿಂದ ಅನ್ನ-ನೀರಿಲ್ಲದೆ ವಿದ್ಯಾರ್ಥಿಗಳ ಪರದಾಟ.
  • ಹಸಿವು ತಾಳಲಾರದೆ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಪ್ರತಿಭಟನೆ.
  • ಬೇಜವಾಬ್ದಾರಿ ವಾರ್ಡನ್ ಮೆಹಬೂಬ್ ವಿರುದ್ಧ ವಿದ್ಯಾರ್ಥಿಗಳಿಂದ ತೀವ್ರ ಆಕ್ರೋಶ.

ಬೇರೆ ಹಾಸ್ಟೆಲ್ ಮುಂದೆ ಅನ್ನಕ್ಕಾಗಿ ಕೈಚಾಚಿದ್ವಿ ಎಂದ ವಿದ್ಯಾರ್ಥಿಗಳು

ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ವಿವಿಧ ಗ್ರಾಮೀಣ ಭಾಗಗಳ ನೂರಾರು ಬಡ ವಿದ್ಯಾರ್ಥಿಗಳು ಈ ಹಾಸ್ಟೆಲ್‌ನಲ್ಲಿದ್ದಾರೆ. ಕಳೆದ ಮೂರು ದಿನಗಳಿಂದ ಇಲ್ಲಿ ಒಂದು ಹೊತ್ತಿನ ಊಟವಾಗಲಿ ಅಥವಾ ಕುಡಿಯುವ ನೀರಾಗಲಿ ಸಿಕ್ಕಿಲ್ಲ. ಆರಂಭದಲ್ಲಿ ವಿದ್ಯಾರ್ಥಿಗಳು ತಮ್ಮ ಕೈಲಿದ್ದ ಅಲ್ಪಸ್ವಲ್ಪ ಹಣದಲ್ಲೇ ಹೋಟೆಲ್‌ನಲ್ಲಿ ತಿಂದಿದ್ದಾರೆ. ಹಣ ಖಾಲಿಯಾದ ಮೇಲೆ ವಿಧಿಯಿಲ್ಲದೇ ಪಕ್ಕದ ಮತ್ತೊಂದು ಹಾಸ್ಟೆಲ್‌ಗೆ ತೆರಳಿ, ಅಲ್ಲಿನ ಮಕ್ಕಳ ಬಳಿ ಆಹಾರ ಕೇಳಿ ಪಡೆದು ಹಸಿವು ನೀಗಿಸಿಕೊಂಡಿದ್ದಾರೆ. ಬಿರು ಬಿಸಿಲಿನ ನಡುವೆಯೂ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಎದುರು ಧರಣಿ ಕುಳಿತ ವಿದ್ಯಾರ್ಥಿಗಳು, ನಮಗೆ ಅನ್ನ ಕೊಡಿ, ನೀರು ಕೊಡಿ ಎಂದು ಕಣ್ಣೀರಿಟ್ಟಿದ್ದಾರೆ.

ವಾರ್ಡನ್ ಮಹಾಶಯನ ಉಡಾಫೆ ವರ್ತನೆ!

ವಿದ್ಯಾರ್ಥಿಗಳ ಈ ದುಸ್ಥಿತಿಗೆ ಹಾಸ್ಟೆಲ್ ವಾರ್ಡನ್ ಮೆಹಬೂಬ್ ಎಂಬಾತನೇ ನೇರ ಕಾರಣ ಎಂದು ಮಕ್ಕಳು ಆರೋಪಿಸಿದ್ದಾರೆ. ವಾರ್ಡನ್ ತಾನೇ ಖುದ್ದಾಗಿ ವಿದ್ಯಾರ್ಥಿಗಳಿಗೆ ಫೋನ್ ಮಾಡಿ ಹಾಸ್ಟೆಲ್ ಆರಂಭವಾಗಿದೆ, ಬನ್ನಿ ಎಂದು ಕರೆಸಿಕೊಂಡಿದ್ದನು. ಆದರೆ ಮಕ್ಕಳು ಬಂದ ಮೇಲೆ ಕನಿಷ್ಠ ಸೌಲಭ್ಯವನ್ನೂ ನೀಡಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ, ನೀವು ಯಾರಿಗೆ ಬೇಕಾದರೂ ದೂರು ಕೊಡಿ, ಡಿಸಿಗೆ (DC) ಬೇಕಾದರೂ ಹೇಳಿ, ಡಿಡಿಗೆ (DD) ಬೇಕಾದರೂ ಹೇಳಿ ಎಂದು ಉಡಾಫೆಯಾಗಿ ಉತ್ತರಿಸಿದ್ದಾನೆ ಎಂದು ವಿದ್ಯಾರ್ಥಿ ವಿಕಾಸ್ ರಾಠೋಡ್ ಆರೋಪಿಸಿದ್ದಾರೆ.

ಇದನ್ನೂ ಓದಿ ಸರ್ಕಾರಿ ಅಧಿಕಾರಿಗಳಿನ್ನು ಬೆಳಗ್ಗೆ 10 ಗಂಟೆಗೆ ಆಫೀಸ್​ನಲ್ಲಿರಲೇಬೇಕು: ಇಲ್ಲಾಂದ್ರೆ ಇಲಾಖಾ ಮುಖ್ಯಸ್ಥರಿಗೆ ಹೋಗುತ್ತೆ AI ರಿಪೋರ್ಟ್!

ವಾರ್ಡನ್ ವರ್ಗಾವಣೆಗೆ ವಿದ್ಯಾರ್ಥಿಗಳ ಪಟ್ಟು

ವಿದ್ಯಾರ್ಥಿಗಳು ಇಲಾಖೆಯ ಕಚೇರಿ ಎದುರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಂತೆ ಎಚ್ಚೆತ್ತ ವಾರ್ಡನ್ ಮೆಹಬೂಬ್ ದಿಢೀರನೆ ಸ್ಥಳದಲ್ಲಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಆಕ್ರೋಶಗೊಂಡಿರುವ ವಿದ್ಯಾರ್ಥಿಗಳು, ನಮಗೆ ಇಂತಹ ಬೇಜವಾಬ್ದಾರಿ ವಾರ್ಡನ್ ಬೇಡವೇ ಬೇಡ, ತಕ್ಷಣ ಇವನನ್ನು ವರ್ಗಾವಣೆ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More