ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ವರದಿ ಪ್ರಕಟ; ರಾಜ್ಯದಲ್ಲಿ 9ನೇ ಸ್ಥಾನಕ್ಕಿಳಿದ ರಾಯಚೂರು ಜಿಲ್ಲೆ

| Updated By: preethi shettigar

Updated on: Sep 06, 2021 | 9:35 AM

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಬೆಳೆ ಸಮೀಕ್ಷೆಯಲ್ಲಿ ಕೊಂಚ ಹಿನ್ನಡೆಯಾಗಿದೆ. ಬೆಳೆ ಸಮೀಕ್ಷೆ ಆ್ಯಪ್​ನಲ್ಲಿ ಒಂದೆರಡು ಸಮಸ್ಯೆಗಳಿದ್ದು, ಆ ಸಮಸ್ಯೆಗಳ ನಿವಾರಣೆಗಾಗಿ ಈಗಾಗಲೇ ಕೃಷಿ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ತಿಳಿಸಿದ್ದಾರೆ.

ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ವರದಿ ಪ್ರಕಟ; ರಾಜ್ಯದಲ್ಲಿ 9ನೇ ಸ್ಥಾನಕ್ಕಿಳಿದ ರಾಯಚೂರು ಜಿಲ್ಲೆ
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್
Follow us on

ರಾಯಚೂರು: 2021- 2022ನೇ ಸಾಲಿನ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆಯಲ್ಲಿ ರಾಜ್ಯದಲ್ಲಿಯೇ ರಾಯಚೂರು ಜಿಲ್ಲೆ 9ನೇ ಸ್ಥಾನ ಪಡೆದಿದ್ದು, ಜಿಲ್ಲೆಯ ಪ್ರತಿಯೊಬ್ಬ ರೈತರು ತಮ್ಮ ಬೆಳೆಗಳನ್ನು ಸ್ವತಃ ರೈತರೇ ಸಮೀಕ್ಷೆ ನಡೆಸಬೇಕೆಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹೇಳಿದ್ದಾರೆ

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಬೆಳೆ ಸಮೀಕ್ಷೆಯಲ್ಲಿ ಕೊಂಚ ಹಿನ್ನಡೆಯಾಗಿದೆ. ಬೆಳೆ ಸಮೀಕ್ಷೆ ಆ್ಯಪ್​ನಲ್ಲಿ ಒಂದೆರಡು ಸಮಸ್ಯೆಗಳಿದ್ದು, ಆ ಸಮಸ್ಯೆಗಳ ನಿವಾರಣೆಗಾಗಿ ಈಗಾಗಲೇ ಕೃಷಿ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ತಿಳಿಸಿದ್ದಾರೆ.

ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವ ಯೋಜನೆಯನ್ನು ಸರ್ಕಾರದಿಂದ ಪ್ರಾರಂಭಿಸಲಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ರೈತರು ಇದರ ಸದುಪಯೋಗ ಮಾಡಿಕೊಳ್ಳಬೇಕು. ಹಂಗಾಮಿನಲ್ಲಿ ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಅಪ್‌ ಲೋಡ್ ಮಾಡಬಹುದಾಗಿದೆ. ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖಿಕ ಇಲಾಖೆ ಜಂಟಿ ಸಹಯೋಗದಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹೇಳಿದ್ದಾರೆ.

ರೈತರು ಸ್ಮಾರ್ಟ್ ಮೊಬೈಲ್ ಫೋನ್ ಉಪಯೋಗಿಸಿ ಆ್ಯಪ್ ಅನ್ನು ಗೂಗಲ್‌ನ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ರೈತರ ಪರವಾಗಿ ಅವರ ಕುಟುಂಬದ ಸದಸ್ಯರು, ಸಂಬಂಧಿಕರು ಅಥವಾ ಕಂದಾಯ, ಕೃಷಿ ಇಲಾಖೆಯಿಂದ ನಿಯೋಜನೆಗೊಂಡ ಅದೇ ಗ್ರಾಮದ ಖಾಸಗಿ ವ್ಯಕ್ತಿಗಳ ಸಹಾಯದೊಂದಿಗೆ ನಿರ್ವಹಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹೇಳಿದ್ದಾರೆ.

ಮೊಬೈಲ್ ಫೋನ್ ಸಂಖ್ಯೆಗೆ ಒಟಿಪಿ ಪಡೆದು ಆ ಮೂಲಕ ಜಮೀನುಗಳಲ್ಲಿನ ಹಿಸ್ಸಾವಾರು ಬೆಳೆಗಳ ಮಾಹಿತಿ ದಾಖಲಿಸಬಹುದು ನಿಗದಿತ ಸಮಯದಲ್ಲಿ ಮಾಹಿತಿ ಅಪ್‌ಲೋಡ್ ಮಾಡದಿದ್ದಲ್ಲಿ ಖಾಸಗಿ ವ್ಯಕ್ತಿಗಳಿಂದ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಳಸಿ ಮಾಹಿತಿ ದಾಖಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ತಿಳಿಸಿದ್ದಾರೆ.

ಸಮೀಕ್ಷೆಯ ಮಾಹಿತಿಯನ್ನು ಸಾಂಖ್ಯಿಕ ಇಲಾಖೆಯ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆ, ವಿಸ್ತೀರ್ಣ ಎಣಿಕಾ ಕಾರ್ಯದಲ್ಲಿ ಬಳಸಲು ಅನುಮತಿಸಲಾಗಿದೆ. ಪ್ರಾಕೃತಿಕ ವಿಕೋಪದ ಸಂದರ್ಭ ಬೆಳೆ ಹಾನಿ ಸಹಾಯಧನ ನೀಡಲು ವರದಿ ತಯಾರಿಸಲು ಬಳಸಲಾಗುವುದು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈಗಾಗಲೇ ರೈತರ ಮಕ್ಕಳಿಗಾಗಿ ವಿದ್ಯಾರ್ಥಿವೇತನ ಯೋಜನೆಗೆ ಚಾಲನೆ ನೀಡಲಿದ್ದು, ಸಾಂಕೇತಿಕವಾಗಿ ಜಿಲ್ಲೆಯಿಂದ 4 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹೇಳಿದ್ದಾರೆ.

ಇದನ್ನೂ ಓದಿ:
ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಪರ ನಿಂತ ಬಿಜೆಪಿ ಸಂಸದ; ಅನ್ನದಾತರನ್ನು ಅರ್ಥ ಮಾಡಿಕೊಳ್ಳಲು ಸಲಹೆ

ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ